ಸೋಂಕಿತರಲ್ಲಿ ಧೈರ್ಯ ತುಂಬಿ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮುಲು ಮನವಿ
ತುಮಕೂರು, ಏ. 25: ಕೊರೊನಾ ಮಾಹಾಮಾರಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು, ಇವತ್ತು ತುಮಕೂರು ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಈಗಾಗಲೇ ರಾಜ್ಯದ 21 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದಾರೆ. 22ನೇ ಜಿಲ್ಲೆಯಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಇದಕ್ಕೂ ಮೊದಲು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತೆ ಕುರಿತು ಪರಿಶೀಲನಾ ಸಭೆಯನ್ನು ಶ್ರೀರಾಮುಲು ನಡೆಸಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಸ್ಠಾಧಿಕಾರಿ ಹಾಗು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಬಳಿಕ ತುಮಕೂರು ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಜನರು ಯಾವುದೇ ಆತಂಕಕ್ಕೆ ಒಳಗಾಗ ಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ವೈರಸ್ ಹರಡದಂತೆ ತಡೆಯಲು ರಚಿಸಲಾಗಿರುವ ಟಾಸ್ಕ್ ಫೋರ್ಸ್ ಟೀಂ ಪರಿಶೀಲನೆಯನ್ನು ಇದೇ ಸಂದರ್ಭದಲ್ಲಿ ಸಚಿವ ಶ್ರೀರಾಮುಲು ಅವರು ಮಾಡಿದ್ದಾರೆ. ವೈದ್ಯರು ಜನರಲ್ಲಿ ಸೂಕ್ತ ಅರಿವು ಮೂಡಿಸುವಂತೆ ಸಭೆಯಲ್ಲಿ ಸೂಚಿಸಿದ್ದಾರೆ.

ಜೊತೆಗೆ ಅತ್ಯಂತ ಚಿಂತಾಜನಕವಾಗಿರುವ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಆರಂಭಿಸಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಫಲಿತಾಂಶ ಬರಲಿದೆ. ಸೋಂಕಿನಿಂದ ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಕೊಡಲಾಗುತ್ತದೆ. ಬೇರೆ ಕಡೆಗಳಲ್ಲಿ ಈಗಾಗಲೇ ಈ ಪದ್ದತಿಯಿಂದ ಉತ್ತಮ ಫಲಿತಾಂಶ ಬಂದಿದೆ. ನಮ್ಮ ರಾಜ್ಯದಲ್ಲಯೂ ಪ್ಲಾಸ್ಮಾ ಥೆರಪಿ ಸಫಲವಾಗಲಿದೆ ಎಂಬ ವಿಶ್ವಾಸವನ್ನು ಶ್ರೀರಾಮುಲು ಅವರು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ. ಜೊತೆಗೆ ವೈದ್ಯರು ಸೋಂಕಿತ ಹಾಗೂ ಶಂಕಿತರಲ್ಲಿ ಧೈರ್ಯ ತುಂಬುವಂತೆಯೂ ಶ್ರೀರಾಮುಲು ಅವರು ಸೂಚಿಸಿದ್ದಾರೆ.












Click it and Unblock the Notifications