ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ತಿರಸ್ಕಾರ
Recommended Video

ತುಮಕೂರು, ಮಾರ್ಚ್ 28 : ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಎಸ್.ಪಿ.ಮುದ್ದಹನುಮೇಗೌಡ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ. ಏಪ್ರಿಲ್ 18ರಂದು ತುಮಕೂರು ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದೆ.
ಎಸ್.ಪಿ.ಮುದ್ದಹನುಮೇಗೌಡ ಅವರು ತುಮಕೂರು ಕ್ಷೇತ್ರದ ಹಾಲಿ ಸಂಸದ. ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣಕ್ಕೆ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ, ಚುನಾವಣಾಧಿಕಾರಿಗಳು ನಾಮಪತ್ರವನ್ನು ತಿರಸ್ಕರಿಸಿದ್ದಾರೆ.
ಮುದ್ದಹನುಮೇಗೌಡ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಕಾಂಗ್ರೆಸ್ ಬಿ.ಫಾರಂ ಇರಲಿಲ್ಲ. ಆದ್ದರಿಂದ, ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ. ಆದರೆ, ಪಕ್ಷೇತರ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ.
ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಜಿ.ಎಸ್.ಬಸವರಾಜ್ ಅವರು ಅಭ್ಯರ್ಥಿ. ಆದರೆ, ಎಸ್.ಪಿ.ಮುದ್ದಹನುಮೇಗೌಡ ಮತ್ತು ಕೆ.ಎನ್.ರಾಜಣ್ಣ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಮುದ್ದಹನುಮೇಗೌಡ ಮತ್ತು ಕೆ.ಎನ್.ರಾಜಣ್ಣ ಅವರ ಮನವೊಲಿಸುವ ಕೆಲಸವನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇಬ್ಬರು ನಾಯಕರು ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆಯೇ? ಕಾದು ನೋಡಬೇಕು...

ಎರಡು ನಾಮಪತ್ರ ಸಲ್ಲಿಸಿದ್ದರು
ಎಸ್.ಪಿ.ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದರು. ಆದರೆ, ಕಾಂಗ್ರೆಸ್ ಬಿಫಾರಂ ಇಲ್ಲದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕಾರಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ.

ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರಾ?
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಎಸ್.ಪಿ.ಮುದ್ದಹನುಮೇಗೌಡ ಅವರ ಮನವೊಲಿಸಲು ಪ್ರಯತ್ನವನ್ನು ನಡೆಸುತ್ತಿದ್ದಾರೆ. ನಾಮಪತ್ರವನ್ನು ವಾಪಸ್ ಪಡೆಯಲು ಮಾ.29 ಕೊನೆಯ ದಿನವಾಗಿದೆ. ಮುದ್ದಹನುಮೇಗೌಡ ಅವರು ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆಯೇ? ಎಂದು ಕಾದು ನೋಡಬೇಕು.

ಕೆ.ಎನ್.ರಾಜಣ್ಣ ನಾಮಪತ್ರ
ಮತ್ತೊಂದು ಕಡೆ ಮಧುಗಿರಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಅವರು ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ಎನ್.ರಾಜಣ್ಣ ಅವರ ಜೊತೆ ಸಭೆ ನಡೆಸುತ್ತಿದ್ದಾರೆ. ನಾಮಪತ್ರ ವಾಪಸ್ ಪಡೆಯುವಂತೆ ಮನವೊಲಿಸುವ ಸಾಧ್ಯತೆ ಇದೆ.

ದೇವೇಗೌಡರ ಗೆಲುವಿಗೆ ತಂತ್ರ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರನ್ನು ಗೆಲ್ಲಿಸಲು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ. ಡಾ.ಜಿ.ಪರಮೇಶ್ವರ, ಸಚಿವ ಎಸ್.ಆರ್. ಶ್ರೀನಿವಾಸ ಅವರು ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.












Click it and Unblock the Notifications