ಬಿಸಿತುಪ್ಪವಾದ ತುಮಕೂರು : ಮೈತ್ರಿ ಅಭ್ಯರ್ಥಿ ಯಾರು?
ತುಮಕೂರು, ಮಾರ್ಚ್ 24 : ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸುವ ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ಸೀಟು ಹಂಚಿಕೆಯೇ ಸವಾಲಾಗಿದೆ. ತುಮಕೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಇನ್ನೂ ಹಗ್ಗಜಗ್ಗಾಟ ನಡೆದಿದೆ.
ತುಮಕೂರು ಕ್ಷೇತ್ರದ ಹಾಲಿ ಸಂಸದರು ಕಾಂಗ್ರೆಸ್ನ ಮುದ್ದಹನುಮೇಗೌಡ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಆದರೆ, ಮುದ್ದಹನುಮೇಗೌಡ ಅವರು ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮೈತ್ರಿ ಮಾಡಿಕೊಂಡ ಎರಡು ಪಕ್ಷಗಳಿಗೆ ಬಂಡಾಯವೇ ಬಿಸಿತುಪ್ಪವಾಗಿದೆ.
ಕಾಂಗ್ರೆಸ್ ನಾಯಕರ ನಡೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ. 'ನಿಮ್ಮ ಸ್ಥಳೀಯ ನಾಯಕರಿಗೆ ಬುದ್ಧಿ ಹೇಳಿ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಚಿವ ಜಮೀರ್ ಅಮಹದ್ ಖಾನ್ ಅವರಿಗೆ ಹೇಳಿದ್ದಾರೆ. ತುಮಕೂರಿನಿಂದ ಜಿ.ಎಸ್.ಬಸವರಾಜು ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆದರೆ, ಮೈತ್ರಿ ಅಭ್ಯರ್ಥಿ ಯಾರು?...

ಪರಮೇಶ್ವರ ನಿವಾಸದಲ್ಲಿ ಸಭೆ
ತುಮಕೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ತುಮಕೂರು ಭಾಗದ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು. ಸೋಮವಾರ ಯಾರು ನಾಮಪತ್ರ ಸಲ್ಲಿಸಬೇಕು? ಎಂಬುದು ಇನ್ನೂ ಅಂತಿಮವಾಗಿಲ್ಲ.

ದೇವೇಗೌಡರ ಭೇಟಿ
ಭಾನುವಾರ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಅವರು ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಪುನರ್ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಎರಡೂ ಕ್ಷೇತ್ರದಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ.ಕುಮಾರಸ್ವಾಮಿ ಗರಂ
ತುಮಕೂರು ಕ್ಷೇತ್ರದ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ. ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ ಎಂಬುದು ಇದಕ್ಕೆ ಕಾರಣವಾಗಿದೆ. 'ನಿಮ್ಮ ಸ್ಥಳೀಯ ನಾಯಕರಿಗೆ ಬುದ್ಧಿ ಹೇಳಿ' ಎಂದು ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದಾರೆ.

ಸೋಮವಾರ ನಾಮಪತ್ರ ಸಲ್ಲಿಕೆ
ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದು, 'ಮುದ್ದಹನುಮೇಗೌಡ ಅವರ ವಿಚಾರವನ್ನು ಕಾಂಗ್ರೆಸ್ ನಾಯಕರು ನೋಡಿಕೊಳ್ಳುತ್ತಾರೆ. ನಾನು ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ' ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಸುತ್ತೇನೆ
ತುಮಕೂರು ಕ್ಷೇತ್ರದ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಈ ಕುರಿತು ಮಾತನಾಡಿದ್ದು, 'ಮಾ.25ರ ಸೋಮವಾರ 11 ಗಂಟೆಗೆ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಅಭ್ಯರ್ಥಿ ಅಂತಿಮಗೊಳಿಸುವ ಹೊಣೆ ಪಕ್ಷದ ನಾಯಕರಿಗೆ ಸೇರಿದ್ದು' ಎಂದು ಹೇಳಿದ್ದಾರೆ.

ಕೆ.ಎನ್.ರಾಜಣ್ಣ
ಮತ್ತೊಂದು ಕಡೆ ಕಾಂಗ್ರೆಸ್ಗೆ ಬಂಡಾಯದ ಬಿಸಿಯೂ ತಟ್ಟಿದೆ. ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ಅವರು, 'ಸೋಮವಾರ ನಾನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ' ಎಂದು ಹೇಳಿದ್ದಾರೆ.












Click it and Unblock the Notifications