ಕ್ಷೀರಭಾಗ್ಯ ದಶಮಾನೋತ್ಸವ; ಮಧುಗಿರಿಯಲ್ಲಿ ಸೆ. 6ರಂದು ಬೃಹತ್ ಸಮಾವೇಶ
ತುಮಕೂರು, ಸೆಪ್ಟೆಂಬರ್ 05; ಕರ್ನಾಟಕ ಸರ್ಕಾರ ಈ ಹಿಂದೆ ಜಾರಿಗೆ ತಂದಿದ್ದ 'ಕ್ಷೀರಭಾಗ್ಯ' ಯೋಜನೆಯು 10 ವರ್ಷಗಳನ್ನು ಪೂರೈಸಿದೆ. ಆದ್ದರಿಂದ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಬುಧವಾರ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ, ಸಹಕಾರ ಸಚಿವ ಕೆ. ಎನ್. ರಾಜಣ್ಣ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭದ ಸಿದ್ಧತೆಗಳನ್ನು ವೀಕ್ಷಣೆ ಮಾಡಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸಮಾರಂಭದ ಕುರಿತು ಮಾಹಿತಿ ನೀಡಿದರು.

ಕೆ. ಎನ್. ರಾಜಣ್ಣ ಮಾತನಾಡಿ, "ಕ್ಷೀರಭಾಗ್ಯ ಯೋಜನೆ ಜಾರಿಗೊಂಡು ಹತ್ತು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಮಧುಗಿರಿಯ ರಾಜೀವ್ಗಾಂಧಿ ಕ್ರೀಡಾಂಗಣದಲ್ಲಿ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ" ಎಂದರು.
2013ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕ್ಷೀರಭಾಗ್ಯ ಯೋಜನೆಗೆ ದಶಮಾನೋತ್ಸವ ಸಂಭ್ರಮ. ಈ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮಕ್ಕಾಗಿ ಮಧುಗಿರಿಯಲ್ಲಿ ತುಮಕೂರು ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ.
1 ಲಕ್ಷ ಜನರು ಭಾಗಿ ನಿರೀಕ್ಷೆ; "ಮಧುಗಿರಿಯಲ್ಲಿ ನಡೆಯುವ ರಾಜ್ಯಮಟ್ಟದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ.
ಗ್ರಾಮೀಣ ಜನರ ಆರ್ಥಿಕಾಭಿವೃದ್ಧಿಗೆ ಹೈನುಗಾರಿಕೆ ಹೆಚ್ಚು ಪೂರಕ. ಹಾಗಾಗಿ ಹಳ್ಳಿಗಳಲ್ಲಿ ಹೈನುಗಾರಿಕೆ ಮತ್ತಷ್ಟು ಹೆಚ್ಚಾಗಬೇಕು. ಜತೆಗೆ ಹೆಚ್ಚಿನ ಗುಣಮಟ್ಟದ ಪದಾರ್ಥ ನೀಡುವ ಕೆಲಸವನ್ನು ಹಾಲು ಒಕ್ಕೂಟ ಮಾಡುತ್ತಿದೆ" ಎಂದು ಸಚಿವ ಕೆ. ಎನ್. ರಾಜಣ್ಣ ಹೇಳಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ ಮಾತನಾಡಿ, "ಮಧುಗಿರಿಯ ಇತಿಹಾಸದಲ್ಲಿ ಈ ಹಿಂದೆ ಎಂದೂ ನೋಡದ ಕ್ಷೀರಭಾಗ್ಯ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕಾಗಿ ಕೆಎಂಎಫ್ ಅಧ್ಯಕ್ಷರಾದ ಭೀಮನಾಯ್ಕ್ ಅವರಿಗೆ ಧನ್ಯವಾದ ತಿಳಿಸುತ್ತೇನೆ" ಎಂದರು.
