ಶಿರಾ ಉಪ ಚುನಾವಣೆ; ನಾಮಪತ್ರ ಸಲ್ಲಿಸಿದ ಟಿ. ಬಿ. ಜಯಚಂದ್ರ
ತುಮಕೂರು, ಅಕ್ಟೋಬರ್ 09 : ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ ನಾಮಪತ್ರವನ್ನು ಸಲ್ಲಿಸಿದರು.
ಶುಕ್ರವಾರ ಶಿರಾ ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ಟಿ. ಬಿ. ಜಯಚಂದ್ರ ನಾಮಪತ್ರ ಸಲ್ಲಿಕೆ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಆರ್. ಮಂಜುನಾಥ್ ಮುಂತಾದವರು ಜೊತೆಗಿದ್ದರು.
ನಾಮಪತ್ರ ಸಲ್ಲಿಕೆಗೂ ಮೊದಲು ಟಿ. ಬಿ. ಜಯಚಂದ್ರ ಗ್ರಾಮ ದೇವತೆ ದುರ್ಗಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಇಂದು ಒಳ್ಳೆಯ ದಿನ ಎಂಬ ಕಾರಣಕ್ಕೆ ಅವರು ನಾಮಪತ್ರ ಸಲ್ಲಿಸಿದ್ದು, ಅಕ್ಟೋಬರ್ 15ರಂದು ಕಾಂಗ್ರೆಸ್ ನಾಯಕರ ಜೊತೆ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

2013ರ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಗೆದ್ದು ಸಿದ್ದರಾಮಯ್ಯ ಸಂಪುಟದಲ್ಲಿ ಟಿ. ಬಿ.ಜಯಚಂದ್ರ ಸಚಿವರಾಗಿದ್ದರು. 2018ರ ಚುನಾವಣೆಯಲ್ಲಿ ಜೆಡಿಎಸ್ನ ಬಿ. ಸತ್ಯನಾರಾಯಣ ವಿರುದ್ಧ ಸೋತಿದ್ದರು. ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು "ರಾಜರಾಜೇಶ್ವರಿ ನಗರದಲ್ಲಿ ಅಕ್ಟೋಬರ್ 14ರಂದು ಮತ್ತು ಅಕ್ಟೋಬರ್ 15ರಂದು ಶಿರಾದಲ್ಲಿ ನಾಮಪತ್ರ ಸಲ್ಲಿಸಲಾಗುತ್ತದೆ" ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಜೊತೆ ಬಂದು ಇನ್ನೊಮ್ಮೆ ಜಯಚಂದ್ರ ನಾಮಪತ್ರ ಸಲ್ಲಿಸಲಿದ್ದಾರೆ.
ಶಿರಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಇನ್ನು ಅಭ್ಯರ್ಥಿ ಘೋಷಣೆ ಮಾಡಬೇಕಿದೆ. ಜೆಡಿಎಸ್ ಬಿ. ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 17ರ ತನಕ ಅವಕಾಶವಿದೆ.
ಟಿ. ಬಿ. ಜಯಚಂದ್ರ 2018ರ ಚುನಾವಣೆಯಲ್ಲಿ 63,973 ಮತಗಳನ್ನು ಪಡೆದು ಸೋಲು ಕಂಡಿದ್ದರು. 2013ರ ಚುನಾವಣೆಯಲ್ಲಿ 74,089 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 2008ರ ಚುನಾವಣೆಯಲ್ಲಿ 60,973 ಮತಗಳನ್ನು ಪಡೆದು ಗೆದಿದ್ದರು.












Click it and Unblock the Notifications