ಜೂನ್ 8ರಿಂದ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸ
ತುಮಕೂರು, ಜೂನ್ 03 : 'ರಾಜ್ಯ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಜನರು ಗಮನಿಸುತ್ತಿದ್ದಾರೆ. ಜೂನ್ 8ರಿಂದ ಅತಿವೃಷ್ಠಿ ಜಿಲ್ಲೆಗಳಿಗೆ ನಾನು ಪ್ರವಾಸ ಮಾಡುತ್ತೇನೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತುಮಕೂರಿನಲ್ಲಿ ಭಾನುವಾರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ಸಮ್ಮಿಶ್ರ ಸರ್ಕಾರದ ಬೆಳವಣಿಗೆಗಳನ್ನು ಜನರು ಗಮನಿಸುತ್ತಿದ್ದಾರೆ' ಎಂದರು.
'ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ನಾನು ಸುಮ್ಮನಿದ್ದೇನೆ. ಚುನಾವಣೆ ಬಳಿಕ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸುತ್ತೇನೆ. ಜೂನ್ 8 ರಿಂದ ಅತಿವೃಷ್ಠಿ ಜಿಲ್ಲೆಗಳಿಗೆ ನಾನು ಪ್ರವಾಸ ಮಾಡುತ್ತೇನೆ' ಎಂದು ಹೇಳಿದರು.

ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆ : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಯಕರಿಗೆ ಯಡಿಯೂರಪ್ಪ ನಿರಾಸೆ ಉಂಟುಮಾಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ ಸೊಗಡು ಶಿವಣ್ಣ ಬೆಂಬಲಿಗರು ಲೋಕಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು.
ವಿಧಾನಸಭೆ ಚುನಾವಣೆಯಲ್ಲಿ ಜ್ಯೋತಿ ಗಣೇಶ್ಗೆ ಟಿಕೆಟ್ ನೀಡಿದ್ದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಬೆಂಬಲಿಗರು ಅಸಮಾಧಾನಗೊಂಡಿದ್ದರು. ಸೊಗಡು ಶಿವಣ್ಣಗೆ ಲೋಕಸಭೆ ಚುನಾವಣೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಯಡಿಯೂರಪ್ಪ ಅವರು ಈ ನಿರೀಕ್ಷೆ ಹುಸಿಗೊಳಿಸಿದ್ದಾರೆ.
ಯಡಿಯೂರಪ್ಪ ಅವರು ತಮ್ಮ ಭಾಷಣ ಆರಂಭಿಸುವಾಗ ಮುಂದಿನ ಸಂಸದರೇ ಎಂದು ಜಿ.ಎಸ್.ಬಸವರಾಜು ಅವರನ್ನು ಉದ್ದೇಶಿಸಿ ಭಾಷಣ ಆರಂಭಿಸಿದ್ದರು. ಇದರಿಂದಾಗಿ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ಕೈ ತಪ್ಪಲಿದೆಯೇ? ಎಂಬ ಪ್ರಶ್ನೆ ಹುಟ್ಟುಕೊಂಡಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಮೊದಲು ಹಾಲನೂರು ಲೇಪಾಕ್ಷಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು. ನಂತರ ವೈ.ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಬಗ್ಗೆ ಇಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದರು.
'ಲೇಪಾಕ್ಷಿ ಅವರ ಜೊತೆ ನೇರವಾಗಿ ಮಾತನಾಡಿ ಮನವೊಲಿಸಿದ್ದೇನೆ ವೈ.ಎ.ನಾರಾಯಣ ಸ್ವಾಮಿ ಅವರನ್ನೇ ಹಾಲ್ನೂರು ಲೇಪಾಕ್ಷಿ ಅಂತಾ ಗೆಲ್ಲಿಸಿ ಎಂದು ಮನವಿ ಮಾಡುತ್ತೇನೆ. ಚುನಾವಣಾ ಪ್ರಚಾರ ