ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡಿ; ಜಿ. ಪರಮೇಶ್ವರ ಪತ್ರ
ತುಮಕೂರು, ಅಕ್ಟೋಬರ್ 01 : ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ತುಮಕೂರು ಜಿಲ್ಲೆಯನ್ನು ವಿಭಜಿಸಿ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ವಿಭಜನೆ ಮಾಡಿ ಎಂಬ ಬೇಡಿಕೆ ಹುಟ್ಟಿಕೊಂಡಿದೆ.
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಮಧುಗಿರಿ ಜಿಲ್ಲೆಯಾಗಲು ಬೇಕಾದ ಎಲ್ಲಾ ಅರ್ಹತೆ ಹೊಂದಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ ಪ್ರತ್ಯೇಕ ಶೈಕ್ಷಣಿಕ ಜಿಲ್ಲೆಯಾಗಿರುವ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಈ ಭಾಗದ ಜನರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮಧುಗಿರಿ, ಪಾವಗಡ, ಕೊರಟಗೆರೆ ಮತ್ತು ಶಿರಾ ಕಂದಾಯ ತಾಲೂಕುಗಳನ್ನು ಒಟ್ಟುಗೂಡಿಸಿ ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಬೇಡಿಕೆ ಬಗ್ಗೆ ಈಗ ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.

ಪತ್ರದಲ್ಲಿ ಏನಿದೆ?
ಡಾ. ಜಿ. ಪರಮೇಶ್ವರ ಪತ್ರದಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಭೌಗೋಳಿಕವಾಗಿ ಹೆಚ್ಚಿನ ವಿಸ್ತಾರವನ್ನು ಹೊಂದಿದ್ದು, ಮಧುಗಿರಿ ಕೇಂದ್ರಸ್ಥಾನದಲ್ಲಿ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ, ಕೆಇಬಿ, ಡಿವೈಎಸ್ಪಿ, ಎತ್ತಿನಹೊಳೆ ಇನ್ನಿತರ ಇಲಾಖೆಗಳ ಉಪ ವಿಭಾಗಗಳನ್ನು ಒಳಗೊಂಡಿರುವುದಲ್ಲದೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವನ್ನು ಸಹ ಹೊಂದಿದೆ.

ಪ್ರತ್ಯೇಕ ಶೈಕ್ಷಣಿಕ ಜಿಲ್ಲೆ
ಪ್ರತ್ಯೇಕ ಶೈಕ್ಷಣಿಕ ಜಿಲ್ಲೆಯಾಗಿರುವ ಮಧುಗಿರಿಯ ನೆರೆಯ ತಾಲೂಕುಗಳಾದ ಪಾವಗಡ, ಕೊರಟಗೆರೆ ಮತ್ತು ಶಿರಾ ತಾಲೂಕುಗಳಿಗೆ ಕೃಷಿಯೋತ್ಪನ್ನ ಮತ್ತು ವಾಣಿಜ್ಯೋತ್ಪನ್ನಗಳ ಮಾರುಕಟ್ಟೆಗೆ ಕೇಂದ್ರಸ್ಥಾನವಾಗಿರುತ್ತದೆ. ಮಧುಗಿರಿಯು ಎಲ್ಲಾ ಹಂತದಲ್ಲಿಯೂ ಜಿಲ್ಲೆಯಾಗಿ ಪರಿವರ್ತನೆ ಹೊಂದಲು ಅರ್ಹತೆ ಹೊಂದಿದ್ದು, ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಈ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾಗಿದೆ.

ನೂತನ ಜಿಲ್ಲೆಯನ್ನಾಗಿ ಘೋಷಣೆ
ಈ ಹಿನ್ನಲೆಯಲ್ಲಿ ಮಧುಗಿರಿಯನ್ನು ಮಧುಗಿರಿ, ಪಾವಗಡ, ಕೊರಟಗೆರೆ ಮತ್ತು ಶಿರಾ ಕಂದಾಯ ತಾಲೂಕುಗಳನ್ನು ಒಟ್ಟುಗೂಡಿಸಿ ಪ್ರತ್ಯೇಕವಾಗಿ ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ತಮ್ಮಲ್ಲಿ ಕೋರುತ್ತೇನೆ.

ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿಲ್ಲ
ಡಾ. ಜಿ. ಪರಮೇಶ್ವರ ಪತ್ರದ ಬಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಈಗಾಗಲೇ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗುತ್ತಿದೆ.












Click it and Unblock the Notifications