NIA ತನಿಖೆಗೆ ಕೇರಳದ ಚಿನ್ನದ ಸ್ಮಗಲಿಂಗ್ ಪ್ರಕರಣ
ತಿರುವನಂತಪುರಂ, ಜುಲೈ 9: ಕೇರಳದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿ, ಸಿಎಂ ಕಚೇರಿ ಬಾಗಿಲು ತಟ್ಟಿರುವ ಚಿನ್ನದ ಸ್ಮಗಲಿಂಗ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಕೈಗೆತ್ತಿಕೊಳ್ಳಲಿದೆ.
Recommended Video
ಈ ಪ್ರಕರಣದ ತನಿಖೆ ಕುರಿತಂತೆ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಬಹುದು. ರಾಜ್ಯ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಎನ್ಐಎ ಈ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ತಾಂತ್ರಿಕ ನೆರವಿನ ಅಗತ್ಯವಿದೆ ಎಂದು ಸಂಬಂಧಪಟ್ಟ ತನಿಖಾಧಿಕಾರಿಗಳಿಗೆ ಈಗಾಗಲೇ ಸೂಚನೆ ಕಳಿಸಿದೆ. ಪ್ರಮುಖ ಆರೋಪಿಗಳು ನಾಪತ್ತೆಯಾಗಿದ್ದಾರೆ. ಲಭ್ಯ ಮಾಹಿತಿ ಹಾಗೂ ದಾಖಲೆಯ ಆಧಾರದ ಮೇಲೆ ಆರೋಪಿಗಳ ಪಟ್ಟಿಯನ್ನು ಎನ್ಐಎ ಪಡೆದುಕೊಂಡಿದೆ.
ಚಿನ್ನದ ಸ್ಮಗಲಿಂಗ್ ಗೂ ಸಿಎಂ ಕಚೇರಿಗೂ ಯಾವುದೇ ಸಂಬಂಧವಿಲ್ಲ. ರಾಜತಾಂತ್ರಿಕ ಕಚೇರಿ ವಿಳಾಸ ಇದ್ದಿದ್ದರಿಂದ ಈ ಬಗ್ಗೆ ಕೇಳಲು ಸಿಎಂ ಕಚೇರಿಗೆ ಅಧಿಕಾರಿಗಳು ಕರೆ ಮಾಡಿದ್ದರು ಅಷ್ಟೇ ಎಂದು ಪಿಣರಾಯಿ ವಿಜಯನ್ ಅವರ ಕಚೇರಿ ಪ್ರತಿಕ್ರಿಯಿಸಿದೆ.

ರಾಜತಾಂತ್ರಿಕ ಕಚೇರಿಯ ಮಾಜಿ ಸಿಬ್ಬಂದಿ ಸ್ವಪ್ನ ಸುರೇಶ್
ರಾಜತಾಂತ್ರಿಕ ರಕ್ಷಣೆ ಹೊಂದಿರುವ ''ಡಿಪ್ಲೊಮ್ಯಾಟಿಕ್ ಬ್ಯಾಗೇಜ್'' ನಲ್ಲಿದ್ದ 30 ಕೆಜಿ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಈ ಚಿನ್ನ ಅಕ್ರಮ ಸಾಗಣೆಯ ಆರೋಪಿ ರಾಜತಾಂತ್ರಿಕ ಕಚೇರಿಯ ಮಾಜಿ ಸಿಬ್ಬಂದಿ ಸ್ವಪ್ನ ಸುರೇಶ್ ಎಂದು ಆರೋಪಿಸಲಾಗಿದೆ.
ಸಿಎಂ ಕಚೇರಿಯ ಮಾಜಿ ಕಾನ್ಸುಲೆಟ್ ಸರಿತಾ ನಾಯರ್, ಸ್ವಪ್ನ ಸುರೇಶ್ ಅಲ್ಲದೆ ಕಾನ್ಸುಲೆಟ್ ಪಿಆರ್ ಒ ಸರಿತ್ ಕುಮಾರ್ ಪ್ರಮುಖ ಆರೋಪಿಗಳಾಗಿದ್ದಾರೆ. ಕೇರಳ ರಾಜ್ಯ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ಲಿಮಿಟೆಡ್ ( ಕೆಎಸ್ ಐಟಿ ಎಲ್) ಹಾಗೂ ಸ್ಪೇಸ್ ಪಾರ್ಕ್ ನಲ್ಲಿ ಸ್ವಪ್ನ ಕಾರ್ಯ ನಿರ್ವಹಿಸಿದ್ದರು.

