ಏ.10ರಂದು ಬಿದನಗೆರೆಯಲ್ಲಿ 161 ಅಡಿಯ ಪಂಚಮುಖಿ ಹನುಮ ವಿಗ್ರಹ ಲೋಕಾರ್ಪಣೆ
ತುಮಕೂರು, ಏಪ್ರಿಲ್ 9: ವಿಶ್ವದಲ್ಲಿಯೇ ಅತಿ ಎತ್ತರದ ಪಂಚಮುಖಿ ಹನುಮಮೂರ್ತಿ ಎಂಬ ಕೀರ್ತಿಗೆ ಭಾಜನವಾಗಿರುವ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಬಸವೇಶ್ವರ ಮಠದಲ್ಲಿ ನಿರ್ಮಾಣವಾಗಿರುವ 161 ಅಡಿ ಎತ್ತರದ ವಿಗ್ರಹದ ಲೋಕಾರ್ಪಣೆ ನಾಳೆ (ಏ.10, ಭಾನುವಾರ) ನಡೆಯಲಿದೆ.
ಏ.10ರಂದು ಶ್ರೀರಾಮ ನವಮಿಯ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ನಂತರದಲ್ಲಿ ಜರುಗುವ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಮತ್ತು ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಬಸವೇಶ್ವರ ಮಠದ ಪೀಠಾಧ್ಯಕ್ಷ ಡಾ. ಧನಂಜಯ ಗುರೂಜಿ ತಿಳಿಸಿದ್ದಾರೆ.
ಹನುಮ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಲು ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಾಗಿದ್ದು, ಆಂಜನೇಯ ಮೂರ್ತಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಶ್ರೀಗಳು ನೀಡಿದ್ದಾರೆ.
ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿಯ ಡಾ. ನಿರ್ಮಲಾನಂದನಾಥ ಶ್ರೀಗಳು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಠದ ನಂಜಾವಧೂತ ಶ್ರೀಗಳು, ಹರಿಹರ ಪಂಚಮಸಾಲಿ ಮಠದ ವಚನಾನಂದ ಶ್ರೀಗಳು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಸಚಿವ ಸಿ.ಎನ್. ಅಶ್ವಥ್ ನಾರಾಯಣ, ಸಂಸದ ಡಿ.ಕೆ. ಸುರೇಶ್, ಮುನಿಸ್ವಾಮಿ, ಶಾಸಕರಾದ ಡಾ. ಎಚ್.ಡಿ. ರಂಗನಾಥ್, ರಾಜುಗೌಡ, ಮಾಜಿ ಸಚಿವ ಡಿ. ನಾಗರಾಜಯ್ಯ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಡಿ. ಕೃಷ್ಣಕುಮಾರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಇನ್ನುಳಿದಂತೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಬರದಿಂದ ಸಾಗುತ್ತಿದ್ದು, 25 ಸಾವಿರಕ್ಕೂ ಅಧಿಕ ಜನರು ಸೇರುವ ನಿರಿಕ್ಷೇಯಿದೆ. ಡಿವೈಎಸ್ಪಿ ಜಿ.ಆರ್. ರಮೇಶ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.