Budget 2025: ಬಜೆಟ್ನಲ್ಲಿ ತುಮಕೂರು ಜಿಲ್ಲೆಗೆ ಸಿಕ್ಕಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಆಗಿದ್ದು ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ಕೊಡಲಾಗಿದೆ. ಬಜೆಟ್ ಎಂದರೆ ಬರೀ ಲೆಕ್ಕವಲ್ಲ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಜಿಲ್ಲೆಗಳಿಗೂ ಬಜೆಟ್ನಲ್ಲಿ ಕೊಡುಗೆಗಳು ಸಿಕ್ಕಿವೆ ತಮ್ಮ ತವರು ಜಿಲ್ಲೆ ಮೈಸೂರಿಗೆ ಭರಪೂರ ಕೊಡುಗೆಗಳನ್ನು ನೀಡಿರುವ ಸಿಎಂ ಸಿದ್ದರಾಮಯ್ಯ ಉಳಿದ ರಾಜ್ಯಗಳ ಅಭಿವೃದ್ಧಿ ಕಡೆಗೂ ಗಮನ ಕೊಟ್ಟಿದ್ದಾರೆ. ಬೆಂಗಳೂರಿಗೆ ಪರ್ಯಾಯವಾಗಿ ಅಭಿವೃದ್ಧಿ ಹೊಂದುತ್ತಿರುವ ತುಮಕೂರು ಜಿಲ್ಲೆಗೂ ಹಲವು ಕೊಡುಗೆಗಳು ಸಿಕ್ಕಿವೆ. ಹಾಗಾದರೆ ತುಮಕೂರು ಜಿಲ್ಲೆಯಲ್ಲಿ ಏನೆಲ್ಲಾ ಅಭಿವೃದ್ಧಿ ಕೆಲಸಕ್ಕೆ ಅನುದಾನ ನೀಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

ತೆಂಗು ಬೆಳೆಗಾರರ ಸಮಸ್ಯೆಗೆ ಸಿಗುತ್ತಾ ಪರಿಹಾರ?
ಕಪ್ಪು ತಲೆ ಹುಳುವಿನ ಬಾಧೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವೈಜ್ಞಾನಿಕ ಸಮೀಕ್ಷೆ ನಡೆಸಿ ಅದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ತುಮಕೂರು ಜಿಲ್ಲೆಯೇ ಅತಿ ಹೆಚ್ಚು ತೆಂಗು ಬೆಳೆಯುವ ಪ್ರದೇಶವನ್ನು ಹೊಂದಿದ್ದು ಜಿಲ್ಲೆಯ ಬೆಳೆಗಾರರಿಗೆ ಈಗಲಾದರೂ ಸಮಸ್ಯೆಗೆ ಮುಕ್ತಿ ಸಿಗುತ್ತದಾ ನೋಡಬೇಕಿದೆ.
ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಜಿಲ್ಲೆಯಲ್ಲಿ ಅತಿ ಹಿಂದುಳಿದ, ಬರಪೀಡಿತ ತಾಲೂಕು ಎನಿಸಿಕೊಂಡಿರುವ ಪಾವಗಡದ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡದಲ್ಲಿ 30 ಕೆರೆ ತುಂಬಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊರಟಗೆರೆ, ಮಧುಗಿರಿ ತಾಲೂಕಿನ ಕೆರೆಗಳು ತುಂಬಿಸಲು ಕ್ರಮ
ಎತ್ತಿನಹೊಳೆ ಯೋಜನೆ ಮೂಲಕ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ 45 ಕೆರೆಗಳು ಹಾಗೂ ಕೊರಟಗೆರೆ ತಾಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ವಹಿಸಲು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಕೊರಟಗೆರೆ ತಾಲೂಕು ಆಸ್ಪತ್ರೆ ನವೀಕರಣ
ಕೊರಟಗೆರೆ ತಾಲೂಕು ಆಸ್ಪತ್ರೆ ಸೇರಿದಂತೆ, ಮಾಲೂರು, ಮಾಗಡಿ, ಕುಶಾಲನಗರ, ಜಗಳೂರು, ಸವಣೂರು, ರಾಮದುರ್ಗ, ಸವದತ್ತಿ ತಾಲೂಕು, ದಾವಣಗೆರೆ ಜಿಲ್ಲಾ ಆಸ್ಪತ್ರೆ, ಮಂಗಳೂರು ವೆನ್ಲಾಕ್ ಆಸ್ಪತ್ರೆ 650 ಕೋಟಿ ವೆಚ್ಚದಲ್ಲಿ ನವೀಕರಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.
ಮಧುಗಿರಿ ಮತ್ತು ಇಂಡಿಯಲ್ಲಿ ನಬಾರ್ಡ್ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ KKRDB Macro ಅನುದಾನದಡಿ GTTC ಸ್ಥಾಪನೆಗೆ ಕ್ರಮ ವಹಿಸಲಾಗಿದೆ.
ತುಮಕೂರಿನ ಶಾಖಾ ನಾಲೆ 0 ಕಿ.ಮೀ ರಿಂದ 166.90 ಕಿ.ಮೀ. ವರೆಗಿನ ನಾಲಾ ಆಧುನೀಕರಣ. ತುಮಕೂರು ಜಿಲ್ಲೆಯ ಬಿಕ್ಕೆಗುಡ್ಡ ಕುಡಿಯುವ ನೀರಿನ ಯೋಜನೆಗೂ ಅನುದಾನ ನೀಡಲಾಗಿದೆ.












Click it and Unblock the Notifications