ತುಮಕೂರಿನಲ್ಲಿ ದೇಶ ವಿರೋಧಿ ಘೋಷಣೆ?, ಮೂವರು ವಶಕ್ಕೆ
ತುಮಕೂರು, ಆಗಸ್ಟ್ 16 : ಸಿದ್ದಾರ್ಥ ತಾಂತ್ರಿಕ ಕಾಲೇಜಿನ ಕೆಲವು ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ವದಂತಿ ಹಬ್ಬಿದೆ. ಕಾಲೇಜಿನ ಹಾಸ್ಟೆಲ್ನಲ್ಲಿರುವ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ತುಮಕೂರು ನಗರದಲ್ಲಿರುವ ಸಿದ್ದಾರ್ಥ ತಾಂತ್ರಿಕ ಕಾಲೇಜು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಸೇರಿದ್ದಾಗಿದೆ. ಆಗಸ್ಟ್ 14ರಂದು ಮಧ್ಯರಾತ್ರಿ ಕುಡಿದ ಮತ್ತಿನಲ್ಲಿದ್ದ ವಿದ್ಯಾರ್ಥಿಗಳು ಬೈಕ್ನಲ್ಲಿ ತೆರಳುವಾಗ ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬುದು ಆರೋಪವಾಗಿದೆ.[ದೇಶ ವಿರೋಧಿ ಘೋಷಣೆ, FIR ದಾಖಲು]

ಈ ಬಗ್ಗೆ ವಿದ್ಯಾರ್ಥಿಗಳನ್ನು ಕಾಲೇಜಿನ ಭದ್ರತಾ ಸಿಬ್ಬಂದಿಗಳು ಪ್ರಶ್ನಿಸಿದಾಗ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂಬುದು ಆರೋಪ. ಈ ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ ಹಾಸ್ಟೆಲ್ನಲ್ಲಿದ್ದ ಮೂವರು ವಿದ್ಯಾರ್ಥಿಗಳನ್ನು ತಿಲಕ್ ಪಾರ್ಕ್ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.[ದೇಶ ವಿರೋಧಿ ಘೋಷಣೆ, ಏನಿದು ವಿವಾದ?]
'ವಿದ್ಯಾರ್ಥಿಗಳು ಮುರ್ದಾಬಾದ್, ಜಿಂದಾಬಾದ್ ಎಂದು ಘೋಷಣೆ ಕೂಗಿದರೋ ಸರಿಯಾಗಿ ಭದ್ರತಾ ಸಿಬ್ಬಂದಿಗೆ ಕೇಳಿಸಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ' ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಕೆ.ವೀರಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಲ್ಲಿ ಪ್ರಕರಣ ದಾಖಲು : ಬೆಂಗಳೂರಿನ ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು ಬ್ರೋಕನ್ ಫ್ಯಾಮಿಲೀಸ್ ಹೆಸರಿನಲ್ಲಿ ಕಾರ್ಯಾಗಾರ ಆಯೋಜಿಸಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು ದೇಶವಿರೋಧಿ ಘೋಷಣೆ ಕೂಗಿದ್ದಾರೆ. ಈ ಬಗ್ಗೆ ಈಗಾಗಲೇ ಪ್ರಕರಣ ದಾಖಲಾಗಿದೆ.












Click it and Unblock the Notifications