ಜನರ ಸಮಸ್ಯೆಗಳಿಗೆ ಧ್ವನಿಯಾಗುವುದೇ ಯಾತ್ರೆ ಉದ್ದೇಶ, 2024ರ ಚುನಾವಣೆ ಅಲ್ಲ: ರಾಹುಲ್ ಗಾಂಧಿ

ತುಮಕೂರು, ಅಕ್ಟೋಬರ್‌ 8: "ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ. ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು,ಆರ್ಥಿಕ ಅಸಮಾನತೆ ಹೋಗಲಾಡಿಸುವುದು, ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿರುವುದರ ವಿರುದ್ಧ, ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಜನಸಾಮಾನ್ಯರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ" ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಭಾರತ ಐಕ್ಯತಾ ಯಾತ್ರೆ ಭಾಗವಾಗಿ ತುಮಕೂರಿನ ತುರುವೇಕೆರೆಯಲ್ಲಿ ಮಾಧ್ಯಮಗಳ ಜತೆ ರಾಹುಲ್ ಗಾಂಧಿ ಅವರು ಶನಿವಾರ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಜೈರಾಮ್ ರಮೇಶ್, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗೆ ರಾಹುಲ್ ಗಾಂಧಿ ಅವರು ಕೊಟ್ಟ ಉತ್ತರಗಳು ಹೀಗಿವೆ.

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ದಕ್ಷಿಣ ರಾಜ್ಯಗಳಿಗೆ ಗೌರವ ನೀಡದೇ ಕಡೆಗಣಿಸಲಾಗುತ್ತಿದೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, " ನಾನು ಸಂಸತ್ತಿನ ಭಾಷಣದಲ್ಲಿ ಭಾರತವನ್ನು ಸಂವಿಧಾನಿಕ ರಾಜ್ಯಗಳ ಒಕ್ಕೂಟ ದೇಶ ಎಂದು ಹೇಳಿದ್ದೆ. ನಮ್ಮ ದೇಶದ ಎಲ್ಲ ಭಾಷೆ. ರಾಜ್ಯಗಳು, ಸಂಪ್ರದಾಯಗಳು ಸಮಾನ ಪ್ರಾಮುಖ್ಯತೆ ಹೊಂದಿದ್ದು, ಎಲ್ಲರಿಗೂ ಸಮಾನ ಪ್ರಾಧಾನ್ಯತೆ ಸಿಗಬೇಕು" ಎಂದರು.

ದೇಶದಲ್ಲಿ ಪಿಎಫ್‌ಐಗೆ ಪ್ರೋತ್ಸಾಹ ನೀಡಿದ್ದೇ ಕಾಂಗ್ರೆಸ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, 'ದೇಶದಲ್ಲಿ ಯಾರೇ ದ್ವೇಷ ಹಬ್ಬಿಸಿ ಅಶಾಂತಿ ಸೃಷ್ಟಿಸಿದರೂ ಅವರು ಯಾವುದೇ ಸಮುದಾಯದವರಾದರೂ ಅವರನ್ನು ನಾವು ವಿರೋಧಿಸುತ್ತೇವೆ' ಎಂದು ತಿಳಿಸಿದರು.

 ಎಐಸಿಸಿ ಅಧ್ಯಕ್ಷ ಯಾರ ನಿಯಂತ್ರಣದಲ್ಲಿ ಕೆಲಸ ಮಾಡಲ್ಲ

ಎಐಸಿಸಿ ಅಧ್ಯಕ್ಷ ಯಾರ ನಿಯಂತ್ರಣದಲ್ಲಿ ಕೆಲಸ ಮಾಡಲ್ಲ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಯಾರೇ ಆಯ್ಕೆಯಾದರೂ ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಿರುತ್ತಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, "ನಮ್ಮ ಪಕ್ಷದಲ್ಲಿ ಚುನಾವಣೆ ನಡೆಯುತ್ತಿದ್ದು, ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಈ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, ಇಬ್ಬರೂ ಸಮರ್ಥ ಹಾಗೂ ವಿಭಿನ್ನ ನಾಯಕರು. ಅವರು ಯಾರ ನಿಯಂತ್ರಣದಲ್ಲೂ ಕೆಲಸ ಮಾಡುವುದಿಲ್ಲ" ಎಂದು ಸ್ಪಷ್ಟನೆ ನೀಡಿದರು.

