Breaking; ರಸ್ತೆ ಅಪಘಾತ, ಟಿ. ಬಿ. ಜಯಚಂದ್ರ ಆಸ್ಪತ್ರೆಗೆ ದಾಖಲು
ತುಮಕೂರು, ಏಪ್ರಿಲ್ 20; ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿ. ಬಿ. ಜಯಚಂದ್ರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.
ಮಂಗಳವಾರ ರಾತ್ರಿ ಟಿ. ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಫಾರ್ಚೂನರ್ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಬಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ.
ಟಿ. ಬಿ. ಜಯಚಂದ್ರ, ಕಾರು ಚಾಲಕ ಮತ್ತು ಗನ್ ಮ್ಯಾನ್ ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮಾಜಿ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಂಗ್ರೆಸ್ ನಾಯಕ ಟಿ. ಬಿ. ಜಯಚಂದ್ರ ಶಿರಾ ಕ್ಷೇತ್ರದ ಮಾಜಿ ಶಾಸಕರು. 2013ರಲ್ಲಿ ಶಿರಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ನ ಬಿ. ಸತ್ಯನಾರಾಯಣ ವಿರುದ್ಧ ಸೋಲು ಕಂಡಿದ್ದರು. ಬಿ. ಸತ್ಯನಾರಾಯಣ ನಿಧನದ ಬಳಿಕ 2020ರ ನವೆಂಬರ್ನಲ್ಲಿ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಯಿತು.
ಆಗಲೂ ಟಿ. ಬಿ. ಜಯಚಂದ್ರ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದರು. ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ 74,522 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಟಿ. ಬಿ. ಜಯಚಂದ್ರ 63,973 ಮತಗಳನ್ನು ಪಡೆದು ಮತ್ತೆ ಸೋಲು ಅನುಭವಿಸಿದರು.












Click it and Unblock the Notifications