ನೊಣವಿನಕೆರೆ ಸ್ವಾಮೀಜಿ ಭೇಟಿ ಮಾಡಿದ ಮಾಜಿ ಸಚಿವ ಎಚ್ ವಿಶ್ವನಾಥ್
ತುಮಕೂರು, ಜೂ. 15: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಮಾಜಿ ಸಚಿವ ಎಚ್. ವಿಶ್ವನಾಥ್ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಈಗ ಎಚ್. ವಿಶ್ವನಾಥ್ ಅವರು ತುಮಕೂರು ಜಿಲ್ಲೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಯೋಗೀಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಮಾಜಿ ಸಚಿವ ಎಚ್. ವಿಶ್ವನಾಥ್ ಸೇರಿದಂತೆ 17 ಜನರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದರು. ಬಳಿಕ ನಡೆದಿದ್ದ ಉಪ ಚುನಾವಣೆಯಲ್ಲಿ ಎಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಅವರು ಸೋತಿದ್ದರು. ಅವರ ಸೋಲಿನ ಹೊರತಾಗಿಯೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಸಫಲವಾಗಿತ್ತು.
ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ ಎಚ್. ವಿಶ್ವನಾಥ್ ಹಾಗೂ ಎಂಟಿಬಿ ಹಾಗೂ ವಿಶ್ವನಾಥ್ ಅವರು ಉಪ ಚುನಾವಣೆಯಲ್ಲಿನ ಸೋಲಿನಿಂದಾಗಿ ಬಿಜೆಪಿ ಸರ್ಕಾರ ಬಂದರೂ ಅತಂತ್ರರಾಗಿದ್ದಾರೆ. ಹೀಗಾಗಿ ಇಬ್ಬರೂ ನಾಯಕರು ಇದೀಗ ವಿಧಾನ ಪರಿಷತ್ ಪ್ರವೇಶಿಸಿ ಮಂತ್ರಿಯಾಗಲು ಕಸರತ್ತು ನಡೆಸಿದ್ದಾರೆ. ಮೊನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಇಬ್ಬರೂ ನಾಯಕರು ತಮಗೆ ಕೊಟ್ಟಿದ್ದ ಭರವಸೆಗಳನ್ನು ನೆನಪಿಸಿದ್ದರು.
ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದ ಸಿದ್ದಲಿಂಗ ಸ್ವಾಮೀಜಿ
ಇದೀಗ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ಬಿಜೆಪಿಯಿಂದ ಪರಿಷತ್ ಪ್ರವೇಶಿಸುವುದು ಖಚಿತವಾಗಿದೆ. ಆದರೆ ಮಾಜಿ ಸಚಿವ ಎಚ್. ವಿಶ್ವನಾಥ್ ಅವರಿಗೆ ಯಾವುದೇ ಭರವಸೆ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಯೋಗಿಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ರಾಜಕೀಯ ಭವಿಷ್ಯವನ್ನು ಕೇಳಿದ್ದಾರೆ. ರಾಜಕೀಯವಾಗಿ ಒಳ್ಳೆಯದಾಗಲಿದೆ ಎಂದು ಸ್ವಾಮೀಜಿ ಆಶೀರ್ವಾದ ಮಾಡಿದ್ದಾರೆ ಎಂಬ ಮಾಹಿತಿಯಿದೆ.