New Year 2024: ತುಮಕೂರಿನ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ
ಇಡೀ ಜಗತ್ತೇ 2023ಕ್ಕೆ ವಿದಾಯ ಹೇಳಿ 2024 ರ ಹೊಸ ವರ್ಷವನ್ನು ಸ್ವಾಗತಿಸಲು ಸಜ್ಜಾಗುತ್ತಿದೆ. ಕರ್ನಾಟಕದಲ್ಲಿ ಕೂಡ ಹೊಸ ವರ್ಷಾಚರಣೆಗೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಸಂಭ್ರಮಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸುತ್ತಿದ್ದಾರೆ.
ಹೊಸ ವರ್ಷಾಚರಣೆಗೆ ಪೊಲೀಸರು ಹಲವು ನಿರ್ಬಂಧಗಳನ್ನು ವಿಧಿಸಿದ್ದಾರೆ. ತುಮಕೂರು ಸುತ್ತಮುತ್ತ ಇರುವ ಹಲವು ಪ್ರವಾಸಿ ತಾಣಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ದೇವರಾಯನದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟಗಳ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿಸೆಂಬರ್ 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕರಿಗೆ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶಿಸಿದ್ದಾರೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ದೇವರಾಯನದುರ್ಗ, ನಾಮದ ಚಿಲುಮೆ ಮತ್ತು ಬಸದಿ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಲಿದ್ದಾರೆ. ಹೆಚ್ಚಿನ ಜನ ಸಂದಣಿಯಿಂದ ಯಾವುದೇ ಅಪಾಯ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ನಿಯಮ ಮೀರಿದರೆ ಕಠಿಣ ಕ್ರಮ
ದೇವರಾಯನದುರ್ಗ, ನಾಮದ ಚಿಲುಮೆ ದಾರಿಯಲ್ಲಿ ತಿರುವು ಹೆಚ್ಚಾಗಿದ್ದು ಅಪಘಾತಗಳು ನಡೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ. ಒಂದು ವೇಳೆ ನಿಯಮ ಮೀರಿ ಯಾರಾದರೂ ಈ ತಾಣಗಳಿಗೆ ಭೇಟಿ ನೀಡಿದರೆ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಜಿಲ್ಲಾ ಪೊಲೀಸರು ಕೂಡ ಹೊಸ ವರ್ಷಾಚರಣೆಗೆ ಸೂಕ್ತ ಎಚ್ಚರಿಕೆ ವಹಿಸಿದ್ದಾರೆ.
ನಂದಿ ಬೆಟ್ಟಕ್ಕೂ ಪ್ರವೇಶ ನಿಷೇಧ
ಬೆಂಗಳೂರಿನ ಸಮೀಪವಿರುವ ಪ್ರಸಿದ್ಧ ಗಿರಿಧಾಮ ನಂದಿಬೆಟ್ಟಕ್ಕೆ ಕೂಡ ಹೊಸ ವರ್ಷಾಚರಣೆಗೆ ಪ್ರವೇಶ ನಿಷೇಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಗಿರಿಧಾಮಕ್ಕೆ ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರಿಗೆ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕೂಡ ಹೊಸ ವರ್ಷಾಚರಣೆಗೆ ತಯಾರಿ ಮಾಡಿಕೊಳ್ಳಲಾಗಿದ್ದು, ಪೊಲೀಸರು ಕೂಡ ಬಿಗಿ ಬಂದೋಬಸ್ತ್ ಏರ್ಪಡಿಸಲು ಸಜ್ಜಾಗಿದ್ದಾರೆ. ಭಾನುವಾರ ರಾತ್ರಿ ಹೊಸ ವರ್ಷ ಇರುವ ಕಾರಣ ಈ ಬಾರಿ ಸಂಭ್ರಮ ಜೋರಾಗಿರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.












Click it and Unblock the Notifications