Tumakuru: ತುಮಕೂರು ಮಳೆ, ಮೈದುಂಬಿದ ಜಯಮಂಗಲಿ ನದಿ
ತುಮಕೂರು, ಆಗಸ್ಟ್ 21: ತುಮಕೂರು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಯಮಂಗಲಿ ನದಿ ತುಂಬಿ ಹರಿಯುತ್ತಿದೆ, ಅಮಾನಿಕೆರೆ ಕೊಡಿ ಬಿದ್ದಿದ್ದು, ಎಸ್ ಮಾಲ್ ಮುಂದಿನ ರಸ್ತೆ ಮುಚ್ಚಲಾಗಿದೆ, ಬದಲಿ ಮಾರ್ಗವನ್ನು ಬಳಸಲು ಜಿಲ್ಲಾ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ. ಈ ವಾರ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಧುಗಿರಿ ತಾಲೂಕಿನ ಜಯಮಂಗಲಿ ನದಿಯು ಉತ್ತಮ ಮಳೆಯಾಗಿ ಮೈದುಂಬಿ ಹರಿಯುತ್ತಿದೆ. ಇದರಿಂದಾಗಿ ನದಿ ಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಎಸ್ಪಿ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಜೀವ ಮತ್ತು ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರು ನಗರದಲ್ಲಿ ಸುರಿದ ಮಳೆಯಿಂದಾಗಿ ಅಮಾನಿಕೆರೆ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿದೆ. ಕರೆ ಕೋಡಿ ಬಿದ್ದಿರುವುದು ಜನರ ಸಂತಸಕ್ಕೆ ಕಾರಣವಾಗಿದೆ. ಕರೆ ಕೋಡಿ ಬಿದ್ದಿರುವ ಕಾರಣ ರಸ್ತೆಯ ಮೇಲೆಯೂ ಕೆರೆ ನೀರು ಹರಿಯುತ್ತಿದೆ. ಆದ್ದರಿಂದ ತುಮಕೂರು ನಗರ-ಶಿರಾಗೇಟ್ಗೆ ತೆರಳುವ ಮಾರ್ಗವನ್ನು ಬಂದ್ ಮಾಡಲಾಗಿದೆ.
ಮಹಾನಗರ ಪಾಲಿಕೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆರೆ ಕೋಡಿ ಪಕ್ಕದಲ್ಲಿ ವಾಸವಾಗಿರುವ ಸುಮಾರು 14 ಕುಟುಂಬಗಳ ಸ್ಥಳಾಂತರಕ್ಕೆ ಪಾಲಿಕೆ ಆಯುಕ್ತೆ ಬಿ. ವಿ. ಅಶ್ವಿಜಾ ಸೂಚನೆ ನೀಡಿದ್ದಾರೆ. ಕೆರೆಯ ನೀರಿನ ಮಟ್ಟ ಇನ್ನೂ ಅಧಿಕವಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತದಿಂದ ಎಚ್ಚರಿಕೆ: ತುಮಕೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದ್ದರಿಂದ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿತ್ತು. ಅಧಿಕಾರಿಗಳು ಸಂಭಾವ್ಯ ಪ್ರವಾಹ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಟುಂಬಗಳ ಸ್ಥಳಾಂತರ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸ್ಥಳೀಯ ಆಡಳಿತಕ್ಕೆ ಸೂಚನೆಗಳನ್ನು ನೀಡುತ್ತಿದ್ದಾರೆ.
ಮಂಗಳವಾರ ರಾತ್ರಿ ಮತ್ತು ಬುಧವಾರ ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭಾರೀ ಮಳೆಯಾಗಿದೆ. ಗುಬ್ಬಿ ತಾಲೂಕಿನ ಬಿದರೆ ಗ್ರಾಮದ ಸಂಪರ್ಕ ರಸ್ತೆಯ ರೈಲ್ವೆ ಅಂಡರ್ಪಾಸ್ನಲ್ಲಿ ಮಳೆ ನೀರು ತುಂಬಿದ ಪರಿಣಾಮ ಬಸ್ ಸಿಲುಕಿತ್ತು. ಇನ್ನು ಕೊರಟಗೆರೆಯಲ್ಲಿ ಅಂಗಡಿ, ಮನೆಗಳಿಗೆ ಮಳೆ ನೀರು ನುಗ್ಗಿದೆ.
ತುಮಕೂರು ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯ ಕಾರಣ ಕೊರಟಗೆರೆ, ಮಧುಗಿರಿ ಮತ್ತು ಪಾವಗಡ ಭಾಗದಲ್ಲಿ ಹರಿಯುವ ಜಯಮಂಗಲಿ ನದಿಯು ತುಂಬಿ ಹರಿಯುತ್ತಿದೆ. ನೂರಾರು ಜನರು ನದಿಯನ್ನು ನೋಡಲು ಆಗಮಿಸುತ್ತಿದ್ದಾರೆ. ನದಿ ತುಂಬಿ ಹರಿದಿದ್ದರಿಂದ ರೈತರು ಸಂತಸಗೊಂಡಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುರಿದ ಮಳೆಗೆ ಶೆಟ್ಟಿಕೆರೆಯ ವಿದ್ಯುತ್ ಸಂಪರ್ಕ ಕೇಂದ್ರಕ್ಕೆ ನೀರು ನುಗ್ಗಿತ್ತು. ಇದರಿಂದಾಗಿ ಆತಂಕ ಎದುರಾಗಿತ್ತು. ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಜನರು ಆರೋಪಿಸಿದ್ದಾರೆ.












Click it and Unblock the Notifications