ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ: ಜಿ ಪರಮೇಶ್ವರ
ತುಮಕೂರು, ಅಕ್ಟೋಬರ್ 10: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂಬ ಕಾಯ್ದೆ ಈಗಾಗಲೇ ಜಾರಿಯಾಗಿದ್ದರೂ ಎಲ್ಲೂ ಅನುಷ್ಠಾನಕ್ಕೆ ಬರುತ್ತಿಲ್ಲ ಆದರೆ ತುಮಕೂರು ಜಿಲ್ಲೆಯ ವಸಂತನರಸಾಪುರ ಕೈಗಾರಿಕಾ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲು ಸರ್ಕಾರ ಕಂಪನಿಗಳಿಗೆ ನಿರ್ದೇಶನ ನೀಡಿದೆ.
ತುಮಕೂರಿನಲ್ಲಿ ಬುಧವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ವಸಂತನರಸಾಪುರ ಕೈಗಾರಿಕಾ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗಿದೆ. ತುಮಕೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಸಿಸುತ್ತಿರುವ ಕೌಶಲ್ಯವಿರುವ ವ್ಯಕ್ತಿಗಳಿಗೆ ಉದ್ಯೋಗ ನೀಡಿಕೆಯಲ್ಲಿ ಆದ್ಯತೆ ನೀಡಲು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ವಸಂತನರಸಾಪುರದಲ್ಲಿ ಕೈಗಾರಿಕಾ ವಲಯ ನಿರ್ಮಾಣವಾಗುತ್ತಿದ್ದು, ಇಲ್ಲಿನ ಕೈಗಾರಿಕೆಗಳಿಗೆ ಕೆಲಸಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಸ್ಥಳೀರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ಎಲ್ಲ ಗ್ರಾಮಗಳಲ್ಲಿ ರಸ್ತೆ, ದೇವಸ್ಥಾನ ಅಭಿವೃದ್ಧಿ, ಕುಡಿಯುವ ನೀರಿನ ಸಮಸ್ಯೆ, ಶಿಥಿಲಗೊಂಡ ಶಾಲಾ ಕಟ್ಟಡ ಮರು ನಿರ್ಮಾಣ ಬಗ್ಗೆ ಪಟ್ಟಿ ಮಾಡಲು ಆಯಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಹೇಳಿದ್ದೇವೆ. ಶೀಘ್ರವಾಗಿ ಪಟ್ಟಿ ನೀಡಿದರೆ ಹಣ ಮಂಜೂರು ಮಾಡಲು ಹಾಗೂ ಈ ಸಮಸ್ಯೆ ನಿವಾರಣೆಗೆ ಸಂಬಂಧ ಪಟ್ಟ ಸಚಿವರುಗಳಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಈಗಾಗಲೇ ಕೊರಟಗೆರೆ ತಾಲೂಕಿನಲ್ಲಿ ಪಟ್ಟಿ ನೀಡಿದ್ದಾರೆ. 1 ಸಾವಿರ ಕೋಟಿ ರು.ಗಳನ್ನು ಶಾಲೆಗಳ ದುರಸ್ಥಿಗೆ ಮೀಸಲಿಡಲಾಗಿದೆ. ಇದರ ಉಪಯೋಗ ಪಡೆದುಕೊಳ್ಳಬೇಕು, ಈ ಭಾಗದಲ್ಲಿ ಬಸ್ ವ್ಯವಸ್ಥೆ ಕಡಿಮೆ ಎಂಬ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅವರು, ಈಗಾಗಲೇ ಕೆಎಸ್ಆರ್ಟಿ ಅಧಿಕಾರಿಗಳೊಂದಿಗೆ ಈ ಸಂಬಂಧ ಮನವಿ ಮಾಡಿರುವುದಾಗಿ ತಿಳಿಸಿದರು.












Click it and Unblock the Notifications