Tumkur Bus Accident: ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಎಚ್ಡಿಕೆ ಆಗ್ರಹ
ತುಮಕೂರು, ಮಾರ್ಚ್ 19: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ತುಮಕೂರು ಅಪಘಾತದ ಕುರಿತು ಅವರು ಸರಣಿ ಟ್ವೀಟ್ ಮಾಡಿದ್ದು, "ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಎಂಟು ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ," ಎಂದು ಮೊದಲ ಟ್ವೀಟಿನಲ್ಲಿ ಬರೆದುಕೊಂಡಿದ್ದಾರೆ.
ಖಾಸಗಿ ಬಸ್ ಪಲ್ಟಿ: ಮೃತರ ಕುಟುಂಬಸ್ಥರು, ಗಾಯಾಳುಗಳಿಗೆ ಪರಿಹಾರ: ಸಾರಿಗೆ ಸಚಿವ
ಶನಿವಾರ ಬೆಳಗ್ಗೆ 9.20 ಗಂಟೆ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಮಾರಸ್ವಾಮಿ ಎರಡನೇ ಟ್ವೀಟ್:
"ಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ದುರಂತದಲ್ಲಿ ಸಾವನ್ನಪ್ಪಿದವರಿಗೆ ದೊಡ್ಡ ಪ್ರಮಾಣದ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಅವರಿಗೂ ಪರಿಹಾರ ಕೊಡಬೇಕು," ಎಂದು ಆಗ್ರಹಿಸಿದ್ದಾರೆ.
ಕುಮಾರಸ್ವಾಮಿ ಮೂರನೇ ಟ್ವೀಟ್:
"ಖಾಸಗಿ ಬಸ್ ಗಳ ಗುಣಮಟ್ಟ, ಪರವಾನಗಿ, ತಾಂತ್ರಿಕ ಕ್ಷಮತೆ, ವೇಗದ ಚಾಲನೆ ಇತ್ಯಾದಿಗಳ ಬಗ್ಗೆ ನಿರಂತರವಾಗಿ ದೂರು ಬರುತ್ತಲೇ ಇದ್ದರೂ ಸರ್ಕಾರವು ನಿರ್ಲಕ್ಷ್ಯ ಧೋರಣೆಯಲ್ಲೇ ಇದೆ. ಗ್ರಾಮೀಣ ಸಾರಿಗೆಯನ್ನು ಉತ್ತಮಪಡಿಸುವ ಸರ್ಕಾರದ ಮಾತುಗಳು ಕೇವಲ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದೆ," ಎಂದು ಬರೆದುಕೊಂಡಿದ್ದಾರೆ.
ಕುಮಾರಸ್ವಾಮಿ ನಾಲ್ಕನೇ ಟ್ವೀಟ್:
"ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ," ಎಂದು ದೂರಿದ್ದಾರೆ.
ಕುಮಾರಸ್ವಾಮಿ ಐದನೇ ಟ್ವೀಟ್:
"ಈ ಬಗ್ಗೆ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ," ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಪ್ರಾಥಮಿಕ ವರದಿ ಹೇಳುವುದೇನು?:
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಆಗಿದೆ ಎಂದು ಪ್ರಾಥಮಿಕ ವರದಿಗಳು ಹೇಳುತ್ತಿವೆ.