ತುಮಕೂರಿನ ಜೆಡಿಎಸ್ ನಾಯಕ ಇಂದು ಕಾಂಗ್ರೆಸ್ ಸೇರ್ಪಡೆ!
ತುಮಕೂರು, ಜನವರಿ 21; ಕಾಂಗ್ರೆಸ್ ಪಕ್ಷದ ಕಡೆ ಜೆಡಿಎಸ್ ನಾಯಕ ವಲಸೆ ಮುಂದುವರೆದಿದೆ. ಶುಕ್ರವಾರ ತುಮಕೂರಿನ ಪಕ್ಷದ ನಾಯಕರೊಬ್ಬರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈಗಾಗಲೇ ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಿದ್ದಾರೆ.
ಜೆಡಿಎಸ್ ನಾಯಕ, ವಿಧಾನ ಪರಿಷತ್ನ ಮಾಜಿ ಸದಸ್ಯ ಬೆಮಲ್ ಕಾಂತರಾಜು ಶುಕ್ರವಾರ ಕಾಂಗ್ರೆಸ್ ಸೇರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ.
ಕಾಂಗ್ರೆಸ್ನತ್ತ ಹೊರಟ ಮತ್ತೊಬ್ಬ ಜೆಡಿಎಸ್ ನಾಯಕ!
ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಬೆಮಲ್ ಕಾಂತರಾಜು ಜೆಡಿಎಸ್ ಪಕ್ಷ ತೊರೆಯುವುದಾಗಿ ಹಲವು ದಿನಗಳ ಹಿಂದೆಯೇ ಘೋಷಣೆ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ಜೆಡಿಎಸ್ ತೊರೆಯುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ!
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಬೆಮಲ್ ಕಾಂತರಾಜು ಆಯ್ಕೆಯಾಗಿದ್ದರು. ಈ ವರ್ಷದ ಜನವರಿ 5ರಂದು ಅವರ ಸದಸ್ಯತ್ವದ ಅವಧಿ ಪೂರ್ಣಗೊಂಡಿದೆ. ಡಿಸೆಂಬರ್ನಲ್ಲಿ ವಿಧಾನ ಪರಿಷತ್ ಚುನಾವಣೆ ನಡೆದಾಗ ಕಣಕ್ಕಿಳಿಯಲು ಅವರು ನಿರಾಕರಿಸಿದ್ದರು.
ಮೈಸೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಜೆಡಿಎಸ್ ಸೇರ್ಪಡೆ
ಡಿ. ಕೆ. ಶಿವಕುಮಾರ್ ಹೇಳಿಕೆ
ಬೆಮಲ್ ಕಾಂತರಾಜು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. "ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕಾಂತರಾಜು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೋವಿಡ್ ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಕಾರ್ಯಕ್ರಮಕ್ಕೆ ಕಾಂತರಾಜು ಬೆಂಬಲಿಗರು ಬರಬಾರದು. ಜವಾಬ್ದಾರಿಯುತ ಜನಪ್ರತಿನಿಧಿಗಳಾಗಿ ಕೋವಿಡ್ ನಿಯಮಗಳ ಪಾಲನೆ ಕಡ್ಡಾಯ. ಆಹ್ವಾನಿತ ಮುಖಂಡರನ್ನು ಹೊರತುಪಡಿಸಿ ಬೇರೆ ಯಾರೂ ಕಾರ್ಯಕ್ರಮಕ್ಕೆ ಬರಬಾರದು. ಕಾರ್ಯಕರ್ತರ ಮತ್ತು ಜನರ ಹಿತದೃಷ್ಟಿಯಿಂದ ನನ್ನ ಮನವಿಗೆ ಸ್ಪಂದಿಸಬೇಕು" ಎಂದು ಹೇಳಿಕೆ ನೀಡಿದ್ದಾರೆ.
ಪರಿಷತ್ ಚುನಾವಣೆಗೆ ಸ್ಪರ್ಧಿಸಿರಲಿಲ್ಲ
ಜೆಡಿಎಸ್ ಪ್ರಾಬಲ್ಯವಿರುವ ತುಮಕೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಈಗ ಹಿನ್ನಡೆಯಾಗುತ್ತಿದೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಬೆಮಲ್ ಕಾಂತರಾಜು 2021ರ ಡಿಸೆಂಬರ್ನಲ್ಲಿ ತುಮಕೂರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ಆಗ ಪಕ್ಷ ಅನಿಲ್ ಕುಮಾರ್ ಕಣಕ್ಕಿಳಿಸಿತ್ತು. ಆದರೆ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್. ರಾಜೇಂದ್ರ ಎದುರು ಸೋಲು ಕಂಡಿದ್ದರು. ಈಗ ಬೆಮಲ್ ಕಾಂತರಾಜು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ.
ವಿಧಾನಸಭೆ ಚುನಾವಣೆಗೆ ಸ್ಪರ್ಧೆ?
"ವಿಧಾನ ಪರಿಷತ್ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ" ಎಂದು ಬೆಮಲ್ ಕಾಂತರಾಜು ಚುನಾವಣೆ ಘೋಷಣೆಯಾದಾಗಲೇ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸೇರಲಿರುವ ಅವರು 2023ರ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳಿವೆ. ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದಿಂದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕುಮಾರಸ್ವಾಮಿ ವಿರುದ್ಧ ಅಸಮಾಧಾನ
ಜೆಡಿಎಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಬೆಮಲ್ ಕಾಂತರಾಜು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ತುರುವೇಕೆರೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ, "ಬೆಮಲ್ ಕಾಂತರಾಜು ಯಾರು?" ಎಂದು ಪ್ರಶ್ನಿಸಿದ್ದರು.
ಆಗ ಪ್ರತಿಕ್ರಿಯೆ ನೀಡಿದ್ದ ಬೆಮಲ್ ಕಾಂತರಾಜು, "ನಾನು ಜೆಡಿಎಸ್ನಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ಧೇನೆ. ಪಕ್ಷ ಸಂಘಟನೆಗಾಗಿ ಕೆಲಸ ಮಾಡಿದ್ದೇನೆ. ಆದರೆ ಕುಮಾರಸ್ವಾಮಿ ನನ್ನನ್ನು ಯಾರು? ಎಂದು ಕೇಳಿದ್ದು ಬೇಸರ ತರಿಸಿದೆ" ಎಂದು ಹೇಳಿದ್ದರು.
ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಹೇಳಿದ್ದರು
ಬೆಮಲ್ ಕಾಂತರಾಜು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, "ನಾನು ಜೆಡಿಎಸ್ ಪಕ್ಷದಲ್ಲಿ ಇರುವಾಗವೇ ಎಚ್. ಡಿ. ಕುಮಾರಸ್ವಾಮಿ ಬೆಮಲ್ ಕಾಂತರಾಜ್ ಯಾರು? ಎಂದು ಕೇಳಿದ್ದಾರೆ. ಅಂದರೆ ನಾನು ಯಾರು ಎಂದು ಗೊತ್ತಿಲ್ಲ ಅಂತಾನೆ ಅರ್ಥ, ಹಾಗಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ನಾನು ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ" ಎಂದು ಹೇಳಿದ್ದರು.
Recommended Video