"ಕ್ಷೀರಭಾಗ್ಯ ಯೋಜನೆಯು ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಯಾಯಿತು. ಮಕ್ಕಳ ಪೌಷ್ಟಿಕತೆಗೆ ಸಹಾಯವಾಗಲಿ ಎಂದು ಅಂದು ಯೋಜನೆ ಜಾರಿಗೆ ತಂದಿದ್ದರು. ಇದರಿಂದ ರಾಜ್ಯದಲ್ಲಿ ಸುಮಾರು 65 ಲಕ್ಷ ಮಕ್ಕಳಿಗೆ ಅನುಕೂಲವಾಗಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ ಅನುಕೂಲವಾಗುವ ಕಾರ್ಯಕ್ರಮ ಇದಾಗಿದ್ದು, 10 ವರ್ಷದ ಸಂಭ್ರಮವನ್ನು ಆಚರಣೆ ಮಾಡಲು ತೀರ್ಮಾನಿಸಿದ್ದು, ಸಹಕಾರಿ ಸಚಿವರು ಐತಿಹಾಸಿಕ ಸಮಾರಂಭವನ್ನು ಮಧುಗಿರಿಯಲ್ಲಿ ಏರ್ಪಡಿಸಿದ್ದಾರೆ" ಎಂದು ಪರಮೇಶ್ವರ ಹೇಳಿದರು.
ಈ ದಶಮಾನೋತ್ಸವ ಕಾರ್ಯಕ್ರಮದಲ್ಲಿಯೇ ಮುಖ್ಯಮಂತ್ರಿಗಳು ಸುಮಾರು 156 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 13 ಮಳಿಗೆಗಳನ್ನು ಸ್ಥಾಪಿಸಿ ಜನರಿಗೆ ಅನುಕೂಲವಾಗುವ ಮಾರ್ಗದರ್ಶನ ಮಾಡಲಾಗುತ್ತಿದೆ.
2013ರಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕ್ಷೀರಭಾಗ್ಯ ಯೋಜನೆ ಘೋಷಣೆ ಮಾಡಿತು. ರಾಜ್ಯದ ಶಾಲಾ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಹಾಲನ್ನು ಒದಗಿಸುವ ಯೋಜನೆ ಕ್ಷೀರಭಾಗ್ಯ. 1 ಆಗಸ್ಟ್ 2013ರಂದು ಈ ಯೋಜನೆ ಜಾರಿಗೆ ಬಂದಿದೆ.
ಡಾ. ಜಿ. ಪರಮೇಶ್ವರ ಮಾತನಾಡಿ, "ನಾವು ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳಿಗೆ ವಿರೋಧ ಪಕ್ಷದವರು ಟೀಕೆ ಟಿಪ್ಪಣಿ ಮಾಡಿದರು. ಆದರೆ ಇಂದು ನಮ್ಮ ಸರ್ಕಾರ ಟೀಕೆಗಳನ್ನು ಸುಳ್ಳು ಮಾಡಿದೆ. ಈಗಾಗಲೇ 4 ಗ್ಯಾರಂಟಿಗಳನ್ನು ಅನುಷ್ಟಾನ ಮಾಡಿದ್ದೇವೆ" ಎಂದರು.
"ಪ್ರತಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆಯ ಕಾರ್ಯಕ್ರಮ ಯಶಸ್ವಿಯಾಗಿದೆ. 2 ಕೋಟಿ 17 ಲಕ್ಷ ಗ್ರಾಹಕರಿಗೆ ವಿದ್ಯುತ್ ಉಚಿತವಾಗಿ ಕೊಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆ 1.28 ಕೋಟಿ ಮಹಿಳೆಯರಿಗೆ ಸಹಕಾರಿಯಾಗಿದೆ. ಶಕ್ತಿ ಯೋಜನೆಯಡಿ ಮೂರು ತಿಂಗಳಲ್ಲಿ 1.5 ಕೋಟಿ ಮಹಿಳೆಯರು ತುಮಕೂರು ಜಿಲ್ಲೆಯಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿಗೆ ಹಣ ಕೊಡುತ್ತಿದ್ದೇವೆ" ಎಂದು ಹೇಳಿದರು.












Click it and Unblock the Notifications