ತುಮಕೂರು : ದೇವೇಗೌಡ ವಿರುದ್ಧ ಇಬ್ಬರು ಕಾಂಗ್ರೆಸ್ ನಾಯಕರ ನಾಮಪತ್ರ
ತುಮಕೂರು, ಮಾರ್ಚ್ 25 : ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು?. ಸೋಮವಾರ ಮೂವರು ನಾಯಕರು ನಾಮಪತ್ರ ಸಲ್ಲಿಸಿದ ಬಳಿಕ ಈ ಪ್ರಶ್ನೆ ಹುಟ್ಟಿಕೊಂಡಿದೆ. ಕಾಂಗ್ರೆಸ್ಗೆ ಬಂಡಾಯದ ಬಿಸಿ ತಟ್ಟಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸೋಮವಾರ ತುಮಕೂರು ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ದೇವೇಗೌಡರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಮುದ್ದಹನುಮೇಗೌಡ, ಕೆ.ಎನ್.ರಾಜಣ್ಣ ಅವರು ಸಹ ನಾಮಪತ್ರ ಸಲ್ಲಿಸಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತುಮಕೂರು ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಆದರೆ, ಹಾಲಿ ಸಂಸದ ಕಾಂಗ್ರೆಸ್ನ ಮುದ್ದ ಹನುಮೇಗೌಡ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
'ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ' ಎಂದು ಹೇಳಿದ್ದ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಸಹ ಇಂದು ನಾಮಪತ್ರ ಸಲ್ಲಿಸಿದ್ದಾರೆ. ತುಮಕೂರು ಕ್ಷೇತ್ರದ ಅಧಿಕೃತ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಎಚ್.ಡಿ.ದೇವೇಗೌಡ ನಾಮಪತ್ರ
ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡರು ಸೋಮವಾರ ನಾಮಪತ್ರ ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜೆಡಿಎಸ್ ನಾಯಕ ರಮೇಶ್ ಬಾಬು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೆ.ಎನ್.ರಾಜಣ್ಣ ನಾಮಪತ್ರ
ಮಧುಗಿರಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಅವರು ತುಮಕೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. 'ಜೆಡಿಎಸ್ ಪಕ್ಷಕ್ಕೆ ತುಮಕೂರಲ್ಲಿ ಟಿಕೆಟ್ ಕೊಟ್ಟರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಅವರು ಹೇಳಿದ್ದರು. ಕಾಂಗ್ರೆಸ್ ಉಳಿವಿಗಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಜೆಡಿಎಸ್ ವಿರುದ್ಧ ಅಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದರು.

ಮುದ್ದಹನುಮೇಗೌಡ ನಾಮಪತ್ರ
ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಎಚ್.ಡಿ.ದೇವೇಗೌಡರ ವಿರುದ್ಧ ಇಬ್ಬರು ಕಾಂಗ್ರೆಸ್ ನಾಯಕರು ನಾಮಪತ್ರವನ್ನು ಸಲ್ಲಿಸಿದ್ದು, ಕಾಂಗ್ರೆಸ್ಗೆ ಬಂಡಾಯದ ಬಿಸಿ ತಟ್ಟಿದೆ.

ನಾಮಪತ್ರ ವಾಪಸ್ ಪಡೆಯುತ್ತಾರೆಯೇ?
ಮೂವರು ಅಭ್ಯರ್ಥಿಗಳ ಪೈಕಿ ಯಾರು ಅಧಿಕೃತ ಅಭ್ಯರ್ಥಿ ಎಂಬುದು ಎರಡು ದಿನದಲ್ಲಿ ಅಂತಿಮವಾಗುವ ಸಾಧ್ಯತೆ ಇದೆ. ಮುದ್ದಹುನುಮೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಲ್ಲಿಸಲು ಪಕ್ಷದಿಂದ ಬಿ.ಫಾರಂ ನೀಡಬೇಕು. ಇಲ್ಲವಾದಲ್ಲಿ ನಾಮಪತ್ರ ತಿರಸ್ಕಾರವಾಗಲಿದೆ.












Click it and Unblock the Notifications