ಬಿಜೆಪಿಯಿಂದ ನಮ್ಮ ನಾಯಕರ ಮನೋಸ್ಥೈರ್ಯ ಕುಗ್ಗಿಸುವ ಕೆಲಸ: ಟಿ.ಬಿ. ಜಯಚಂದ್ರ
ತುಮಕೂರು, ಜೂ. 18: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಷೇರು ವಿಕ್ರಯ ಪ್ರಕರಣವನ್ನು ಮುಂದಿಟ್ಟುಕೊಂಡು ಐ.ಟಿ, ಇ.ಡಿಗಳ ಮೂಲಕ ಕೆದಕಿ, ಕಾಂಗ್ರೆಸ್ ಪಕ್ಷಕ್ಕೆ ಚ್ಯುತಿ ತರುವ ಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ, ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಒತ್ತಾಯಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗಲಭೆ, ಹಿಂಸಾಚಾರ ನಡೆದರೆ ಕೇಂದ್ರ ಸರ್ಕಾರವೇ ಹೊಣೆ: ಹೆಚ್.ಬಿ. ಮಂಜಪ್ಪ ಎಚ್ಚರಿಕೆ
ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ನ್ಯಾಷನಲ್ ಹೆರಾಲ್ಡ್ಗೂ ಕಾಂಗ್ರೆಸ್ ಪಕ್ಷಕ್ಕೂ ಒಂದು ಸಂಬಂಧವಿದೆ. ಇದು ನಮ್ಮ ಮನೆಯ ವ್ಯವಹಾರ. ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಹಾಗಿದ್ದರೂ ಸರಕಾರದ ವೈಫಲ್ಯಗಳನ್ನು ಮುಚ್ಚಿಡಲು ಈ ರೀತಿಯ ತಂತ್ರಗಾರಿಕೆಯನ್ನು ಬಳಸುತ್ತಿದೆ. ಸಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿಯನ್ನು ದುಬರ್ಳಕೆ ಮಾಡಿಕೊಂಡು, ದಿನಕ್ಕೆ 18 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನೆಪದಲ್ಲಿ ಟಾರ್ಚರ್ ಮಾಡಿ, ನಮ್ಮ ನಾಯಕರ ಮನೋಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಲು ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.
ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ: ಆರ್. ರಾಮಕೃಷ್ಣ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ನಮ್ಮ ನಾಯಕರು ಯಾವುದೇ ತಪ್ಪು ಮಾಡಿಲ್ಲ. ಈಗಾಗಲೇ ನ್ಯಾಯಾಲಯದಲ್ಲಿ ಪ್ರಕರಣ ನಡೆದು, ಇತ್ಯರ್ಥವಾಗಿದ್ದರೂ ಸಹ ಪದೇ ಪದೇ ನೋಟಿಷ್ ನೀಡಿ, ಜನರ ಮನಸ್ಸಿನಲ್ಲಿ ಕಾಂಗ್ರೆಸ್ ನಾಯಕರ ವಿರುದ್ದ ತಪ್ಪು ಭಾವನೆ ಬರುವಂತೆ ನಡೆದುಕೊಳ್ಳುತ್ತಿದೆ. ಇದು ಖಂಡನೀಯ ಎಂದರು.
"ರಾಹುಲ್ ಗಾಂಧಿ ಯಾವುದೇ ಅತ್ಯಾಚಾರ, ಅನಾಚಾರದಂತಹ ಕೃತ್ಯಗಳನ್ನು ಎಸೆಗಿಲ್ಲ. ದಿನೇ ದಿನೆ ಜನಸಾಮಾನ್ಯರಲ್ಲಿ ಅವರ ಬಗ್ಗೆ ಒಳ್ಳೆಯ ಭಾವನೆಗಳು ಮೂಡುತ್ತಿರುವುದನ್ನು ಸಹಿಸಲಾಗದೆ ಬಿಜೆಪಿ ಕುತಂತ್ರದ ಮೂಲಕ ಹಣಿಯಲು ಹೊರಟಿದೆ. ಇಡಿ, ಐಟಿ ದುರ್ಬಳಕೆಯನ್ನು ಖಂಡಿಸಿ, ಇಂದು ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇದೇ ರೀತಿ ಕಿರುಕುಳ ಮುಂದುವರೆದರೆ ಮತ್ತಷ್ಟು ಹೋರಾಟ ತೀವ್ರಗೊಳ್ಳಲಿದೆ" ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
(ಒನ್ಇಂಡಿಯಾ ಸುದ್ದಿ)