ಶಿರಾ; ಜೆಡಿಎಸ್ ನಾಮಪತ್ರ ಸಲ್ಲಿಕೆ, ಶಕ್ತಿ ಪ್ರದರ್ಶನ
ತುಮಕೂರು, ಅಕ್ಟೋಬರ್ 14: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಾಮಪತ್ರ ಸಲ್ಲಿಕೆ ಮಾಡಿದರು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಫಲಿತಾಂಶ ಪ್ರಕಟವಾಗಲಿದೆ.
ಬುಧವಾರ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ (60) ಪರವಾಗಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದರು. ಹಲವಾರು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಿತು.
ಅಮ್ಮಜಮ್ಮಗೆ ಕೋವಿಡ್ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ಆದ್ದರಿಂದ, ಅವರ ಪರವಾಗಿ ನಾಮಪತ್ರ ಸಲ್ಲಿಕೆ ಮಾಡಲಾಯಿತು.

2018ರ ಚುನಾವಣೆಯಲ್ಲಿ ಶಿರಾದಲ್ಲಿ ಜೆಡಿಎಸ್ನ ಬಿ. ಸತ್ಯನಾರಾಯಣ ಗೆಲವು ಸಾಧಿಸಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿ.
ಟಿಕೆಟ್ ಘೋಷಣೆಯಾದ ದಿನವೇ ಅಮ್ಮಜಮ್ಮಗೆ ಕೋವಿಡ್ ಸೋಂಕು ತಗುಲಿದ್ದು ಖಚಿತವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪರವಾಗಿ ಜೆಡಿಎಸ್ ನಾಯಕರು ಅಪಾರ ಅಭಿಮಾನಿಗಳ ಜೊತೆ ಆಗಮಿಸಿ ಬುಧವಾರ ನಾಮಪತ್ರವನ್ನು ಸಲ್ಲಿಸಿದರು.
ಶಿರಾ ಕ್ಷೇತ್ರದ ಉಪ ಚುನಾವಣೆಗೆ ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ನಿಂದ ಟಿ. ಬಿ. ಜಯಚಂದ್ರ, ಬಿಜೆಪಿಯಿಂದ ಡಾ. ರಾಜೇಶ್ ಗೌಡ ಅಭ್ಯರ್ಥಿಗಳು.
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದೆ. 2008, 2013ರಲ್ಲಿ ಕಾಂಗ್ರೆಸ್ನ ಟಿ. ಬಿ. ಜಯಚಂದ್ರ ಗೆದ್ದಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಅವರು 2018ರಲ್ಲಿ ಬಿ. ಸತ್ಯನಾರಾಯಣ ವಿರುದ್ಧ ಸೋಲು ಕಂಡಿದ್ದರು.












Click it and Unblock the Notifications