ಲೋಕಸಭೆ: ತುಮಕೂರು ಬಂಡಾಯ ನಾಟಕಕ್ಕೆ ಇಂದು ತೆರೆ
ತುಮಕೂರು, ಮಾರ್ಚ್ 29: ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಮತ್ತು ಮಧುಗಿರಿಯ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ಇಂದು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಿದ್ದರಾಮಯ್ಯ ಅವರು ಚರ್ಚಿಸಿದ ಬಳಿಕ ನಾಮಪತ್ರ ಹಿಂಪಡೆಯುವ ಬಗ್ಗೆ ಮುದ್ದಹನುಮೇಗೌಡರು ತಮ್ಮ ಬೆಂಬಲಿಗರ ಬಳಿ ಚರ್ಚೆ ನಡೆಸಿದ್ದಾರೆ. ಇಂದು ನಿರ್ಧಾರ ಕೈಗೊಳ್ಳಲಿದ್ದಾರೆ.
ಸಿದ್ದರಾಮಯ್ಯ ಸಂಧಾನ ಫಲ: ಮುದ್ದಹನುಮೇಗೌಡ ನಾಮಪತ್ರ ವಾಪಸ್ಗೆ ಒಪ್ಪಿಗೆ ?
ಒಕ್ಕಲಿಗ ಸಮುದಾಯದಲ್ಲಿ ತಾನು ವಿಲನ್ ನಂತೆ ಕಂಡುಬರಲು ಮುದ್ದಹನುಮೇಗೌಡರಿಗೆ ಸಹ ಇಷ್ಟವಿಲ್ಲ. ಜಿಲ್ಲೆಯ ಒಕ್ಕಲಿಗರು ದೇವೇಗೌಡರನ್ನು ಬೆಂಬಲಿಸುತ್ತಾರೆ. ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ನಿಂತಿರುವುದರಿಂದ ಇದು ಪ್ರತಿಷ್ಠೆಯ ಕ್ಷೇತ್ರವಾಗಿದೆ.
ಕಾಂಗ್ರೆಸ್ ನ ಸಂಸದ ಮುದ್ದಹನುಮೇಗೌಡರು ಸ್ಪರ್ಧೆಯಲ್ಲಿ ಇದ್ದರೆ ತಾವು ಕಣದಿಂದ ಹಿಂದೆ ಸರಿಯುವುದಾಗಿ ರಾಜಣ್ಣ ಹೇಳಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರಿಂದ ಮುದ್ದಹನುಮೇಗೌಡರು ಕೂಡ ಸ್ಪರ್ಧೆಯಿಂದ ಹಿಂದೆ ಸರಿಯಲು ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ.
ತುಮಕೂರು ಕಾಂಗ್ರೆಸ್ ಬಂಡಾಯ ಶಮನ : ರಾಜಣ್ಣ ನಾಮಪತ್ರ ವಾಪಸ್!
ನಿನ್ನೆ ಜೆಡಿಎಸ್ ನಾಯಕರ ನಿಯೋಗವೊಂದು ಮುದ್ದಹನುಮೇಗೌಡರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಸಂದರ್ಭದಲ್ಲಿ ಮುದ್ದಹನುಮೇಗೌಡ ತಮ್ಮ ನಿರ್ಧಾರವನ್ನೇನು ಹೇಳಿರಲಿಲ್ಲ.
ಗುರುವಾರ ಸಂಜೆಯ ಹೊತ್ತಿಗೆ ವಿವಿಧ ಕಡೆಯಿಂದ ಒತ್ತಡ ಬಂದಿದ್ದರಿಂದ ತಮ್ಮ ಮನಸ್ಸು ಬದಲಾಯಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಇಂದು ಇದೆಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ.
ಬಂಡಾಯ ಅಭ್ಯರ್ಥಿ ರಾಜಣ್ಣ ಇಂದು ನಾಮಪತ್ರ ವಾಪಸ್
ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ಡಿ ದೇವೇಗೌಡರು ಕಣಕ್ಕಿಳಿಸುತ್ತಾರೆ ಎಂದು ತಿಳಿಯುತ್ತಿದ್ದಂತೆ ಮಧುಗಿರಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ನಾಮಪತ್ರವನ್ನು ವಾಪಸ್ ಪಡೆಯಲು ಮಾ.29 ಕೊನೆಯ ದಿನವಾಗಿದ್ದು, ಇಂದು ನಾಮಪತ್ರ ಹಿಂತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಏಪ್ರಿಲ್ 18ರಂದು ಚುನಾವಣೆ ನಡೆಯಲಿದೆ.
ಸಿದ್ದರಾಮಯ್ಯ ಅವರ ಜೊತೆ ಮಾತುಕತೆ
ನಾಮಪತ್ರ ಹಿಂಪಡೆಯುವ ಕುರಿತು ಗುರುವಾರ ಸಿದ್ದರಾಮಯ್ಯ ನಿವಾಸದಲ್ಲಿ ಕೆ.ಎನ್.ರಾಜಣ್ಣ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಅವರ ಮನವೊಲಿಸಲಾಗಿದ್ದು ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರವನ್ನು ವಾಪಸ್ ಪಡೆಯಲು ಒಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮುದ್ದಹನುಮೇಗೌಡರು ಕೂಡ ನಾಮಪತ್ರ ಹಿಂಪಡೆಯಲಿದ್ದಾರೆ
ತುಮಕೂರು ಕ್ಷೇತ್ರದ ಹಾಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣಕ್ಕೆ ಬಂಡಾಯ ಅಭ್ಯರ್ಥಿಯಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದರು. ಅವರು ಸಹ ನಾಮಪತ್ರವನ್ನು ವಾಪಸ್ ಪಡೆಯಲು ಒಪ್ಪಿಗೆ ನೀಡಿದ್ದಾರೆ. ಅವರ ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ತಿರಸ್ಕಾರ
ಎರಡು ನಾಮಪತ್ರ ಸಲ್ಲಿಸಿದ್ದ ಮುದ್ದಹನುಮೇಗೌಡರು
ಎಸ್.ಪಿ.ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದರು. ಆದರೆ, ಕಾಂಗ್ರೆಸ್ ಬಿಫಾರಂ ಇಲ್ಲದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕಾರಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ.