'ರಾಜ್ಯದಲ್ಲಿ ಆತ್ಮಹತ್ಯೆ, ಭ್ರಷ್ಟಾಚಾರದ ಭಾಗ್ಯ..ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು'
ತುಮಕೂರು, ಜನವರಿ 06: ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ತುಮಕೂರು ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರಣಿ ಹಗರಣ, ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಇದರ ವಿರುದ್ಧ ಬಿಜೆಪಿಯಿಂದ ಸಾಕಷ್ಟು ಪ್ರತಿಭಟನೆ ನಡೆದಿವೆ. ಇಷ್ಟಾಗಿಯೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಕರಣಗಳು ಆತಂಕ ಮೂಡಿಸಿವೆ. ಸರ್ಕಾರ ಆರೋಗ್ಯ ಸೇವೆಯನ್ನು ಸಮರ್ಪಕವಾಗಿ ಒದಗಿಸುತ್ತಿಲ್ಲ, ಆರೋಗ್ಯ ಇಲಾಖೆಯ ತಿಮಿಂಗಿಲಗಳು ಬಾಣಂತಿಯರನ್ನು ನುಂಗುತ್ತಿವೆ. ಇದಕ್ಕೆಲ್ಲಾ ಸರ್ಕಾರವೇ ನೇರ ಹೊಣೆ. ಗುತ್ತಿಗೆದಾರ ಸಚಿನ್ ಆತ್ಯಹತ್ಯೆ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂಬ ಆರೋಪವಿದೆ. ಎಷ್ಟೋ ಹಗರಣಗಳನ್ನು ಮಾಡಿಯೂ ರಾಜೀನಾಮೆ ನೀಡದ ಭಂಡ ಸರ್ಕಾರ ರಾಜ್ಯದಲ್ಲಿದೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ನಿರ್ವಹಣೆ ಮಾಡಲಾಗದೆ ಬಸ್ ಪ್ರಯಾಣ ದರ ಹೆಚ್ಚು ಮಾಡಿ ಜನಸಾಮಾನ್ಯರಿಗೆ ಹೊರೆ ಮಾಡಿದೆ, ಹಾಲಿನ ದರ ಹೆಚ್ಚು ಮಾಡಲು ಹೊರಟಿದ್ದಾರೆ. ಹಾಲಿನ ಸಹಾಯಧನ ಸಾವಿರಾರು ಕೊಟಿ ರೂ. ಬಾಕಿ ಇದೆ. ಅದನ್ನು ಹಾಲು ಉತ್ಪಾದಕರಿಗೆ ನೀಡದ ಸರ್ಕಾರ ಈಗ ಹಾಲಿನ ದರ ಹೆಚ್ಚು ಮಾಡಿ ಆ ದುಡ್ಡನ್ನು ಭ್ರಷ್ಟಾಚಾರಕ್ಕೆ ಬಳಿಸಿಕೊಳ್ಳಲು ಹೊರಟಿರುವ ಸಿದ್ದರಾಮಯ್ಯ ಸರ್ಕಾರ ಜನರ ಕಣ್ಣಿಗೆ ಮಣ್ಣೆರೆಚಿದೆ. ಇಂತಹ ಆಡಳಿತದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯ ಸರ್ಕಾರ ಆತ್ಯಹತ್ಯೆ ಭಾಗ್ಯ ಕರುಣಿಸಿದೆ. ಭ್ರಷ್ಟಾಚಾರ ಬಯಲಾದುದರಿಂದ ವಾಲ್ಮೀಕಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡರು. ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಬರೆಟ್ಟು ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ ಮಾಡಿಕೊಂಡರು. ದಾವಣಗೆರೆ ಗುತ್ತಿಗೆದಾರರೊಬ್ಬರು ಬಾಕಿ ಹಣ ನೀಡದ ಕಾರಣ ನೊಂದು ಆತ್ಮಹತ್ಯಗೆ ಶರಣಾದರು.
ಮಾಗಡಿಯಲ್ಲಿ ಕ್ರಷರ್ ಲಾರಿ ಮಾಲೀಕರೊಬ್ಬರು ಲಂಚ ಕೊಡಲಾಗದೆ ಆತ್ಯಹತ್ಯೆ ಮಾಡಿಕೊಂಡರು. ಯಾದಗಿರಿ ಪಿಎಸ್ಐ ಪರಶುರಾಮ ಸ್ಥಳೀಯ ಶಾಸಕರ ಪುತ್ರನ ಒತ್ತಡ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡರು. ಬೀದರ್ನ ಗುತ್ತಿಗೆದಾರ ಸಚಿನ್ ಸೇರಿದಂತೆ ಹಲವರು ಕಾಂಗ್ರೆಸ್ ಸರ್ಕಾರದ ಕಿರುಕುಳಕ್ಕೆ ಪ್ರಾಣ ತ್ಯಾಗ ಮಾಡಿದರು ಎಂದು ಹೇಳಿದರು.
ಕಳೆದ ಮೂರು ತಿಂಗಳಲ್ಲಿ 300ಕ್ಕೂ ಹೆಚ್ಚು ಬಾಣಂತಿಯರು ಸಾವಿಗೀಡಾಗಿರುವುದು ಆತಂಕಕಾರಿ ವಿಚಾರ. ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ ಎಂದು ಮಹಿಳೆಯರ ಕೃಪೆಯಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮಹಿಳೆಯರ ಸಾವಿನ ಸೌಧದ ಮೇಲೆ ಭ್ರಷ್ಟಾಚಾರದ ದಬ್ಬಾಳಿಕೆ ಮಾಡುತ್ತಿದೆ. ನ್ಯಾಯಕ್ಕಾಗಿ ಪೊಲೀಸ್ ಠಾಣೆಗಳಿಗೆ ಬರುವ ಮಹಿಳೆಯರ ಮೇಲೆ ದೌರ್ಜನ್ಯ ಮಾಡುವ ಪ್ರಕರಣಗಳೂ ನಡೆಯುತ್ತಿವೆ. ಇಂತಹ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ ಎಂದರು.
ರೈತ ಮೋರ್ಚಾ ಮುಖಂಡ ಎಸ್.ಶಿವಪ್ರಸಾದ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರ, ಸಾವುನೋವು, ಗಲಭೆಗಲಾಟೆಗಳೇ ಹೆಚ್ಚಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಹಾಳಾಗಿದೆ. ಬಾಣಂತಿಯರ ಸಾವು, ಆಧಿಕಾರಿ, ಗುತ್ತಿಗೆದಾರರ ಆತ್ಯಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಇಂತಹ ಜನವಿರೋಧಿ ಸರ್ಕಾರ ಕೂಡಲೇ ಅಧಿಕಾರ ತ್ಯಜಿಸಬೇಕು ಎಂದು ಒತ್ತಾಯಿಸಿದರು.
ಮಹಿಳಾ ಮೋರ್ಚಾ ನಾಯಕಿ ವಿಜಯಲಕ್ಷ್ಮಿ ಆನಂದ್ ಅವರು, ರಾಜ್ಯದ ಬಾಣಂತಿ ಸಾವಿನ ಪ್ರಕರಣಗಳ ತನಿಖೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ತಾಯಿ ಕಳೆದುಕೊಂಡ ಮಕ್ಕಳನ್ನು ಸರ್ಕಾರ ದತು ಪಡೆದು ಅವರ ಶಿಕ್ಷಣ, ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.












Click it and Unblock the Notifications