ವಿದ್ಯಾರ್ಥಿಗಳ ಸಾವು: ಮಾಜಿ ಶಾಸಕ ಕಿರಣ್ ಕುಮಾರ್ ಅರೆಸ್ಟ್
ಕಿರಣ್ ಕುಮಾರ್ ಅವರಿಗೆ ಸಂಬಂಧಿಸಿದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ.
ತುಮಕೂರು, ಮಾರ್ಚ್ 9: ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿನ ಹುಳಿಯಾರಿನಲ್ಲಿನ ವಿದ್ಯಾವಾರಿಧಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಮೂವರು ವಿದ್ಯಾರ್ಥಿಗಳು ಸಾವಿಗೀಡಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ವಸತಿ ಗೃಹದಲ್ಲಿದ್ದ 3 ವಿದ್ಯಾರ್ಥಿಗಳು ಬುಧವಾರ ರಾತ್ರಿ 9:30ರ ಸುಮಾರಿಗೆ ರಾತ್ರಿಯೂಟ ಸೇವಿಸಿದ ನಂತರ ಅಸ್ವಸ್ಥರಾಗಿ, ಆಸ್ಪತ್ರೆಗೆ ಸೇರುವ ಮಾರ್ಗ ಮಧ್ಯೆ ನಿಧನ ಹೊಂದಿದ್ದರು. ಈ ಕಾಲೇಜು ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ. ಹಾಗಾಗಿ, ಅವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.[ಹುಳಿಯಾರ್ ಶಾಲೆಯಲ್ಲಿ 3 ವಿದ್ಯಾರ್ಥಿಗಳ ಅನುಮಾನಾಸ್ಪದ ಸಾವು]
ಏತನ್ಮಧ್ಯೆ, ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಿಸಿರುವುದರ ಬಗ್ಗೆ ಅನುಮಾನ ಎದ್ದಿರುವ ಹಿನ್ನೆಲೆಯಲ್ಲಿ, ಹಾಸ್ಟೆಲ್ ನಲ್ಲಿ ನೀಡಲಾಗಿದ್ದ ಊಟದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.