ಪರಂ ವರ್ಸಸ್ ಕೆಎನ್ ಆರ್ ಬೆಂಬಲಿಗರು; ತುಮಕೂರಲ್ಲಿ ಕಾಂಗ್ರೆಸ್ ಕೊತಕೊತ
ತುಮಕೂರು, ಜೂನ್ 3: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಬೆಂಬಲಿಗರ ಮಧ್ಯೆ ಆರೋಪ-ಪ್ರತ್ಯಾರೋಪ ಗಂಭೀರ ಸ್ವರೂಪವನ್ನು ತಲುಪಿದೆ. ತುಮಕೂರು ಜಿಲ್ಲಾ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ 10 ಪರ್ಸೆಂಟ್ ಗಿರಾಕಿ ಎಂದು ಆರೋಪ ಮಾಡಿದ್ದಾರೆ.
ತುಮಕೂರಿನಲ್ಲಿ ರಾಜಣ್ಣ ಹಾಗೂ ಮಗನ ವಿರುದ್ಧ ಸಿಡಿದೆದ್ದ ಜೆಡಿಎಸ್- ಒಕ್ಕಲಿಗರು
ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಹಣ ಪಡೆದು, ಅದರಲ್ಲಿ 10 ಪರ್ಸೆಂಟ್ ತಾನು ಇಟ್ಟುಕೊಂಡು ಹಂಚಿದ್ದಾನೆ. ಅಲ್ಲದೆ ಇತ್ತೀಚಿಗೆ ನಡೆದ ಪಾಲಿಕೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಹಣ ಪಡೆದು, ಟಿಕೆಟ್ ಕೊಟ್ಟಿದ್ದಾನೆ ಎಂದು ಆರೋಪಿಸಿದರು.
ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ಮಾತನಾಡಿ, ಜಿಲ್ಲಾಧ್ಯಕ್ಷ ಸ್ಥಾನದಿಂದ ರಾಮಕೃಷ್ಣರನ್ನು ಬದಲಾಯಿಸಿದರೆ ಎಲ್ಲವೂ ಸರಿಹೋಗಲಿದೆ. ಮೈತ್ರಿ ಅಭ್ಯರ್ಥಿ ಸೋಲಿಗೆ ರಾಜಣ್ಣ ಕಾರಣ ಎಂದು ಆರೋಪಿಸುತ್ತಿದ್ದಾರೆ. ಹಾಗಾದರೆ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಸೋಲಲಿಲ್ಲವೇ? ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯಿಲಿ ಸೋಲಲಿಲ್ಲವೇ ಎಂದು ಪ್ರಶ್ನಿಸಿದರು. ಹಾಗಾದರೆ ಅಲ್ಲಿಯ ಕಾಂಗ್ರೆಸ್ ಮುಖಂಡರ ಮೇಲೂ ಕ್ರಮ ಕೈಗೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.