ಸಿದ್ದಗಂಗಾಶ್ರೀಗಳ ಹೆಸರು ಭಾರತ ರತ್ನ ಪ್ರಶಸ್ತಿಗೆ ಶಿಫಾರಸು
ತುಮಕೂರು, ಆಗಸ್ಟ್ 09: ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಬುಧವಾರದಂದು ಹೇಳಿದರು.
ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು.

ಯಾವುದೇ ಜಾತಿ, ಭೇದವಿಲ್ಲದೆ ಎಲ್ಲಾ ಸಮುದಾಯದ ಗ್ರಾಮೀಣ ಪ್ರದೇಶದ ಬಡವ, ಕೆಳವರ್ಗದ ಮಕ್ಕಳಿಗೆ ಉಚಿತವಾಗಿ ಅನ್ನ, ವಸತಿ ಸಹಿತ ಶಿಕ್ಷಣ ನೀಡುವ ಮೂಲಕ ಮಕ್ಕಳು ಆದರ್ಶ ರೀತಿಯಲ್ಲಿ ಬದುಕುವುದನ್ನು ಶ್ರೀಗಳು ಕಲಿಸುತ್ತಿದ್ದಾರೆ ಎಂದರು.
ಶ್ರೀಗಳ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುತ್ತಮ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿರುವ ಶ್ರೀಗಳ ಭಕ್ತರು, ನಾಯಕರಿಗೆ ನಮ್ಮ ಬೆಂಬಲವಿದೆ ಎಂದರು.
ಏಪ್ರಿಲ್ 01, 1908ರಂದು ಜನಿಸಿದ ಶಿವಕುಮಾರ ಸ್ವಾಮೀಜಿ ಅವರಿಗೆ 2015ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಸಿದ್ಧಗಂಗಾ ಕ್ಷೇತ್ರ ಪ್ರವೇಶಿಸಿದರು. ಅಂದಿನಿಂದ ಸಿದ್ಧಗಂಗಾ ಮಠಕ್ಕೆ ಹೊಸ ಬೆಳಕು ಮೂಡಿಬಂತು.
ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಅಣತಿಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು. ನಂತರ ಸಿದ್ಧಗಂಗಾ ಕ್ಷೇತ್ರದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆಯಾಯಿತು.












Click it and Unblock the Notifications