ಸಿದ್ದಗಂಗಾ ಸ್ವಾಮೀಜಿ 111ನೇ ಜನ್ಮದಿನ, 1 ಲಕ್ಷ ಭಕ್ತರ ನಿರೀಕ್ಷೆ
ತುಮಕೂರು, ಮಾರ್ಚ್ 30: ಏಪ್ರಿಲ್ 1ರಂದು ಭಾನುವಾರ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ 111ನೇ ಜನ್ಮದಿನೋತ್ಸವ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಾರೆ.
ಇನ್ನು ಶ್ರೀಗಳ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಆದಿ ಚುಂಚುನಗಿರಿ ಮಠದ ನಿರ್ಮಾಲಾನಂದ ನಾಥ ಸ್ವಾಮೀಜಿ, ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು, ಬೇಲಿಮಠದ ಶಿವರುದ್ರ ಸ್ವಾಮೀಜಿ ಮತ್ತಿತರರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷ ಭಕ್ತರ ಆಗಮನದ ನಿರೀಕ್ಷೆ ಇದೆ.

ಇನ್ನು ಅಂದು ಬೆಳಗ್ಗೆಯಿಂದ ಸಂಜೆಯವರೆಗೂ ಕ್ಯಾತ್ಸಂದ್ರದ ಸಿದ್ದಗಂಗಾ ಮಠದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ. ಮಠದ ಆವರಣದಲ್ಲಿ 9 ಕಡೆ ಭಕ್ತರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಸಿದ್ದಗಂಗಾ ಮಠದ ಆಡಳಿತ ಮಂಡಳಿಯು ವಿಶೇಷ ಕಾಳಜಿ ವಹಿಸಿ, ಅಂದಿನ ಎಲ್ಲ ಕಾರ್ಯಕ್ರಮದ ವ್ಯವಸ್ಥೆ ಮಾಡಿದೆ.
ಇದೇ ಸಂದರ್ಭದಲ್ಲಿ ಕ್ಯಾತ್ಸಂದ್ರದ ಸಿದ್ದಗಂಗಾ ಮಠದಿಂದ ತುಮಕೂರು ನಗರದ ಸರಕಾರಿ ಜೂನಿಯರ್ ಕಾಲೇಎಜು ಮೈದಾನದವರೆಗೆ ಮೆರವಣಿಗೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications