ತುಮಕೂರಿನ ಬರಪೀಡಿತ ತಾಲ್ಲೂಕುಗಳಿಗೆ ಸಿಎಂ ಭೇಟಿ
ತುಮಕೂರು, ನವೆಂಬರ್ 15: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ಮಂಗಳವಾರ ಸಿಎಂ ಸಿದ್ದರಾಮಯ್ಯ ತುಮಕೂರಿನ ಬರಪೀಡಿತ ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಚಟ್ಟಸಂದ್ರ, ಮತ್ತಿಘಟ್ಟ ಹಾಗೂ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ, ಮತ್ತಿಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಪರಿಸ್ಥಿತಿಯಿಂದ ಒಣಗಿರುವ ಕೃಷಿ ಬೆಳೆಗಳು, ತೋಟಗಾರಿಕೆ ಬೆಳೆಗಳು, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳ ಮೇವಿನ ಸಮಸ್ಯೆಯನ್ನು ಕಣ್ಣಾರೆ ಕಂಡರು. ಹಾಗು ರೈತರ ಸಮಸ್ಯೆಗಳನ್ನು ಆಲಿಸಿದರು.

ಇನ್ನು ಮುಖ್ಯಮಂತ್ರಿಗಳು ಮಾತನಾಡಿ, ಜಿಲ್ಲೆಯ 10 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಕುಡಿವ ನೀರು ಮತ್ತು ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯುತ್ ಸಮಸ್ಯೆ ನಿವಾರಿಸಲು ಬೆಸ್ಕಾಂಗೆ ಸೂಚಿಸಲಾಗಿದೆ. ಮುಂತಾದ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಬರ ಪರಿಸ್ಥಿತಿ ಹಿನ್ನೆಲೆ ಜಿಲ್ಲಾಡಳಿತ ಪರಿಹಾರಕ್ಕಾಗಿ ಮನವಿ ಸಲ್ಲಿಸಿತು. ಇದರಲ್ಲಿ ಕುಡಿಯುವ ನೀರಿಗೆ 112 ಕೋಟಿ, ಕೃಷಿಗೆ 160.06 ಕೋಟಿ, ತೋಟಗಾರಿಕೆಗೆ 85.09 ಕೋಟಿ, ಗೋಶಾಲೆ ತೆರೆಯಲು 50 ಕೋಟಿ ರೂ. ಸೇರಿದಂತೆ 414 ಕೋಟಿ ರೂ.ಗಳನ್ನು ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ ಅಗತ್ಯವಿದೆ ಎಂದು ಕೋರಿದೆ. ಇದನ್ನು ನೋಡಿದ ಸಿಎಂ ಸಿದ್ದರಾಮಯ್ಯ, ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿದ್ದಾಗ ಬರ ಪರಿಸ್ಥಿತಿ ನಿರ್ವಹಣೆಗೆ 366 ಕೋಟಿ ರೂ. ಕೇಳಲಾಗಿತ್ತು. ಆದರೆ ಈಗ ರೈತರ ಬೆಳೆಗಳನ್ನು ಪರಿಶೀಲಿಸಿ ಹೆಚ್ಚುವರಿಯಾಗಿ 49 ಕೋಟಿ ಅಗತ್ಯವಿದೆ ಎಂದು ವಿವರಿಸಿದರು.

ಬರ ಪರಿಶೀಲನೆ ನಂತರ ತಿಪಟೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಕಲ್ಪತರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಸಾರ್ವಜನಿಕ ತಾಯಿ-ಮಗು ಆಸ್ಪತ್ರೆ ಕಟ್ಟಡ ಉದ್ಘಾಟನೆ, ಮಿನಿ ವಿಧಾನಸೌಧದ ಕಟ್ಟಡ ಶಂಕುಸ್ಥಾಪನೆ, ನಗರಸಭೆ ವಾಣಿಜ್ಯ ಮಳಿಗೆಗಳ ಶಂಕುಸ್ಥಾಪನೆ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡದ ಉದ್ಘಾಟನೆ, ಸಹಾಯಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನೆ ಇನ್ನು ಮುಂತಾದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಸಚಿವರಾದ ಹೆಚ್.ಸಿ. ಮಹದೇವಪ್ಪ, ಟಿ.ಬಿ. ಜಯಚಂದ್ರ, ಸಂಸದ ಮುದ್ದಹನುಮೇಗೌಡ, ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ, ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್, ಶಾಸಕರಾದ ಕೆ. ಷಡಕ್ಷರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.











Click it and Unblock the Notifications