ಸಿಬಿಐ ತನಿಖೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಆಗ್ರಹ
ಯುಎಇ ದೂತವಾಸ ಕಚೇರಿಯ ಮಾಜಿ ಅಧಿಕಾರಿ ಸ್ವಪ್ನಾಗೆ ನೆರವಾಗಿದ್ದ ಆರೋಪ ಹೊತ್ತಿದ್ದ ಪ್ರಧಾನ ಕಾರ್ಯದರ್ಶಿ ಐಎಎಸ್ ಅಧಿಕಾರಿ ಶಿವಶಂಕರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಬಿಐ ತನಿಖೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಆಗ್ರಹಿಸುತ್ತಿವೆ. ಎಡಪಕ್ಷದ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಆರಂಭವಾಗಿದ್ದು, ಸಿಎಂ ಕುರ್ಚಿಗೆ ಕಂಟಕವಾಗಿದೆ. ಕೇರಳ ರಾಜ್ಯ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ಲಿಮಿಟೆಡ್ ( ಕೆಎಸ್ ಐಟಿ ಎಲ್) ನೇರವಾಗಿ ಸಿಎಂ ಪಿಣರಾಯಿ ವಿಜಯನ್ ಅವರ ಅಧೀನದಲ್ಲಿರುವ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿದೆ.

ಕೇರಳದಲ್ಲಿ ಸಂಚಲನ ಮೂಡಿಸಿರುವ ಕೇಸ್
ಕೇರಳದಲ್ಲಿ ಸಂಚಲನ ಮೂಡಿಸಿರುವ ಚಿನ್ನ ಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ಕಸ್ಟಮ್ಸ್ ಇಲಾಖೆಯ ಸಹಾಯಕ ಆಯುಕ್ತರಿಗೆ ತಿರುವನಂತಪುರದಲ್ಲಿರುವ ಯುಎಇ ರಾಯಭಾರ ಕಚೇರಿ ಅಧಿಕಾರಿಯ ಸೂಚನೆಯಂತೆ ಕರೆ ಮಾಡಿದ್ದೆ ಎಂದು ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಆಗ್ರಹ
ಸ್ವಪ್ನಾ ಸುರೇಶ್ ತಿರುವನಂತಪುರದ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲೇಟ್ನಲ್ಲಿ ಕಾರ್ಯನಿರ್ವಾಹಕ ಕಾರ್ಯದರ್ಶಿಯಾಗಿ, ಕೇರಳದ ಐಟಿ ಇಲಾಖೆಯಲ್ಲೂ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ, ಚಿನ್ನದ ಕಳ್ಳಸಾಗಣೆ ದಂಧೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿಯೊಂದಿಗೆ ಸಂಬಂಧವಿದೆ. ಕಸ್ಟಮ್ಸ್ ವಶಕ್ಕೆ ತೆಗೆದುಕೊಂಡಂತೆ ಮೊದಲ ಕರೆ ಮುಖ್ಯಮಂತ್ರಿ ಕಚೇರಿಯಿಂದ ಬಂದಿದೆ. ಸ್ವಪ್ನಾ ಸುರೇಶ್ ಅವರು ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಎಸ್.ಶಿವಶಂಕರ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ, ಅವರು ಐಟಿ ಕಾರ್ಯದರ್ಶಿಯೂ ಆಗಿದ್ದಾರೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ತಕ್ಷಣವೇ ವಹಿಸಬೇಕು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಆಗ್ರಹಿಸಿದ್ದಾರೆ.












Click it and Unblock the Notifications