ಶಿರಾ ಉಪ ಚುನಾವಣೆ; ಬಿಜೆಪಿ ಟಿಕೆಟ್ಗೆ 8ಕ್ಕೂ ಅಧಿಕ ಆಕಾಂಕ್ಷಿಗಳು
ತುಮಕೂರು, ಸೆಪ್ಟೆಂಬರ್ 24: ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ಗಾಗಿ ಪೈಪೋಟಿ ಆರಂಭವಾಗಿದೆ. ಟಿಕೆಟ್ ಪಡೆಯಲು 8ಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ. ಜೆಡಿಎಸ್ನಿಂದ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಬಿ. ಸತ್ಯನಾರಾಯಣ ಅವರ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ.
ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, ಬಿಜೆಪಿಯಲ್ಲಿ ಟಿಕೆಟ್ಗಾಗಿ ಪೈಪೋಟಿ ಆರಂಭವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಇರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.
ಶಿರಾ ಉಪ ಚುನಾವಣೆ; ಎಲ್ಲಾ ಪಕ್ಷಗಳಿಗೂ ಪರೀಕ್ಷೆಯ ಕಾಲ!
2013, 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಶಿರಾ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಆದರೆ, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವುದರಿಂದ ಉಪ ಚುನಾವಣೆ ಗೆಲುವು ಸುಲಭ ಎಂಬ ಕಾರಣಕ್ಕೆ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.
ಶಿರಾ ಉಪ ಚುನಾವಣೆ ಗೆಲ್ಲಲು ಬಿಜೆಪಿ ಹೊಸ ಕಾರ್ಯತಂತ್ರ!
ಶಿರಾ ಕ್ಷೇತ್ರದ ಚುನಾವಣೆ ಎಂದರೆ ಅದು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಹೋರಾಟವಾಗಿದೆ. ಕಾಂಗ್ರೆಸ್ ಈಗಾಗಲೇ ಮಾಜಿ ಸಚಿವ, ಕ್ಷೇತ್ರದ ಮಾಜಿ ಶಾಸಕ ಟಿ. ಬಿ. ಜಯಚಂದ್ರ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಜೆಡಿಎಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
ಶಿರಾ ಉಪಚುನಾವಣೆ: ಮಾಜಿ ಸಚಿವ ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ
ಎನ್. ರವಿ ಕುಮಾರ್ ಹೇಳಿಕೆ
"ಶಿರಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಲ್ಲಿ ಎಂಟಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಅಂತಿಮವಾಗಿ ಯಾರನ್ನು ಕಣಕ್ಕಿಳಿಸುತ್ತಾರೋ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಾಗುತ್ತದೆ" ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಹೇಳಿದ್ದಾರೆ.
ಕ್ಷೇತ್ರದಲ್ಲಿ ಬಿಜೆಪಿ ಪರವಾದ ಅಲೆ ಇದೆ
"ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ. ಶಿರಾದಲ್ಲಿ ಬಿಜೆಪಿ ಪರವಾದ ಅಲೆ ಇದೆ. 264 ಬೂತ್ಗಳಲ್ಲಿ ಸಮಿತಿ ರಚನೆ ಮಾಡಿ ವಾಟ್ಸ್ ಅಪ್ ಗ್ರೂಪ್ ರಚನೆ ಮಾಡುತ್ತೇವೆ. ಅಕ್ಟೋಬರ್ 2ರಂದು ಸಭೆ ನಡೆಸಲಾಗುತ್ತದೆ. ನಂತರ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ" ಎಂದು ರವಿ ಕುಮಾರ್ ಹೇಳಿದರು.
ಯಾರು ಅಭ್ಯರ್ಥಿಯಾಗಿದ್ದರು
ಶಿರಾ ಕ್ಷೇತ್ರದಲ್ಲಿ ಕಳೆದ 2 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಾಗಿದ್ದಾರೆ. 2013ರಲ್ಲಿ ಬಿ. ಕೆ. ಮಂಜುನಾಥ ಕಣಕ್ಕಿಳಿದು 18,884 ಮತ ಪಡೆದಿದ್ದರು. 2018ರ ಚುನಾವಣೆಯಲ್ಲಿ ಅಭ್ಯರ್ಥಿ ಬದಲಾಗಿದ್ದು, ಎಸ್. ಆರ್. ಗೌಡ ಅಭ್ಯರ್ಥಿಯಾಗಿದ್ದರು. ಪಡೆದ ಮತಗಳು 16,959.
ಟಿ. ಬಿ. ಜಯಚಂದ್ರ ಅಭ್ಯರ್ಥಿ
2013ರ ಚುನಾವಣೆಯಲ್ಲಿ ಶಿರಾದಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ನ ಟಿ. ಬಿ. ಜಯಚಂದ್ರ ಈ ಉಪ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿ. 2018ರ ಚುನಾವಣೆಯಲ್ಲಿ ಅವರು 63,973 ಮತಗಳನ್ನು ಪಡೆದು ಬಿ. ಸತ್ಯನಾರಾಯಣ ಅವರ ವಿರುದ್ಧ ಸೋಲು ಕಂಡಿದ್ದರು.
ಜೆಡಿಎಸ್ ಅಭ್ಯರ್ಥಿ ಯಾರು?
2018ರ ಚುನಾವಣೆಯಲ್ಲಿ ಜೆಡಿಎಸ್ನ ಬಿ. ಸತ್ಯನಾರಾಯಣ ಅವರು 74,338 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಯಾರು? ಎಂಬುದು ಇನ್ನು ಅಂತಿಮವಾಗಿಲ್ಲ. ಸತ್ಯನಾರಾಯಣ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವ ನಿರೀಕ್ಷೆ ಇದೆ.