ಕನ್ನಡಿಗರಿಗೆ ಕೆಲಸ ಕೊಡಲಿಲ್ಲ ಅಂದ್ರೆ ಲೈಸೆನ್ಸ್ ರದ್ದಾಗುತ್ತೆ: ಖಾಸಗಿ ಕಂಪನಿಗಳಿಗೆ ಸಚಿವ ಪರಮೇಶ್ವರ್ ಎಚ್ಚರಿಕೆ
ತುಮಕೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳು ಸ್ಥಳೀಯರಿಗೆ ಮೊದಲು ಉದ್ಯೋಗ ಅವಕಾಶ ನೀಡಬೇಕು ಇಲ್ಲವಾದಲ್ಲಿ ಕಂಪನಿಗಳ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ತುಮಕೂರು ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಗಳಿಗೆ ಸ್ಥಳೀಯರಿಗೆ ಕೆಲಸ ಕೊಡುತ್ತಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ, ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ತಮಗೆ ಕೆಲಸ ಸಿಗುತ್ತಿಲ್ಲ ಎಂದು ಯುವಕರು ಆತಂಕಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಉದ್ಯೋಗಗಳ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದ ಅವರು, "ಯುವಕನಾಗಿದ್ದ ಸಂದರ್ಭದಲ್ಲಿ ನಗರದ ಜೂನಿಯರ್ ಕಾಲೇಜು ಗ್ರೌಂಡ್ನಲ್ಲಿ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಲು ಅಭ್ಯಾಸ ಮಾಡುತ್ತಿದೆ. ಇಲ್ಲಿಂದ ಬೆಂಗಳೂರಿಗೆ, ಅಲ್ಲಿಂದ ಆಸ್ಟ್ರೇಲಿಯಾಕ್ಕೆ ತೆರಳಿದೆ ಕೊನೆಗೆ ತನ್ನ ತುಮಕೂರಿಗೆ ವಾಪಸು ಬಂದಿದ್ದೇನೆ, ಇಲ್ಲಿನ ಜನ ನನಗೆ ಅಪಾರ ಪ್ರೀತಿ ತೋರಿಸಿದ್ದಾರೆ ಅದನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ" ಎಂದು ಹೇಳಿದರು.
ಪರಮೇಶ್ವರ್ ಮಾತಿನಿಂದ ಬದಲಾಗುತ್ತಾ ಪರಿಸ್ಥಿತಿ?
ಸಚಿವ ಪರಮೇಶ್ವರ್ ಅವರು ಖಾಸಗಿ ಕಂಪನಿಗಳಿಗೆ ನೀಡಿರುವ ಎಚ್ಚರಿಕೆ ಬರೀ ಮಾತಾಗಿ ಉಳಿಯಬಾರದು. ಬೆಂಗಳೂರಿಗೆ ಪರ್ಯಾಯವಾಗಿ ತುಮಕೂರು ಅಭಿವೃದ್ಧಿಯಾಗುತ್ತಿದೆ. ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಹಲವು ಕಂಪನಿಗಳು ಈಗಾಗಲೇ ಕಾರ್ಯಾಚರಣೆ ಮಾಡುತ್ತಿವೆ. ಇಲ್ಲಿ ಕನ್ನಡಿಗರಿಗಿಂತ ಹೊರ ರಾಜ್ಯದವರಿಗೆ ಹೆಚ್ಚಾಗಿ ಕೆಲಸ ನೀಡಲಾಗುತ್ತಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಈ ಬಗ್ಗೆ ಸಚಿವರು ಗಮನ ಹರಿಸಿ ಎಲ್ಲಾ ಕಂಪನಿಗಳಿಗೆ ಎಚ್ಚರಿಕೆ ನೀಡುವ ಕೆಲಸ ಆಗಬೇಕಿದೆ.
ಹೊಸದಾಗಿ ಆರಂಭವಾಗಲಿರುವ ಕಂಪನಿಗಳಿಗೆ ಕೂಡ ಮೊದಲನೇ ಈ ಬಗ್ಗೆ ಸ್ಪಷ್ಟವಾಗಿ ಸೂಚನೆ ಕೊಡುವ ಮೂಲಕ ಇಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ಸಿಗುವಂತಾದರೆ ಅಕ್ಕಪಕ್ಕದ ಹಳ್ಳಿಗಳಲ್ಲಿರುವ ನೂರಾವು ವಿದ್ಯಾವಂತ ಯುವಕರಿಗೆ ಕೆಲಸ ಸಿಕ್ಕಂತಾಗುತ್ತದೆ.
ಪರಮೇಶ್ವರ್ ಮಾತಿಗೆ ಮೆಚ್ಚುಗೆ
ಇನ್ನು ಸಚಿವ ಪರಮೇಶ್ವರ್ ಅವರು ಈ ಬಗ್ಗೆ ಮಾತನಾಡಿರುವುದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಚಿವರಿಗೆ ಆದರೂ, ಇದರ ಬಗ್ಗೆ ಕಾಳಜಿ ಇದೆಯಲ್ಲಾ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ಇದು ಬರಿ ಹೇಳಿಕೆಯಾಗಬಾರದು, ಇದನ್ನು ಆದಷ್ಟು ಬೇಗ ಜಾರಿ ಮಾಡಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.












Click it and Unblock the Notifications