ಜೆಡಿಎಸ್ ಶಾಸಕ ಡಿಸಿ ಗೌರಿ ಶಂಕರ್ ಆಯ್ಕೆ ಅಸಿಂಧು; ಹೈಕೋರ್ಟ್
ಬೆಂಗಳೂರು, ಮಾರ್ಚ್ 30; ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಶಾಸಕರ ಪರ ವಕೀಲರ ಮನವಿ ಹಿನ್ನಲೆಯಲ್ಲಿ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.
ಗುರುವಾರ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಬಿಜೆಪಿಯ ಬಿ. ಸುರೇಶ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ಸುಧೀರ್ಘ ವಿಚಾರಣೆ ನಡೆಸಿದ್ದ ಕೋರ್ಟ್ ಗುರುವಾರಕ್ಕೆ ತೀರ್ಪು ಕಾಯ್ದಿರಿಸಿತ್ತು.

ಶಾಸಕ ಡಿ. ಸಿ. ಗೌರಿ ಶಂಕರ್ ಪರ ವಕೀಲ ಹೇಮಂತ್ ರಾಜ್ ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಆದ್ದರಿಂದ ತೀರ್ಪಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಒಪ್ಪಿಗೆ ನೀಡಿದ ಕೋರ್ಟ್ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಈ ಅವಧಿಯಲ್ಲಿ ಶಾಸಕರು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಹೈಕೋರ್ಟ್ ತೀರ್ಪಿಗೆ ತಡೆ ಪಡೆಯಬಹುದು. ಇಲ್ಲವಾದಲ್ಲಿ ಚುನಾವಣಾ ಅಕ್ರಮ ಪ್ರಕರಣದಲ್ಲಿ ಅನರ್ಹಗೊಳ್ಳುತ್ತಾರೆ.
ನಕಲಿ ವಿಮೆ ಬಾಂಡ್ ಹಂಚಿಕೆ; 2018ರ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಡಿ. ಸಿ. ಗೌರಿ ಶಂಕರ್ ಕ್ಷೇತ್ರದ 32 ಸಾವಿರ ವಯಸ್ಕರು ಮತ್ತು 16 ಸಾವಿರ ಮಕ್ಕಳಿಗೆ ನಕಲಿ ವಿಮೆ ಬಾಂಡ್ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಚುನಾವಣೆಯಲ್ಲಿ ಗೌರಿ ಶಂಕರ್ ವಿರುದ್ಧ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಸುರೇಶ್ ಗೌಡ ಈ ಕುರಿತು ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ ಕೋರ್ಟ್ ಆಯ್ಕೆ ಅಸಿಂಧು ಎಂದು ಆದೇಶ ನೀಡಿದೆ.

