ತುಮಕೂರು : ಸೊಗಡು ಶಿವಣ್ಣಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರಣ ಬಹಿರಂಗ!
ತುಮಕೂರು, ಏಪ್ರಿಲ್ 26 : 'ನಾನು ಯಡಿಯೂರಪ್ಪ ಅವರ ಜೊತೆ ಕೆಜೆಪಿ ಸೇರದ ಕಾರಣ ಈ ಬಾರಿಯ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್ ನೀಡಿಲ್ಲ' ಎಂದು ಮಾಜಿ ಸಚಿವ ಸೊಗಡು ಶಿವಣ್ಣ ದೂರಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬಳಿಕ ತುಮಕೂರು ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಸಚಿವ ಸೊಗಡು ಶಿವಣ್ಣ ಈ ಬಾರಿಯ ಚುನಾವಣೆಯಲ್ಲಿ ತಟಸ್ಥರಾಗಿರುವುದಾಗಿ ಘೋಷಣೆ ಮಾಡಿದ್ದಾರೆ.
ಸೊಗಡು ಶಿವಣ್ಣ ತುಮಕೂರು ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಜ್ಯೋತಿ ಗಣೇಶ್ ಅವರಿಗೆ ಬಿಜೆಪಿ ನಾಯಕರು ಟಿಕೆಟ್ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಅವರು ತಟಸ್ಥವಾಗಿರುವುದಾಗಿ ಘೋಷಣೆ ಮಾಡಿದ್ದಾರೆ.

ತುಮಕೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸೊಗಡು ಶಿವಣ್ಣ ಅವರು, 'ನಾನು ಮತ್ತು ನನ್ನ ಬೆಂಬಲಿಗರು ಚುನಾವಣೆಯಲ್ಲಿ ತಟಸ್ಥರಾಗಿರುತ್ತೇವೆ. ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ದುಡಿದ ಎಲ್ಲಾ ನಾಯಕರನ್ನು ಕಡೆಗಣಿಸಲಾಗಿದೆ' ಎಂದು ಆರೋಪಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
'ಪಕ್ಷದ ರಾಜ್ಯ ನಾಯಕರ ನಡುವೆ ಸಮನ್ವಯದ ಕೊರತೆ ಇದೆ. ಮಾಜಿ ಸಂಸದ ಜಿ.ಎಸ್.ಬಸವರಾಜು ಅವರು ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ನಾಶ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರಿಗೂ ನಾನು ಈ ಕುರಿತು ಮಾಹಿತಿ ನೀಡಿದ್ದೇನೆ' ಎಂದರು.
'ಬಿ.ಎಸ್.ಯಡಿಯೂರಪ್ಪ ಅವರು ಜಿ.ಎಸ್.ಬಸವರಾಜು ಪುತ್ರ ಜ್ಯೋತಿ ಗಣೇಶ್ ಅವರಿಗೆ ತುಮಕೂರು ನಗರ ಕ್ಷೇತ್ರದ ಟಿಕೆಟ್ ನೀಡಿದ್ದಾರೆ. ಕಳೆದ ಬಾರಿ ಜ್ಯೋತಿ ಗಣೇಶ್ ಕೆಜೆಪಿ ಅಭ್ಯರ್ಥಿಯಾಗಿದ್ದರು. ನಾನು ಯಡಿಯೂರಪ್ಪ ಅವರ ಜೊತೆ ಕೆಜೆಪಿ ಸೇರದ ಕಾರಣ ಈ ಬಾರಿ ಟಿಕೆಟ್ ನೀಡಿಲ್ಲ' ಎಂದು ದೂರಿದರು.












Click it and Unblock the Notifications