ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕಾಗುತ್ತೆ: ಶಾಸಕ ಎಸ್.ಆರ್. ಶ್ರೀನಿವಾಸ್
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾದರೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ರಣಕಣ ರಂಗೇರುತ್ತಿದೆ. ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ರಣತಂತ್ರ ರೂಪಿಸಿದ್ದರೆ. ಕಾಂಗ್ರೆಸ್ ಕೂಡ ಇಂಡಿಯಾ ಒಕ್ಕೂಟದ ಜೊತೆ ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ. ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪ್ರಯತ್ನ ಮಾಡುತ್ತಿದೆ.

ರಾಜ್ಯದ ಕಾಂಗ್ರೆಸ್ ನಾಯಕರ ಮೇಲೆ ಪಕ್ಷದ ವರಿಷ್ಠರು ಜವಾಬ್ದಾರಿ ವಹಿಸಿದ್ದಾರೆ. ಅದಕ್ಕೆ ತಕ್ಕಂತೆ ರಾಜ್ಯಾದ್ಯಂತ ಎಲ್ಲಾ ಕಾಂಗ್ರೆಸ್ ಶಾಸಕರು, ಸಚಿವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಅಖಾಡಕ್ಕೆ ಇಳಿದಿದ್ದಾರೆ.
ಎಸ್.ಆರ್. ಶ್ರೀನಿವಾಸ್ ಹೇಳಿದ್ದೇನು?
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಆರ್. ಶ್ರೀನಿವಾಸ್, "ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲದೇ ಇದ್ದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ" ಎಂದು ಹೇಳಿದ್ದಾರೆ.
ಅತ್ಯಂತ ಪ್ರಾಮಾಣಿಕವಾಗಿ, ಬಡವರ ಪರ, ಶೋಷಿತರ ಪರ ಕೆಲಸ ಮಾಡುವ ಸಿದ್ದರಾಮಯ್ಯನವರನ್ನು ಉಳಿಸುವಂತ ಕೆಲಸವನ್ನು ನಾವೆಲ್ಲಾ ಸೇರಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೂಡ ಪ್ರಯತ್ನವನ್ನು ಮಾಡೋಣ ಎಂದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಎಸ್ಪಿಎಂ ಗೆಲುವಿಗೆ ಪಣ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಬಿಜೆಪಿಯಿಂದ ವಿ. ಸೋಮಣ್ಣ ಅಭ್ಯರ್ಥಿಯಾಗಿದ್ದರೆ, ಕಾಂಗ್ರೆಸ್ನಿಂದ ಎಸ್.ಪಿ. ಮುದ್ದಹನುಮೇಗೌಡ ಕಣಕ್ಕಿಳಿದಿದ್ದಾರೆ.
ಮೇಲ್ನೋಟಕ್ಕೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದರೂ, ಬಿಜೆಪಿ ಕಠಿಣ ಪೈಪೋಟಿ ಒಡ್ಡಲಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಲಿಂಗಾಯತರ ಜೊತೆ ಒಕ್ಕಲಿಗರ ಮತಗಳನ್ನು ಸೆಳೆಯುವ ವಿಶ್ವಾಸದಲ್ಲಿದೆ.
ಎಸ್.ಪಿ. ಮುದ್ದಹನುಮೇಗೌಡ 2014 ರಿಂದ 2019ರವರೆಗೆ ಸಂಸದರಾಗಿದ್ದು ತಮ್ಮ ಅಭಿವೃದ್ಧಿ ಕೆಲಸಗಳಿಂದ ಕ್ಷೇತ್ರದಲ್ಲಿ ಉತ್ತಮ ಸಂಸದ ಎನಿಸಿಕೊಂಡಿದ್ದರು. ಕಳೆದ ಬಾರಿ ಕಾಂಗ್ರೆಸ್ನಿಂದ ಟಿಕೆಟ್ ಕೈತಪ್ಪಿದ್ದ ಕಾರಣ ಬಿಜೆಪಿ ಸೇರಿದ್ದ ಅವರು, ಈಗ ಕಾಂಗ್ರೆಸ್ಗೆ ಮರಳಿದ್ದು, ಮತ್ತೊಮ್ಮೆ ಲೋಕಸಭೆ ಪ್ರವೇಶಿಸುವ ವಿಶ್ವಾಸದಲ್ಲಿದ್ದಾರೆ.
ತುಮಕೂರ ಲೋಕಸಭಾ ಕ್ಷೇತ್ರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೆ, ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಇಬ್ಬರು ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಶಾಸಕರಿದ್ದಾರೆ.












Click it and Unblock the Notifications