ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಭೇಟಿ
ತುಮಕೂರು, ಅಕ್ಟೋಬರ್ 16: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದರು. ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.
ಆರ್. ಆರ್. ನಗರ ಉಪ ಚುನಾವಣೆ ಚಿತ್ರಣ; ಗೆಲುವಿಗಾಗಿ ಪಕ್ಷಗಳ ಕಸರತ್ತು!
ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ್ದೆನೆ. ಶಿವಕುಮಾರ ಮಹಾಸ್ವಾಮಿಗಳು ಸೂರ್ಯ-ಚಂದ್ರ ಇರುವವರೆಗೆ ನೆನಪಲ್ಲಿ ಇರುತ್ತಾರೆ. ಸಿದ್ದಗಂಗಾ ಶ್ರೀಗಳ ಆಶೀರ್ವಾದ ನನ್ನ ಮೇಲಿದೆ ಎಂದರು. ನನ್ನ ಅಭಿವೃದ್ಧಿ ಕೆಲಸ ಹಾಗೂ ಸಿದ್ದಗಂಗಾ ಶ್ರೀಗಳ ಆಶೀರ್ವಾದದಿಂದ ನಾನು ರಾಜರಾಜೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೂರು ಪಕ್ಷ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಹಾಗೂ ತುಮಕೂರಿನ ಶಿರಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದೆ. ರಾಜರಾಜೇಶ್ವರಿ ನಗರದಲ್ಲಿ ಈಗಾಗಲೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ಇದ್ದು, ಅಕ್ಟೋಬರ್ 19ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ
ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ಸಿನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿಉಪ ಚುನಾವಣೆಯ ಅಖಾಡದಲ್ಲಿದ್ದು, ರಾಜರಾಜೇಶ್ವರಿ ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ. ದೇಶಾದ್ಯಂತ ಒಟ್ಟು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ.
ಪಕ್ಷಾತೀತವಾಗಿ ಕ್ಷೇತ್ರದಲ್ಲಿ ಉತ್ತಮ ಸಂಘಟನೆ
ಎರಡು ಬಾರಿ ಕಾಂಗ್ರೆಸ್ನಿಂದ ಗೆದ್ದಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿ. ಪಕ್ಷಾತೀತವಾಗಿ ಕ್ಷೇತ್ರದಲ್ಲಿ ಉತ್ತಮ ಸಂಘಟನೆಯನ್ನು ಅವರು ಹೊಂದಿದ್ದಾರೆ. ಬಿಬಿಎಂಪಿಯ ಕೌನ್ಸಿಲ್ ಅವಧಿ ಮುಗಿದಿದೆ. ಆರ್. ಆರ್. ನಗರ ವ್ಯಾಪ್ತಿಯ 9 ವಾರ್ಡ್ ಪೈಕಿ 5ರಲ್ಲಿ ಕಾಂಗ್ರೆಸ್ ಗೆದ್ದಿತ್ತು. 3ರಲ್ಲಿ ಬಿಜೆಪಿ, 1 ಜೆಡಿಎಸ್ ಗೆದ್ದುಕೊಂಡಿದ್ದವು. ಕಾಂಗ್ರೆಸ್ನ ನಾಲ್ವರು ಪಾಲಿಕೆ ಸದಸ್ಯರು ಮುನಿರತ್ನ ಜೊತೆ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಯ 3 ಪಾಲಿಕೆ ಸದಸ್ಯರು, ಕಾಂಗ್ರೆಸ್ನ ನಾಲ್ವರು ಪಾಲಿಕೆ ಸದಸ್ಯರು ಮುನಿರತ್ನ ಗೆಲ್ಲಿಸಲು ಪಣತೊಟ್ಟಿದ್ದಾರೆ.
ಬಿಜೆಪಿ ಬಾವುಟ ಹಾರಿಸಲು ಸಜ್ಜು
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ. ಎರಡು ಬಾರಿ ಕ್ಷೇತ್ರದಲ್ಲಿ ಗೆದ್ದಿರುವ ಮುನಿರತ್ನ ಬಿಜೆಪಿ ಅಭ್ಯರ್ಥಿ. ಆದ್ದರಿಂದ, 2008ರ ಬಳಿಕ ಮತ್ತೊಮ್ಮೆ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ಪಕ್ಷ ಬಯಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ನಡೆಯುವ ನಿರೀಕ್ಷೆ ಇದೆ. ಆರ್. ಆರ್. ನಗರ ವ್ಯಾಪ್ತಿಯಲ್ಲಿ ಜಾಲಹಳ್ಳಿ, ಜೆ. ಪಿ. ಪಾರ್ಕ್, ಯಶವಂತಪುರ, ಎಚ್ಎಂಟಿ, ಲಕ್ಷ್ಮೀದೇವಿ ನಗರ, ಲಗ್ಗೆರೆ, ಕೊಟ್ಟಿಗೆ ಪಾಳ್ಯ, ಜ್ಞಾನ ಭಾರತಿ, ರಾಜರಾಜೇಶ್ವರಿ ನಗರ ವಾರ್ಡ್ ಗಳಿವೆ.