ಲೋಕಸಭೆಗೆ ಸ್ಪರ್ಧೆ ಯಡಿಯೂರಪ್ಪ ಹೇಳಿದ್ದೇನು?
ತುಮಕೂರು, ಜ.15 : ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೌನ ಮುರಿದಿದ್ದಾರೆ. ತುಮಕೂರು, ಶಿವಮೊಗ್ಗ ಅಥವ ಯಾವುದೇ ಕ್ಷೇತ್ರದಿಂದ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಂತೆ ಮಾಡುವುದು ತಮ್ಮ ಗುರಿ ಎಂದು ಅವರು ಹೇಳಿದ್ದಾರೆ.
ತಿಪಟೂರಿನಲ್ಲಿ ಮಂಗಳವಾರ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ. ಶಿವಮೊಗ್ಗ, ತುಮಕೂರು ಮಾತ್ರವಲ್ಲ ಈ ಬಾರಿ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಯನ್ನೇ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. [ಶಿವಮೊಗ್ಗದಿಂದ ಯಡಿಯೂರಪ್ಪ ಸ್ಪರ್ಧೆ]

ಬಿಜೆಪಿ ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಆರಂಭಿಸಿದೆ. ಪಕ್ಷಕ್ಕೆ ನಿಷ್ಠೆಯಿಂದಿರುವ ಮತ್ತು ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ. ಕರ್ನಾಟಕದಲ್ಲಿ ಕನಿಷ್ಠ 20 ಸೀಟುಗಳನ್ನು ಗೆಲ್ಲಿಸುವುದು ನಮ್ಮ ಗುರಿ ಎಂದರು. ತಾವು ಚುನಾವಣೆಗೆ ಸ್ಪರ್ಧಿಸದೇ ಪಕ್ಷ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಶ್ರಮಿಸುತ್ತೇನೆ ಎಂದರು.
ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಸಮಾನರಾದ ಪ್ರಧಾನಿ ಅಭ್ಯರ್ಥಿ ಯಾವ ಪಕ್ಷದಲ್ಲೂ ಇಲ್ಲ. ಈಗಾಗಲೇ ದೇಶದ ಶೇ 70 ರಷ್ಟು ಜನರು ಮೋದಿ ಪ್ರಧಾನಿಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಚುನಾವಣೆಯಲ್ಲಿ ದೇಶದ ಅಭಿವೃದ್ಧಿಯ ಪ್ರಶ್ನೆ ಮುಖ್ಯವಾಗಿದೆ. ಅವರು ಪ್ರಧಾನಿಯಾಗಲು ನಾನು ಸಂಪೂರ್ಣವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.
ಬಸವರಾಜ್ ಮನವೊಲಿಸುವೆ : ತುಮಕೂರು ಸಂಸದ ಜಿ.ಎಸ್.ಬಸವರಾಜ್ ಅವರು ಕಾಂಗ್ರೆಸ್ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಜೊತೆ ನಾನು ಮಾತುಕತೆ ನಡೆಸಲಿದ್ದು, ಬಿಜೆಪಿಗೆ ಬರುವಂತೆ ಮನವೊಲಿಸುತ್ತೇನೆ. ಅವರು ಕಾಂಗ್ರೆಸ್ ಸೇರದಂತೆ ತಡೆಯುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು. ಬಸವರಾಜ್ ಬಿಜೆಪಿ ಸೇರ್ಪಡೆಗೆ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವ ಕಾರಣ ಅವರು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ. [ಕಾಂಗ್ರೆಸ್ ಪಕ್ಷದತ್ತ ಬಸವರಾಜ್]
ರಾಜ್ಯಪಾಲರಿಗೆ ಪ್ರತ್ಯುತ್ತರ : ರಾಜಭವನಕ್ಕೆ ಬರಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್.ಯಡಿಯೂರಪ್ಪ, ರಾಜಭವನಕ್ಕೆ ತೆರಳಲು ನಾವೆಲ್ಲಾ ಸಿದ್ಧರಿದ್ದೇವೆ. ಯಾವಾಗ ಹೋಗಬೇಕು ಎಂಬ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. ರಾಜಭವನಕ್ಕೆ ಬಂದು ದೂರು ನೀಡಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲವೆಂಬುದು ರಾಜ್ಯಪಾಲರ ತಪ್ಪು ಗ್ರಹಿಕೆಯಷ್ಟೇ ಎಂದರು.












Click it and Unblock the Notifications