ಬಾಣಂತಿ-ಅವಳಿ ಮಕ್ಕಳ ಸಾವು: ವಿಶೇಷ ಸಮಿತಿಯಿಂದ 2 ವಾರದಲ್ಲಿ ವರದಿ ಸಲ್ಲಿಕೆಗೆ ಸೂಚನೆ
ತುಮಕೂರು, ನವೆಂಬರ್ 04: ತುಮಕೂರಿನಲ್ಲಿ ಗರ್ಭಿಣಿ ಮಹಿಳೆ ಮತ್ತು ಇಬ್ಬರು ನವಜಾತ ಶಿಶುಗಳ ದುರದೃಷ್ಟಕರ ಸಾವಿನಿಂದ ನನಗೆ ತುಂಬಾ ನೋವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದಿರುವ ಘಟನೆಯ ಬಗ್ಗೆ ಟ್ವೀಟ್ ಮಾಡಿರುವ ಅವರು, "ನಿನ್ನೆ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಆಘಾತಕಾರಿ ಘಟನೆಯನ್ನು ಅವಲೋಕಿಸಿದ ನಂತರ, ಈ ಬಗ್ಗೆ ತನಿಖೆ ಮತ್ತು ಕಠಿಣ ಕ್ರಮಕ್ಕೆ ಆದೇಶಿಸಿದ್ದೇನೆ," ಎಂದಿದ್ದಾರೆ.
ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ, ಹೆರಿಗೆ ವಾರ್ಡ್ನ ಮೂವರು ದಾದಿಯರು ಮತ್ತು ಕರ್ತವ್ಯದಲ್ಲಿರುವ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವುದರ ಜೊತೆಗೆ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದ್ದೇನೆ ಎಂದು ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

ದಾಖಲೆಗಿಂತ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ಬಹಳ ಮುಖ್ಯ
ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದೇ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಆದ್ಯ ಕರ್ತವ್ಯವಾಗಿರುತ್ತದೆ. ಇಂಥ ಸಂದರ್ಭಗಳಲ್ಲಿ ದಾಖಲೆಗಳಿಗಿಂತ ಮೊದಲು ಚಿಕಿತ್ಸೆ ನೀಡುವುದು ಬಹಳ ಮುಖ್ಯವಾಗಿರುತ್ತದೆ. ಇಂಥದ್ದೇ ಸಂದರ್ಭಗಳಿಗೆ ಸಂಬಂಧಿಸಿದಂತೆ ಈ ಹಿಂದೆಯೂ ಸಹ ಹಲವು ಆದೇಶಗಳ ಮೂಲಕ ಸರ್ಕಾರವು ಅದನ್ನು ಸ್ಪಷ್ಟವಾಗಿ ತಿಳಿಸಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಮೊದಲು ಚಿಕಿತ್ಸೆ ನೀಡುವಂತೆ ಸ್ಪಷ್ಟಪಡಿಸುವ ಬಗ್ಗೆ ಇಲಾಖೆಯು ಮತ್ತೊಮ್ಮೆ ಆದೇಶವನ್ನು ಹೊರಡಿಸಿದೆ.

ಮೂವರು ಸದಸ್ಯರ ಸಮಿತಿಯಿಂದ 2 ವಾರದಲ್ಲಿ ವರದಿ ಸಲ್ಲಿಕೆ
ತುಮಕೂರಿನಲ್ಲಿ ನಡೆದಿರುವ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯದ ಗಂಭೀರತೆಯನ್ನು ಪರಿಗಣಿಸಲಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ 3 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಪ್ರಕರಣದ ವಿಚಾರಣೆ ನಡೆಸಲಿದ್ದು, ಎರಡು ವಾರಗಳಲ್ಲಿ ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ನಾಲ್ವರು ಸಿಬ್ಬಂದಿ ಅಮಾನತುಗೊಳಿಸಿದ ಸಚಿವರು
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವೈದ್ಯೆ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಆದೇಶ ಹೊರಡಿಸಿದ್ದಾರೆ. "ಈ ಪ್ರಕರಣದಲ್ಲಿ ವೈದ್ಯಕೀಯ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಅವರ ವಿರುದ್ಧ ಕಾನೂನು ಕ್ರಮದ ಪ್ರಾರಂಭದೊಂದಿಗೆ ಅಮಾನತುಗೊಂಡವರನ್ನು ವಜಾಗೊಳಿಸಲಾಗುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಒತ್ತಾಯಿಸುತ್ತೇನೆ," ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ತಾಯಿ-ಮಕ್ಕಳ ಸಾವಿನ ಘಟನೆ ತಿಳಿಯಿರಿ
ತುಮಕೂರಿನಲ್ಲಿ ವಾಸವಾಗಿರುವ ತಮಿಳುನಾಡು ಮೂಲದ 30 ವರ್ಷದ ಮಹಿಳೆ ಕಸ್ತೂರಿ ಎಂಬುವವರಿಗೆ ನವೆಂಬರ್ 2ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿ, ತಾಯಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ವೈದ್ಯರು ಚಿಕಿತ್ಸೆ ನೀಡುವುದಕ್ಕೆ ನಿರಾಕರಿಸಿದ್ದರು. ಇದಲ್ಲದೇ ತುಂಬು ಗರ್ಭಿಣಿಯನ್ನು ವಾಪಸ್ ಕಳುಹಿಸಿದ್ದರು.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದೇ ಕಸ್ತೂರಿ ಅನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದರು. ಆದರೆ ಹಣವಿಲ್ಲದ ಕಾರಣ ಮಹಿಳೆಯು ಮನೆಗೆ ಹಿಂತಿರುಗಿದ್ದರು. ನವೆಂಬರ್ 3ರಂದು ಕಸ್ತೂರಿ ಒಂದು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಮಗುವಿಗೆ ಜನ್ಮ ನೀಡುವ ಸಂದರ್ಭದಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಇದೇ ವೇಳೆ ಅವಳಿ ಮಕ್ಕಳು ಸಹ ಸಾವನ್ನಪ್ಪಿದ್ದು, ಈ ತಾಯಿ ಮತ್ತು ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದರು.












Click it and Unblock the Notifications