ಶಾಸಕ ಡಿ. ಸಿ. ಗೌರಿ ಶಂಕರ್ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕಾರ ಮಾಡಿತ್ತು. ಅಲ್ಲದೇ ಸುಪ್ರೀಂಕೋರ್ಟ್ನಲ್ಲಿಯೂ ಸಹ ಅರ್ಜಿ ವಜಾಗೊಂಡಿತ್ತು. ಸಿಐಡಿ ಪೊಲೀಸರು ನಕಲಿ ವಿಮೆ ಬಾಂಡ್ ಹಂಚಿಕೆ ಕುರಿತು ತನಿಖೆ ನಡೆಸಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು.
ಚುನಾವಣಾ ಅಕ್ರಮಗಳ ಹಿನ್ನಲೆಯಲ್ಲ ಶಾಸಕ ಡಿ. ಸಿ. ಗೌರಿ ಶಂಕರ್ 6 ವರ್ಷಗಳ ಕಾಲ ಅನರ್ಹಗೊಂಡಿದ್ದಾರೆ. ಆದರೆ ಹೈಕೋರ್ಟ್ ತನ್ನ ತೀರ್ಪಿಗೆ 30 ದಿನಗಳ ತಡೆ ನೀಡಿದೆ. ಜೆಡಿಎಸ್ ಪಕ್ಷ 2023ರ ವಿಧಾನಸಭೆ ಚುನಾವಣೆಗೆ ಈಗಾಗಲೇ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡಿದೆ. ಆದರೆ ಈಗ ಕೋರ್ಟ್ ತೀರ್ಪು ಚುನಾವಣೆ ಸಮಯದಲ್ಲಿ ಶಾಸಕರಿಗೆ ಹಿನ್ನಡೆ ಉಂಟು ಮಾಡಿದೆ.
ಏನಿದು ಪ್ರಕರಣ?; 2018ರ ವಿಧಾನಸಭೆ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 82,740 ಮತಗಳನ್ನು ಪಡೆದು ಮಾಜಿ ಸಚಿವ ದಿ. ಚನ್ನಿಗಪ್ಪ ಪುತ್ರ ಡಿ. ಸಿ. ಗೌರಿ ಶಂಕರ್ ಆಯ್ಕೆಯಾಗಿದ್ದರು. ಚುನಾವಣಾ ಸಮಯದಲ್ಲಿ ಅವರು ವಯಸ್ಕರಿಗೆ, ವಿದ್ಯಾರ್ಥಿಗಳಿಗೆ ನಕಲಿ ಆರೋಗ್ಯ ವಿಮಾ ಬಾಂಡ್ ಹಂಚಿಕೆ ಮಾಡಿ ಚುನಾವಣಾ ಅಕ್ರಮ ಎಸಗಿದ್ದಾರೆ ಎಂಬುದು ಆರೋಪವಾಗಿದೆ. ದಿ. ಚನ್ನಿಗಪ್ಪ ಅಧ್ಯಕ್ಷರಾಗಿದ್ದ ಮಾರುತಿ ಸೇವಾ ಟ್ರಸ್ಟ್ ಮೂಲಕ ಗುಂಪು ವಿಮೆ ಬಾಂಡ್ ಹಂಚಿಕೆ ಮಾಡಲಾಗಿತ್ತು.
ನ್ಯೂ ಇಂಡಿಯನ್ ಅಶ್ಯೂರೆನ್ಸ್ ಕಂಪನಿ ಮೂಲಕ ಮೆಡಿ ಅಸಿಸ್ಟ್ ಬಾಂಡ್ ಹಂಚಿಕೆ ಮಾಡಲಾಗಿತ್ತು. ವಿಮಾ ಬಾಂಡ್ನಲ್ಲಿ ಫೋಟೋ ಇರುವ ದಾಖಲೆ ನೀಡಲಾಗಿದೆ. ಇದು ಚುನಾವಣಾ ಅಕ್ರಮವಾಗಿದೆ ಎಂದು ದೂರು ಸಲ್ಲಿಕೆಯಾಗಿತ್ತು. ಸಿಐಡಿ ಪೊಲೀಸರು ಈ ಕುರಿತು ತನಿಖೆ ನಡೆಸಿದ್ದರು. 2020ರ ಜುಲೈನಲ್ಲಿ ಆರಂಭಗೊಂಡ ತನಿಖೆ ಪೂರ್ಣಗೊಂಡು ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. ಪ್ರಕರಣ ರದ್ದು ಕೋರಿ ಶಾಸಕರು ಸಲ್ಲಿಕೆ ಮಾಡಿದ್ದ ಅರ್ಜಿಯೂ ವಜಾಗೊಂಡಿತ್ತು.
ಮಾಜಿ ಸಚಿವ, ಜೆಡಿಎಸ್ ನಾಯಕ ಚನ್ನಿಗಪ್ಪ ವಿರುದ್ಧ ಸಹ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. ಆದರೆ ಅವರು 2020ರಲ್ಲಿ ಮೃತಪಟ್ಟಿದ್ದರು. ಶಾಸಕ ಗೌರಿ ಶಂಕರ್ ಹೈಕೋರ್ಟ್ ತೀರ್ಪಿಗೆ ತಡೆ ನೀಡದಿದ್ದರೆ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.












Click it and Unblock the Notifications