 ಲಕ್ಷಾಂತರ ಜನರಿಂದ ಭಾರತ್ ಜೋಡೋ ಯಾತ್ರೆ

ಲಕ್ಷಾಂತರ ಜನರಿಂದ ಭಾರತ್ ಜೋಡೋ ಯಾತ್ರೆ

ಭಾರತ ವಿಭಜನೆಗೆ ನೀವು ಕಾರಣರಾಗಿದ್ದು ಭಾರತ ಜೋಡೋ ಯಾತ್ರೆ ಮಾಡುವುದೇಕೆ ಎಂದು ಕೇಳಿದ ಪ್ರಶ್ನೆಗೆ, " ಬ್ರಿಟೀಷರ ವಿರುದ್ಧ ಹೋರಾಡಿ, ಜೈಲುವಾಸ ಅನುಭವಿಸಿದ ಮಹಾತ್ಮಾ ಗಾಂಧಿ, ನೆಹರೂ, ಸರ್ದಾರ್ ಪಟೇಲ್ ಹಾಗೂ ಇತರರು ಕಾಂಗ್ರೆಸಿಗರು. ಆರ್‌ಎಸ್ಎಸ್ ನವರು ಬ್ರಿಟೀಷರ ಪರವಾಗಿ ನಿಂತಿದ್ದರು. ಸಾರ್ವಕರ್ ಅವರು ಬ್ರಿಟೀಷರಿಂದ ಆರ್ಥಿಕ ನೆರವು ಪಡೆಯುತ್ತಿದ್ದರು. ಈ ದೇಶಕ್ಕೆ ಸ್ವಾಂತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನ, ಹಸಿರು ಕ್ರಾಂತಿ ತಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಈಗ ದ್ವೇಷವನ್ನು ಸೃಷ್ಟಿಸಿ ದೇಶ ವಿಭಜಿಸುತ್ತಿದ್ದಾರೆ. ಈ ಯಾತ್ರೆ ಕೇವಲ ನಾನು ಮಾಡುತ್ತಿಲ್ಲ. ದೇಶದ ಲಕ್ಷಾಂತರ ಜನ ಈ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯ ದ್ವೇಷ ರಾಜಕಾರಣ, ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಅಸಮಾನತೆ ಕುರಿತು ಜನ ಬೇಸತ್ತಿದ್ದಾರೆ. ಹೀಗಾಗಿ ಜನ ಯಾತ್ರೆ ನಡೆಸುತ್ತಿದ್ದಾರೆ" ಎಂದರು.

 ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ

ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ

ಪಕ್ಷದಲ್ಲಿನ ಆಂತರಿಕ ತಿಕ್ಕಾಟ ಹಾಗೂ ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, " ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ತಿಕ್ಕಾಟವಿಲ್ಲ. ನಮ್ಮ ಪಕ್ಷ ಸರ್ವಾಧಿಕಾರಿ ಮನಸ್ಥಿತಿಯ ಪಕ್ಷವಲ್ಲ. ನಮ್ಮಲ್ಲಿ ಎಲ್ಲರ ಅಭಿಪ್ರಾಯ, ಭಾವನೆಗೆ ಅವಕಾಶವಿದೆ. ನಮ್ಮಲ್ಲಿ ಚರ್ಚೆಗೆ, ವಿಭಿನ್ನ ದೃಷ್ಟಿಕೋನಕ್ಕೆ ಅವಕಾಶವಿದೆ. ಆದರೆ ಚುನಾವಣೆಯಲ್ಲಿ ಗೆಲ್ಲಲು ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ನಮ್ಮಲ್ಲಿ ಹಲವು ಸಮರ್ಥ ನಾಯಕರಿದ್ದು, ಪಕ್ಷ ಚುನಾವಣೆಯಲ್ಲಿ ಗೆದ್ದ ನಂತರ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು" ಎಂದು ತಿಳಿಸಿದರು.

 ಕಾಂಗ್ರೆಸ್ ಪಕ್ಷ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ

ಕಾಂಗ್ರೆಸ್ ಪಕ್ಷ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ

ಮುಂಬರುವ ರಾಜ್ಯ ಚುನಾವಣೆಯಲ್ಲಿ ಬಹುಮತ ಬರದಿದ್ದರೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಕೈ ಜೋಡಿಸುತ್ತದೆಯೇ, " ಈ ಪ್ರಶ್ನೆಗೆ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಸಮರ್ಥ ಉತ್ತರ ನೀಡುತ್ತಾರೆ. ನನ್ನ ಪ್ರಕಾರ ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ಈ ಯಾತ್ರೆಯ ಅನುಭವದಲ್ಲಿ ವಿವಿಧ ವರ್ಗದ ಜನರ ಜತೆಗಿನ ಚರ್ಚೆಯಲ್ಲಿ ಬಿಜೆಪಿ ಸರಕಾರದ 40% ಕಮಿಷನ್ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ವಿಚಾರವಾಗಿ ನಾಗರೀಕರು ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು

