ವಿಡಿಯೋ: ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ; ಶ್ರೀಗಳ ಗದ್ದುಗೆ ಬಳಿ ಕೂತು ಧ್ಯಾನ
ತುಮಕೂರು, ಮಾರ್ಚ್ 31: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.
ತುಮಕೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕ್ಯಾತಸಂದ್ರ ಟೋಲ್ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ನಂತರ ಸಿದ್ದಗಂಗಾ ಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಗದ್ದುಗೆ ಬಳಿ ಕೂತು ಓಂ ನಮಃ ಶಿವಾಯ... ಪ್ರಾರ್ಥನೆ ವೇಳೆ ಕಣ್ಮುಚ್ಚಿ ಧ್ಯಾನದಲ್ಲಿ ತಲ್ಲೀನರಾಗಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವ ಎಂ.ಬಿ. ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಆರ್. ಧ್ರುವನಾರಾಯಣ ಸೇರಿದಂತೆ ಹಲವರು ಸಾಥ್ ನೀಡಿದರು. ಇದೇ ವೇಳೆ ಸಿದ್ದಗಂಗಾ ಮಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.
ಹಣೆಗೆ ವಿಭೂತಿ ಇಟ್ಟಿಕೊಂಡು ರಾಹುಲ್ ಗಾಂಧಿ, ಧ್ಯಾನ ಕೇಂದ್ರಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಉಪಾಹಾರ ಸೇವಿಸಿದರು. ಇಡ್ಲಿ, ದೋಸೆ, ಉಪ್ಪಿಟ್ಟು, ಬೋಂದಿ-ಪಾಯಸ ಸೇವಿಸಿದರು.