ಶಿರಾ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ತುಮಕೂರು, ಅಕ್ಟೋಬರ್ 15 : ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ ನಾಮಪತ್ರ ಸಲ್ಲಿಕೆ ಮಾಡಿದರು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಫಲಿತಾಂಶ ಪ್ರಕಟವಾಗಲಿದೆ.
ಗುರುವಾರ ಚುನಾವಣಾಧಿಕಾರಿಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ ನಾಮಪತ್ರ ಸಲ್ಲಿಕೆ ಮಾಡಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಕ್ಟೋಬರ್ 9ರ ಶುಕ್ರವಾರ ಚುನಾವಣಾ ಅಧಿಸೂಚನೆ ಪ್ರಕಟವಾದ ದಿನ ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ಟಿ. ಬಿ. ಜಯಚಂದ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿಫಾರಂ ಜೊತೆ ಇಂದು ಅಧಿಕೃತವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಿದರು.

ಇಂದು ನಾಮಪತ್ರ ಸಲ್ಲಿಸುವ ಮುನ್ನ ಶಿರಾದ ಕೋಟೆ ಮಾರಮ್ಮ ದೇವಿ, ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠ, ವಿದ್ಯಾಗಣಪತಿ ದೇವಾಲಯಕ್ಕೆ ಜಯಚಂದ್ರ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 16 ಕೊನೆಯ ದಿನವಾಗಿದೆ.
2008, 2013ರ ಚುನಾವಣೆಯಲ್ಲಿ ಟಿ. ಬಿ. ಜಯಚಂದ್ರ ಶಿರಾ ಕ್ಷೇತ್ರದಲ್ಲಿ ಗೆದ್ದು ಸಚಿವರು ಸಹ ಆಗಿದ್ದರು. 2018ರ ಚುನಾವಣೆಯಲ್ಲಿ ಜೆಡಿಎಸ್ನ ಬಿ. ಸತ್ಯನಾರಾಯಣ ವಿರುದ್ಧ ಅವರು ಸೋಲು ಕಂಡಿದ್ದರು.
ಬಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಜೆಡಿಎಸ್ ಅಭ್ಯರ್ಥಿ. ಬುಧವಾರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಶಿರಾ ಉಪ ಚುನಾವಣೆಗೆ ಬುಧವಾರ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ನಾಮಪತ್ರ ಸಲ್ಲಿಸಿದ್ದರು. ಮೂರು ಪ್ರಮುಖ ಪಕ್ಷದ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಕ್ಟೋಬರ್ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.












Click it and Unblock the Notifications