ವಿಡಿಯೋ; ಕಾಲೇಜು ಮುಂದೆ ತೆಂಗಿನಕಾಯಿ ಒಡೆದು ಸಂಭ್ರಮ!
ತುಮಕೂರು, ಜೂನ್ 16; ಕೋವಿಡ್ ಕಾರಣಕ್ಕಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡುತ್ತಿದ್ದು, ತುಮಕೂರಿನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತುಮಕೂರು ಜಿಲ್ಲೆ ತಿಪಟೂರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂದೆ ವಿದ್ಯಾರ್ಥಿಗಳು ಪಟಾಕಿ ಸಿಡಿಸಿ, ಬೂದುಗುಂಬಳಕಾಯಿ ಒಡೆದು, ತೆಂಗಿನ ಕಾಯಿ ಒಡೆದು ಸಂಭ್ರಮಾಚರಣೆ ಮಾಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ನೇಣಿಗೆ ಶರಣು
ಸುಮಾರು 10 ವಿದ್ಯಾರ್ಥಿಗಳ ತಂಡ ಸಂಭ್ರಮಾಚರಣೆ ಮಾಡಿದ್ದು, ಶಿಕ್ಷಣ ಸಚಿವರ ಪರವಾಗಿ ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.
ಜೂನ್ 14ರ ತನಕ ತುಮಕೂರಿನಲ್ಲಿ ಲಾಕ್ಡೌನ್ ಇತ್ತು. ಜೂನ್ 15ರಂದು ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಬಂದು ಸಂಭ್ರಮಾಚರಣೆ ಮಾಡಿದ್ದಾರೆ. ಪರೀಕ್ಷೆ ಇಲ್ಲದೇ ಪಾಸು ಮಾಡಿದ್ದಕ್ಕೆ ಸಂಭ್ರಮಿಸಿದ್ದಾರೆ.
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು
ಕೋವಿಡ್ ಪರಿಣಾಮದಿಂದಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸು ಮಾಡಲು ಸರ್ಕಾರ ತೀರ್ಮಾನಿಸಿದೆ. ಶೇ 35ರಷ್ಟು ಅಂಕ ನೀಡಿ ಉತ್ತೀರ್ಣಗೊಳಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಪರ-ವಿರೋಧ ಚರ್ಚೆ ನಡೆಯುತ್ತಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸು ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದರು. ಕೇಂದ್ರ ಸರ್ಕಾರ ಸಹ ಸಿಬಿಎಸ್ಇ ಮತ್ತು ಐಸಿಎಸ್ಇ ಪರೀಕ್ಷೆಗಳನ್ನು ರದ್ದು ಮಾಡಿದೆ.
ದ್ವಿತೀಯ ಪಿಯಸಿ ಪರೀಕ್ಷೆ ರದ್ದು ಮಾಡಿ ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಗ್ರೇಡಿಂಗ್ ನೀಡಲು ತೀರ್ಮಾನಿಸಲಾಗಿದೆ. ಫಲಿತಾಂಶ ಸಮಾಧಾನವಿಲ್ಲದಿದ್ದರೆ ಕೋವಿಡ್ ಪ್ರಮಾಣ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಹ ಶಿಕ್ಷಣ ಸಚಿವರು ಹೇಳಿದ್ದಾರೆ.