ತುಮಕೂರಿಗೆ ಬಂಪರ್: ಡಿ.2 ರಂದು 1.4 ಲಕ್ಷ ಅರ್ಹರಿಗೆ ಸೌಲಭ್ಯ ವಿತರಣೆ, ₹1500 ಕೋಟಿ ಕಾಮಗಾರಿ ಉದ್ಘಾಟನೆ
ತುಮಕೂರು, ನವೆಂಬರ್ 19: ಕಲ್ಪತರು ನಾಡು ತುಮಕೂರು ಜಿಲ್ಲೆಗೆ ರಾಜ್ಯ ಸರ್ಕಾರ ಬಂಪರ್ ಯೋಜನೆ ಘೋಷಿಸಿದೆ. ಡಿಸೆಂಬರ್ 2 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1.4 ಲಕ್ಷ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಿದ್ದಾರೆ. ಬಹುಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ ನೇರೆವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹ ಸಚಿವ ಜಿ.ಪರಮೇಶ್ವರ ಅವರು ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 2ರಂದು ಜಿಲ್ಲೆಗೆ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಇಂದು ಮಂಗಳವಾರ ಅವರು ಕಾರ್ಯಕ್ರಮ ನಡೆಯುವ ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ನಂತರ ಸುದ್ದಿಗಾರರಗೆ ಜಿಲ್ಲೆಯ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಕೈಗಾರಿಕೆ, ಕಾರ್ಮಿಕ, ರೇಷ್ಮೆ, ಕಂದಾಯ, ವಿಕಲ ಚೇತನರ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಹಾಲು ಒಕ್ಕೂಟ, ವಿವಿಧ ನಿಗಮಗಳು, ಎನ್ಆರ್ಎಲ್ಎಂ ಸೇರಿದಂತೆ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಯೋಜನೆಗಳಡಿ 1.4 ಲಕ್ಷ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ.
ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಯೋಜನೆಗಳ ಪೂರ್ಣ ಮಾಹಿತಿ
ಇದೇ ವೇಳೆ ತುಮಕೂರಿನಲ್ಲಿ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಸಿದ್ಧವಿರುವ ಲೋಕೋಪಯೋಗಿ, ಅಗ್ನಿಶಾಮಕ, ಪೊಲೀಸ್, ಸಣ್ಣ ನೀರಾವರಿ, ಸಮಾಜ ಕಲ್ಯಾಣ, ಕೃಷಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕೊಳಗೇರಿ ಅಭಿವೃದ್ಧಿ ಮಂಡಳಿ ಸೇರಿದಂತೆ ವಿವಿಧ ಇಲಾಖೆಗಳಿಂದ ಸುಮಾರು 1500 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡುತ್ತಾರೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೈಗೊಳ್ಳಲಾಗುವ 929 ಕೋಟಿ ರೂ. ವೆಚ್ಚದ ಒಟ್ಟು 825 ಕಾಮಗಾರಿಗಳ ಶಿಲಾನ್ಯಾಸ ಹಾಗೂ 94 ಕೋಟಿ ರೂ. ವೆಚ್ಚದ ಪೂರ್ಣಗೊಂಡಿರುವ ಒಟ್ಟು 66 ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವತಿಯಿಂದ 253 ಕೋಟಿ ರೂ., ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ 263 ಕೋಟಿ ರೂ., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ 194 ಕೋಟಿ ರೂ., ಲೋಕೋಪಯೋಗಿ ಇಲಾಖೆಯ 188 ಕೋಟಿ ರೂ., ಸಣ್ಣ ನೀರಾವರಿ ಇಲಾಖೆಯಲ್ಲಿ 57 ಕೋಟಿ ರೂ., ಸಮಾಜ ಕಲ್ಯಾಣ ಇಲಾಖೆಯ 35 ಕೋಟಿ ರೂಪಾಯಿ ವ್ಯಯಿಸಿ ಅಭಿವೃದ್ಧಿಗೊಳಿಸಲಾಗುತ್ತದೆ.
ಅಗ್ನಿಶಾಮಕ ಇಲಾಖೆಯ 03 ಕೋಟಿ ರೂ., ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ 12 ಕೋಟಿ ರೂ., ಕೆಆರ್ಐಡಿಎಲ್ನ 11 ಕೋಟಿ ರೂ., ಕೃಷಿ ಇಲಾಖೆಯ 2 ಕೋಟಿ ರೂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ೩ ಕೋಟಿ ರೂ., ಪೊಲೀಸ್ ಇಲಾಖೆಯ 71 ಲಕ್ಷ ರೂ. ಸೇರಿದಂತೆ ಸುಮಾರು 1500 ಕೋಟಿ ರೂ. ಕಾಮಗಾರಿಗಳು ವಿದ್ಯುಕ್ತವಾಗಿ ಚಾಲನೆಗೊಳ್ಳಲಿವೆ.
ಜನಸಮುದಾಯಕ್ಕೆ ಭರವಸೆ ನೀಡಿದಂತೆ ವಿನೂತನ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ವಿರೋಧ ಪಕ್ಷಗಳ ಟೀಕೆ-ಟಿಪ್ಪಣ ಗಳಿಗೆ ಉತ್ತರ ನೀಡುತ್ತಿದ್ದೇವೆ. ಈ ಕಾರ್ಯಕ್ರಮದಿಂದ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿರುವ ವಿಪಕ್ಷದವರ ನಡವಳಿಕೆ ಜನರಿಗೆ ತಿಳಿಯಲಿದೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.
ರೈತರಿಗೆ ಯಂತ್ರೋಪಕರಣ ವಿತರಣೆ
ಇದೇ ಕಾರ್ಯಕ್ರಮದಲ್ಲಿ ರೈತರಿಗೆ ಬೆಳೆ ಕಟಾವು ಯಂತ್ರ, ಟ್ರ್ಯಾಕ್ಟರ್, ಮಿನಿ ಟ್ರ್ಯಾಕ್ಟರ್, ರೋಟಾವೇಟರ್, ಹಾರ್ವೆಸ್ಟರ್, ಕಟ್ರ್ಸ್, ಟಿಲ್ಲರ್ ಸೇರಿದಂತೆ ಆಧುನಿಕ ಕೃಷಿ ಉಪಕರಣಗಳು, ವಿವಿಧ ನಿಗಮಗಳಿಂದ ಟ್ಯಾಕ್ಸಿ ಸೇರಿದಂತೆ ಒಟ್ಟು ರೂ. 1.46 ಲಕ್ಷ ಫಲಾನುಭವಿಗಳಿಗೆ 236 ಕೋಟಿ ರೂ. ವೆಚ್ಚದ ಸವಲತ್ತುಗಳನ್ನು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಹೆದ್ದಾರಿ ಪಕ್ಕ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ
ಜಿಲ್ಲೆಯಲ್ಲಿ ದಶಕಗಳ ಬೇಡಿಕೆ ಇದ್ದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 41 ಎಕರೆ ಮೀಸಲಿಡಲಾಗಿದೆ. ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗೊಲ್ಲಹಳ್ಳಿಯಲ್ಲಿ ವಿಶಾಲ ಪ್ರದೇಶದಲ್ಲಿ ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ಗೆ ನೀಡಲಾಗಿದೆ. ಈ ಅತ್ಯಾಧುನಿಕ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೂ ಸಿಎಂ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.












Click it and Unblock the Notifications