ಕಾಂಗ್ರೆಸ್ ನಾಯಕರು ಬೇಲ್ ಮೇಲೆ ಹೊರಗಿದ್ದು, ಆದರೂ ರಾಜ್ಯ ಸರಕಾರದ ವಿರುದ್ಧ ಹೇಗೆ 40% ಕಮಿಷನ್ ಆರೋಪ ಮಾಡುತ್ತಿರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, " ಬಿಜೆಪಿ ಹಾಗೂ ಆರ್ ಎಸ್ ಎಸ್ ದೇಶದ ಸಂವಿಧಾನಿಕ ಸಂಸ್ಥೆಳನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ. ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಈ ಸಂಸ್ಥೆಗಳ ದುರ್ಬಳಕೆ ಆಗುತ್ತಿದೆ. ಇವುಗಳನ್ನು ಬಳಸಿಕೊಂಡು ಚುನಾಯಿತ ಸರಕಾರಗಳನ್ನು ಕೆಡವಲಾಗುತ್ತಿದೆ" ಎಂದು ಆರೋಪಿಸಿದರು.

 ರಾಜಸ್ಥಾನ ಸರಕಾರ ಅದಾನಿಗೆ ವಿಶೇಷ ಆದ್ಯತೆ ನೀಡಿ

ರಾಜಸ್ಥಾನ ಸರಕಾರ ಅದಾನಿಗೆ ವಿಶೇಷ ಆದ್ಯತೆ ನೀಡಿ

ರಾಜಸ್ಥಾನದಲ್ಲಿ ಅದಾನಿ ಅವರಿಗೆ ಬಂಡವಾಳ ಹೂಡಿಕೆಗೆ ಅವಕಾಶ ನೀಡಿರುವ ಬಗ್ಗೆ ಕೇಳಿದಾಗ, " ಅದಾನಿ ಅವರು ರಾಜಸ್ಥಾನದಲ್ಲಿ 67 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಪ್ರಸ್ತಾವನೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ ಇದನ್ನು ನಿರಾಕರಿಸುವುದಿಲ್ಲ. ನಿರಾಕರಿಸುವುದು ಸರಿಯೂ ಆಲ್ಲ. ರಾಜಸ್ಥಾನ ಸರಕಾರ ಅದಾನಿಗೆ ವಿಶೇಷ ಆದ್ಯತೆ ನೀಡಿಲ್ಲ. ಅವರ ವ್ಯಾಪಾರ ವ್ಯವಹಾರಕ್ಕೆ ಅನುಕೂಲ ಮಾಡಿಕೊಡಲು ರಾಜಸ್ಥಾನ ಸರಕಾರ ರಾಜಕೀಯ ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ.

ಆದರೆ ಬಿಜೆಪಿ ಸರಕಾರ ಕೇವಲ ಒಂದಿಬ್ಬರು ವ್ಯಾಪಾರಸ್ಥಿಗೆ ವಿಶೇಷ ಆದ್ಯತೆ ನೀಡಿ ಬೆಳೆಸುತ್ತಿದೆ. ನಾನು ಉದ್ಯಮಿಗಳು ಅಥವಾ ಬೇರೆ ವ್ಯಾಪಾರಸ್ಥರ ವಿರುದ್ಧವಿಲ್ಲ. ದೇಶದಲ್ಲಿ ಕೇಲವರಿಗೆ ಮಾತ್ರ ಆದ್ಯತೆ ನೀಡುವುದು ದೇಶಕ್ಕೆ ಮಾರಕ. ರಾಜಸ್ಥಾನ ಸರಕಾರ ಪ್ರಾಮಾಣಿಕವಾಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಿದ್ದರೆ ಬೆಂಬಲಿಸುತ್ತೇನೆ. ಆದರೆ ಅವರಿಗಾಗಿ ವಿಶೇಷ ಆದ್ಯತೆ ನೀಡಲು ರಾಜಕೀಯ ಅಧಿಕಾರ ದುರ್ಬಳಕೆ ಮಾಡಿದ್ದರೆ ಆಗ ರಾಜಸ್ಥಾನದ ಸರಕಾರದ ವಿರುದ್ಧವೂ ನಿಲ್ಲುತ್ತೇನೆ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+