ಶಿರಾ ಉಪ ಚುನಾವಣೆ ಕುರಿತು ಕೆ.ಎನ್. ರಾಜಣ್ಣ ಮಹತ್ವದ ಮಾತು
ಬೆಂಗಳೂರು, ಅ. 09: ಶಿರಾ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಚುನಾವಣೆ ಕುರಿತು ಮಹತ್ವದ ಮಾತನ್ನಾಡಿದ್ದಾರೆ. ಉಪ ಚುನಾವಣೆಯಲ್ಲಿ ಜವಾಬ್ದಾರಿ ಹಂಚಿಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಬೆನ್ನಲ್ಲಿಯೇ ಕೆ.ಎನ್. ರಾಜಣ್ಣ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ನಮ್ಮ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್, ಬಿಜೆಪಿಯವರು ಅಭ್ಯರ್ಥಿ ನಿಲ್ಲಿಸಲಿದ್ದಾರೆ. ತ್ರಿಕೋನ ಸ್ಪರ್ಧೆ ಅಂತಾ ಅವರು ಹೇಳುತ್ತಿದ್ದಾರೆ. ಆದರೆ ಜೆಡಿಎಸ್ ಮೂರನೇ ಸ್ಥಾನಕ್ಕೆ ಹೋಗುತ್ತದೆ. ಬಿಜೆಪಿ ಎರಡನೇ ಸ್ಥಾನಕ್ಕೆ ಬರಬಹುದು. ಆದರೆ ಹೆಚ್ಚಿನ ಮತಗಳಿಂದ ನಾವು ಗೆಲ್ಲುತ್ತೇವೆ ಎಂದು ಭವಿಷ್ಯ ನುಡಿದಿದ್ದಾರೆ.
ಈಗಾಗಲೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರು ಕೂಡ ಎಲ್ಲಾ ಕಡೆ ಓಡಾಡ್ತಿದ್ದಾರೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡ್ತಿದ್ದೇವೆ. ಭಾನುವಾರ ಕೆಲವರಿಗೆ ಜವಾಬ್ದಾರಿ ಹಂಚಿಕೆಯಾಗುತ್ತದೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಹೇಳಿಕೆ ಕೊಟ್ಟಿದ್ದಾರೆ.