ಆಸ್ಪತ್ರೆಗಳಿರುವುದು ಪ್ರಾಣ ಉಳಿಸಲು, ಸಾಯಿಸುವುದಕ್ಕಲ್ಲ- ಸುರೇಶ್ ಕುಮಾರ್ ಕಿಡಿ
ತುಮಕೂರು, ನವೆಂಬರ್ 4: ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತಾಯಿ ಹಾಗೂ ನವಜಾತ ಶಿಶುಗಳ ಸಾವಿಗೆ ಕಾರಣರಾದ ಆಸ್ಪತ್ರೆ ಸಿಬ್ಬಂದಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ತಾಯಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವೈದ್ಯೆ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಈಗಾಗಲೇ ಆದೇಶ ಹೊರಡಿಸಿದ್ದಾರೆ.
ಬಾಣಂತಿ-ಅವಳಿ ಮಕ್ಕಳ ಸಾವಿನ ಕೇಸ್: ತುಮಕೂರು ಜಿಲ್ಲಾಸ್ಪತ್ರೆ ನಾಲ್ವರು ಸಿಬ್ಬಂದಿ ಅಮಾನತು
ಇನ್ನು ಈ ಪ್ರಕರಣದ ಬಗ್ಗೆ ಮಾಜಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ತುಮಕೂರು ಜಿಲ್ಲಾ ಆಸ್ಪತ್ರೆಯ ಅಮಾನವೀಯ ವರ್ತನೆ ಅತ್ಯಂತ ಹೇಯಕರ. ಆಸ್ಪತ್ರೆಗಳು ಇರುವುದು ಪ್ರಾಣ ಉಳಿಸಲಿಕ್ಕೆ. ತಾಂತ್ರಿಕ ಕಾರಣಗಳನ್ನೊಡ್ಡಿ ಸಾಯಿಸುವುದಕ್ಕಲ್ಲ ಎಂದು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸಾವುಗಳಿಗೆ ಸುಧಾಕರ್ ಹೊಣೆ: ಕಾಂಗ್ರೆಸ್
ಈ ಘಟನೆಯ ಬಗ್ಗೆ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಕಿಡಿಕಾರಿದೆ. ಪ್ರತಿ ಪ್ರಜೆಗೂ ಬದುಕುವ ಹಾಗೂ ಆರೋಗ್ಯವನ್ನು ಪಡೆಯುವ ಹಕ್ಕಿದೆ, ಆದರೆ ತುಮಕೂರಿನಲ್ಲಿ ತಾಯಿ ಕಾರ್ಡ್ ಇಲ್ಲ ಎಂದ ಮಾತ್ರಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ್ದು ಮನವೀಯತೆಗೆ, ಕರ್ನಾಟಕದ ಘನತೆಗೆ ಕಪ್ಪುಚುಕ್ಕೆಯಾಗಿದೆ. ಆರೋಗ್ಯ ಇಲಾಖೆಯನ್ನು ಸಂಪೂರ್ಣ ಭ್ರಷ್ಟಾಚಾರದ ಇಲಾಖೆಯನ್ನಾಗಿಸಿದ ಆರೋಗ್ಯ ಸಚಿವ ಸುಧಾಕರ್ ಅವರೇ ಈ ಮೂರು ಸಾವುಗಳಿಗೆ ಹೊಣೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.
ತುಮಕೂರು; ಬಾಣಂತಿ, ಅವಳಿ ಶಿಶು ಸಾವು, ಸಚಿವರ ರಾಜೀನಾಮೆಗೆ ಆಗ್ರಹ
ಎಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್
ತುಮಕೂರು ಘಟನೆಯ ಬಗ್ಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಪ್ರತಿಕ್ರಯಿಸಿದ್ದಾರೆ. ಈ ಸರ್ಕಾರ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು. ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು. ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಕರ್ತವ್ಯಲೋಪದ ಅಡಿ ವೈದ್ಯೆ, ಸಿಬ್ಬಂದಿ ಅಮಾನತು
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ ಹೇಯಕೃತ್ಯದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ವತಃ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗುರುವಾರ ರಾತ್ರಿ 9.30ರ ಸುಮಾರಿಗೆ ತುಮಕೂರಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ವೈದ್ಯರೊಂದಿಗೆ ಸಭೆ ನಡೆಸಿದ ಸಚಿವರು, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಕರ್ತವ್ಯಲೋಪದ ಅಡಿ ವೈದ್ಯೆ ಉಷಾ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶಿಸಿದರು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸುಧಾಕರ್ ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ ಎಂದಿದ್ದಾರೆ.
ತಾಯಿ ಅವಳಿ ಮಕ್ಕಳು ಸಾವನ್ನಪ್ಪಿದ್ದೇಗೆ?
ತುಮಕೂರಿನಲ್ಲಿ ವಾಸವಾಗಿರುವ ತಮಿಳುನಾಡು ಮೂಲದ ಕಸ್ತೂರಿ(30) ಎನ್ನುವವರಿಗೆ ನವೆಂಬರ್ 2ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ತಾಯಿ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ವೈದ್ಯರು ಚಿಕಿತ್ಸೆ ನೀಡುವುದಕ್ಕೆ ನಿರಾಕರಿಸಿದ್ದರು. ಅಲ್ಲದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದರು. ಹಣವಿಲ್ಲದ ಕಾರಣ ಕಸ್ತೂರಿ ಮನೆಗೆ ವಾಪಸ್ ಆಗಿದ್ದರು. ನವೆಂಬರ್ 3ರಂದು ಕಸ್ತೂರಿ ಒಂದು ಮಗುವಿಗೆ ಜನ್ಮ ನೀಡಿದ್ದು, ಎರಡನೇ ಮಗುವಿಗೆ ಜನ್ಮ ನೀಡುವ ಸಂದರ್ಭದಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಇದೇ ವೇಳೆ ಅವಳಿ ಮಕ್ಕಳು ಸಹ ಸಾವನ್ನಪ್ಪಿವೆ. ತಾಯಿ ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ.