ಶಿರಾ ಉಪ ಚುನಾವಣೆ; ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ!
ತುಮಕೂರು, ಅಕ್ಟೋಬರ್ 12: ಶಿರಾ ಕ್ಷೇತ್ರದ ಉಪ ಚುನಾವಣೆಗೆ ಎಲ್ಲ ಪಕ್ಷಗಳಿಗಿಂತ ಮೊದಲು ಪ್ರಚಾರ ಆರಂಭಿಸಿದ್ದು ಬಿಜೆಪಿ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದರೂ ಇನ್ನೂ ಅಭ್ಯರ್ಥಿ ಘೋಷಣೆ ಮಾಡಬೇಕಿರುವುದು ಸಹ ಬಿಜೆಪಿ.
ಶಿರಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ಗೆ ಕೋವಿಡ್ ಸೋಂಕು ತಗುಲಿದ್ದು, ಕ್ಷೇತ್ರದಲ್ಲಿ ಪ್ರಚಾರಕ್ಕೆ ಸ್ವಲ್ಪ ಹಿನ್ನಡೆ ಉಂಟಾಗಿದೆ.
ಬಿಜೆಪಿ ಅಧಿಕಾರದಲ್ಲಿರುವ ಕಾರಣ ಶಿರಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆಯೇ?. ಇಲ್ಲ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವುದು ಅಷ್ಟು ಸುಲಭದ ಮಾತಲ್ಲ.
ಶಿರಾ ಕ್ಷೇತ್ರದಲ್ಲಿ ಕಳೆದ 3 ಚುನಾವಣೆಗಳಿಂದಲೂ ಬಿಜೆಪಿಗೆ ಮೂರನೇ ಸ್ಥಾನ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನೇರ ಎದುರಾಳಿಗಳು. ಈ ಬಾರಿ ಕಾಂಗ್ರೆಸ್ನಿಂದ ಮಾಜಿ ಸಚಿವ ಟಿ. ಟಿ. ಜಯಚಂದ್ರ, ಜೆಡಿಎಸ್ನಿಂದ ಅಮ್ಮಾಜಮ್ಮ ಅಭ್ಯರ್ಥಿಗಳು.

ಉಪ ಚುನಾವಣೆ ಎದುರಾಗಿದೆ
2018ರ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ನ ಬಿ. ಸತ್ಯನಾರಾಯಣ ಗೆಲವು ಸಾಧಿಸಿದ್ದರು. ಅವರ ಅಕಾಲಿಕ ಮರಣದಿಂದಾಗಿ ಉಪ ಚುನಾವಣೆ ಎದುರಾಗಿದೆ. ಜೆಡಿಎಸ್ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ನೀಡಿದೆ. ಅಕ್ಟೋಬರ್ 16 ನಾಮಪತ್ರಗಳನ್ನು ಸಲ್ಲಿಸಲು ಅಂತಿಮ ದಿನ.

ಮೊದಲೇ ತಯಾರಿ ಆರಂಭಿಸಿದ ಬಿಜೆಪಿ
ಶಿರಾ ಉಪ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಬಿಜೆಪಿ ತಯಾರಿ ಆರಂಭಿಸಿತ್ತು. ಬೂತ್ ಮಟ್ಟದ ಸಭೆಗಳನ್ನು ಮಾಡಿತ್ತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್, ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡ ಕ್ಷೇತ್ರದಲ್ಲಿ ಸಂಚಾರ ನಡೆಸಿ ತಯಾರಿ ಆರಂಭಿಸಿದ್ದರು.

ಬಿಜೆಪಿಗೆ 3ನೇ ಸ್ಥಾನ
ಕಳೆದ ಮೂರು ಚುನಾವಣೆಗಳಲ್ಲಿಯೂ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಗೆ 3ನೇ ಸ್ಥಾನ ಸಿಕ್ಕಿದೆ. 2008ರಲ್ಲಿ ಬಿ. ಕೆ. ಮಂಜುನಾಥ್ 24,025 ಮತ, 2013ರ ಚುನಾವಣೆಯಲ್ಲಿ ಅವರು 18,884 ಮತಗಳನ್ನು ಪಡೆದಿದ್ದರು. 2018ರಲ್ಲಿ ಪಕ್ಷ ಅಭ್ಯರ್ಥಿಯನ್ನು ಬದಲಾವಣೆ ಮಾಡಿತು. ಎಸ್. ಆರ್. ಗೌಡ ಅಭ್ಯರ್ಥಿಯಾಗಿದ್ದರು. ಆದರೆ, ಪಡೆದ ಮತಗಳು 16,959.

ಬಿಜೆಪಿ ಅಭ್ಯರ್ಥಿ ಯಾರು?
ಅಕ್ಟೋಬರ್ 3ರಂದು ಡಾ. ರಾಜೇಶ್ ಗೌಡ ಬಿಜೆಪಿ ಸೇರಿದ್ದಾರೆ. ಉಪ ಚುನಾವಣೆಯಲ್ಲಿ ಅವರೇ ಅಭ್ಯರ್ಥಿ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಪಕ್ಷದಿಂದ ಇನ್ನೂ ಅಧಿಕೃತವಾಗಿ ಘೋಷಣೆಯಾಗಬೇಕಿದೆ. ಅಕ್ಟೋಬರ್ 17 ನಾಮಪತ್ರವನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಅನುಕಂಪ, ಪ್ರಭಾವ
ಜೆಡಿಎಸ್ ಕ್ಷೇತ್ರದಲ್ಲಿ ಅನುಕಂಪದ ಅಲೆಯಲ್ಲಿ ಗೆದ್ದು ಬರುವ ವಿಶ್ವಾಸದಲ್ಲಿದೆ. ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ ಎರಡು ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ಅವರು ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಡಾ. ಜಿ. ಪರಮೇಶ್ವರ, ಕೆ. ಎನ್. ರಾಜಣ್ಣ ಅವರ ಪ್ರಭಾವವೂ ಚುನಾವಣೆಯಲ್ಲಿ ಕೆಲಸ ಮಾಡಲಿದೆ.












Click it and Unblock the Notifications