Breaking News: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ ಸಂಪುಟದ ಸಚಿವ!
ತುಮಕೂರು, ಸೆಪ್ಟೆಂಬರ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ಚುನವಣಾ ರಾಜಕೀಯದಿಂದ ದೂರ ಸರಿದಿದ್ದಾರೆ. ಮಧುಗಿರಿಯ ಕಾಂಗ್ರೆಸ್ ಶಾಸಕ ಕೆ. ಎನ್. ರಾಜಣ್ಣ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶನಿವಾರ ಘೋಷಣೆ ಮಾಡಿದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರು 91166 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದಾರೆ.
ಶನಿವಾರ ತುಮಕೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಧುಗಿರಿಯ ಕಾಂಗ್ರೆಸ್ ಶಾಸಕ, ಸಹಕಾರ ಸಚಿವ ಕೆ. ಎನ್. ರಾಜಣ್ಣ, "ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ. ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ" ಎಂದು ಘೋಷಣೆ ಮಾಡಿದರು.

ಸಚಿವ ಕೆ. ಎನ್. ರಾಜಣ್ಣ ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ, "ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡವಾದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ" ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಕೆ. ಎನ್. ರಾಜಣ್ಣ, "ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನವನ್ನು ಮುಂದುವರೆಸುತ್ತೇನೆ. ನನ್ನ ಅಧಿಕಾರ ಮುಗಿಯುವುದರೊಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ" ಎಂದು ಜನರಿಗೆ ಭರವಸೆ ನೀಡಿದರು.
"ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಿಸುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿಸುತ್ತೇನೆ. ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ" ಎಂದು ಸಚಿವ ಕೆ. ಎನ್. ರಾಜಣ್ಣ ಸ್ಪಷ್ಟಪಡಿಸಿದರು.
ಕೆ. ಎನ್. ರಾಜಣ್ಣ ಹಾಲಿ ಮಧುಗಿರಿ ಕ್ಷೇತ್ರದ ಶಾಸಕರು. 2023ರ ವಿಧಾನಸಭೆ ಚುನಾವಣೆಯಲ್ಲಿ 91,166 ಮತಗಳನ್ನು ಪಡೆದು ಜೆಡಿಎಸ್ನ ಎಂ. ವಿ. ವೀರಭದ್ರಯ್ಯ ಸೋಲಿಸಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು.
ಆದರೆ ಕೆ. ಎನ್. ರಾಜಣ್ಣ 2018ರ ವಿಧಾನಸಭೆ ಚುನಾವಣೆಯಲ್ಲಿ ಮಧುಗಿರಿಯಲ್ಲಿ 69,947 ಮತಗಳನ್ನು ಪಡೆದು ಜೆಡಿಎಸ್ನ ಎಂ. ವಿ. ವೀರಭದ್ರಯ್ಯ (88,521 ಮತಗಳು) ವಿರುದ್ಧ ಸೋಲು ಕಂಡಿದ್ದರು. ಚುನಾವಣೆಯಲ್ಲಿ ಸೋತರೂ ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದ ಅವರು 2023ರಲ್ಲಿ ಗೆಲುವು ಸಾಧಿಸಿದ್ದಾರೆ.
ಸಚಿವ ಕೆ. ಎನ್. ರಾಜಣ್ಣ ಈ ಬಾರಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ತಮ್ಮ ಹೇಳಿಕೆಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಪಕ್ಷದ ಹೈಕಮಾಂಡ್ ನಾಯಕರು, ಹಿರಿಯ ನಾಯಕರ ವಿರುದ್ಧ ಸದಾ ಟೀಕೆಗಳನ್ನು ಮಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧವೂ ಕೆ. ಎನ್. ರಾಜಣ್ಣ ಟೀಕೆಗಳನ್ನು ಮಾಡಿದ್ದಾರೆ. "ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡುವವರಿಗೆ ನೋಟಿಸ್ ಕೊಟ್ಟು ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ" ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದರು.
ಆಗ ಪ್ರತಿಕ್ರಿಯೆ ನೀಡಿದ್ದ ಕೆ. ಎನ್. ರಾಜಣ್ಣ, "ಬಾಯಿಗೆ ಬೀಗ ಎಲ್ಲರೂ ಹಾಕಿಕೊಳ್ಳಬೇಕು. ಎಲ್ಲರೂ ಸುಮ್ಮನೆ ಇದ್ದರೆ ನಾನೂ ಸುಮ್ಮನೆ ಇರುತ್ತೇನೆ. ಹೆಚ್ಚುವರಿ ಡಿಸಿಎಂ ನಾವು ಕೇಳಬಾರದೇ?, ಕೇಳಿದರೆ ತಪ್ಪಾಗುತ್ತದೆಯೇ?, ವಾರ್ನಿಂಗ್ ನಾನ್ ಕೇಳ್ತಿನೇನ್ರೀ ರಾಜಣ್ಣ ರಾಜಣ್ಣಾನೇ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಹೇಳಿದರೆ ಕೇಳಿಕೊಂಡು ಸುಮ್ಮನೆ ಇರಬೇಕಾ?" ಎಂದು ಪ್ರಶ್ನೆ ಮಾಡಿದ್ದರು.












Click it and Unblock the Notifications