ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಆತಂಕ ಬೇಡ: ಎಚ್ಡಿಕೆ
ತುಮಕೂರು, ಜನವರಿ 4: ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.
ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಚೆನ್ನೈನಿಂದ ಬಂದಿರುವ ಪರಿಣತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿದೇಶ ಪ್ರಯಾಣಕ್ಕೆ ತೆರಳಿದ್ದರಿಂದ ಈ ಮಧ್ಯೆ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.
ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರದಲ್ಲಿ ತಾಳ್ಮೆ ಅಗತ್ಯ: ವೈದ್ಯರು
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, 'ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ವೈದ್ಯರ ತಂಡಕ್ಕೆ ಭಕ್ತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ' ಎಂದರು.
ಶಿವಕುಮಾರ ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆ ಸ್ಪಂದಿಸುತ್ತಿರುವುದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮತ್ತು ಪವಾಡ ಸದೃಶವಾಗಿದೆ ಎಂದು ಹೇಳಿದರು.
ಶ್ರೀಗಳ ಆರೋಗ್ಯ ದೃಷ್ಟಿಯಿಂದ ಭಕ್ತರು ಅವರನ್ನು ಭೇಟಿ ಮಾಡುವ ಪ್ರಯತ್ನ ಮಾಡಬಾರದು ಎಂದು ಮನವಿ ಮಾಡಿದರು.
ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಅವರನ್ನು ಭೇಟಿ ಮಾಡಲು ನಾನು ಬಂದರೂ ತೊಂದರೆಯಾಗುತ್ತದೆ ಎನಿಸಿತ್ತು. ಕಿರಿಯ ಶ್ರೀಗಳ ಅನುಮತಿ ಪಡೆದು ಭೇಟಿ ಮಾಡಿದ್ದೇನೆ.
ತುಮಕೂರು ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿತಿ ಈಗ ಹೇಗಿದೆ?
ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀಗಳ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದುಕೊಳ್ಳುವ ಸಲುವಾಗಿ ಬಂದಿರುವುದಾಗಿ ಅವರು ಹೇಳಿದರು.
ಶಿವಕುಮಾರ ಸ್ವಾಮೀಜಿಯವರು ಆರೋಗ್ಯವಾಗಿದ್ದಾರೆ. ಭಕ್ತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಧೈರ್ಯ ನೀಡಿದ್ದಾರೆ.
ಈ ವೇಳೆ ಸಚಿವ ಎಸ್.ಆರ್. ಶ್ರೀನಿವಾಸ, ಶಾಸಕ ಜಿ.ಬಿ. ಜ್ಯೋತಿಗಣೇಶ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ನಿಂಗಪ್ಪ ಇದ್ದರು.