COVID-19: ಆಂಧ್ರ ಪ್ರದೇಶದಲ್ಲಿ ಕೋವಿಡ್ ಕಾಟ: ಪಾವಗಡ ತಾಲ್ಲೂಕಿನಲ್ಲಿ ತೀವ್ರಗೊಂಡ ತಪಾಸಣೆ
ತುಮಕೂರು, ಜುಲೈ 18: ಇದೇ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಕೋವಿಡ್ ಕಾಟ ಇದೀಗ ಮತ್ತೆ ಶುರುವಾಗಿದೆ. ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿಢೀರ್ ಏರಿಕೆ ಆಗಿರುವುದು ಮತ್ತು ಇಬ್ಬರು ಸಾವುನ್ನಪ್ಪಿರುವ ಹಿನ್ನೆಲೆ ಕರ್ನಾಟಕದ ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿ ಭಾಗಗಳಲ್ಲಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ.
ವಿಶೇಷವಾಗಿ ಆಂಧ್ರಪ್ರದೇಶದಿಂದ ಪಾವಗಡದ ಮೂಲಕ ಕರ್ನಾಟಕಕ್ಕೆ ಆಗಮಿಸುವ ಸಾರ್ವಜನಿಕರ ಹಾಗೂ ಪ್ರಯಾಣಿಕರ ತಪಾಸಣೆಯನ್ನು ಅಧಿಕಾರಿಗಳು ಚುರುಕುಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಯಾವೆಲ್ಲಾ ಭಾಗಗಳಲ್ಲಿ ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದ ಎಂದು ಇಲ್ಲಿ ಗಮನಿಸಿ.

ಎಲ್ಲೆಲ್ಲಿ ಚೆಕ್ಪೋಸ್ಟ್ ಸ್ಥಾಪನೆ?
* ರಾಜವಂತಿ
* ನಾಗಲಮಡಿಕೆ
* ಅರಸೀಕೆರೆ
* ಟಿ.ಎನ್.ಪೇಟೆ
ವೈದ್ಯಕೀಯ ಸಿಬ್ಬಂದಿಗಳ ನಿಯೋಜನೆ
ಈ ಭಾಗಗಳಲ್ಲಿ ತುರ್ತು ಆರೋಗ್ಯ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಅಗತ್ಯ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಗಡಿಯ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ತಡೆದು ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ವಿಶೇಷವಾಗಿ ಜ್ವರ, ಕೆಮ್ಮು ಅಥವಾ ನೆಗಡಿಯಂತಹ ಲಕ್ಷಣಗಳು ಕಂಡುಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲಾಗುತ್ತಿದೆ.
ಒಂದು ವೇಳೆ ಯಾರಲ್ಲಾದರೂ ತೀವ್ರ ಜ್ವರದ ಲಕ್ಷಣಗಳು ಪತ್ತೆಯಾದಲ್ಲಿ ಅವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ. ಬಳಿಕ ಮುಂದಿನ ಹೆಚ್ಚಿನ ತಪಾಸಣೆ ಹಾಗೂ ಚಿಕಿತ್ಸೆಗಾಗಿ ಪಾವಗಡದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲು ಅಗತ್ಯ ಆಂಬುಲೆನ್ಸ್ ಹಾಗೂ ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.
ಆರೋಗ್ಯ ಅಧಿಕಾರಿಗಳಿಂದ ಮಹತ್ವದ ಮನವಿ
ಸೋಂಕು ಹರಡದಂತೆ ತಡೆಯಲು ಗಡಿ ಭಾಗದಲ್ಲಿ ಕೈಗೊಂಡಿರುವ ಈ ಮುಂಜಾಗ್ರತಾ ಕ್ರಮಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕು. ತಪಾಸಣೆಯ ವೇಳೆ ಆರೋಗ್ಯ ಸಿಬ್ಬಂದಿಯೊಂದಿಗೆ ಮುಕ್ತವಾಗಿ ಮಾಹಿತಿ ಹಂಚಿಕೊಳ್ಳುವ ಮೂಲಕ ಸಹಕರಿಸಬೇಕಾಗಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.












Click it and Unblock the Notifications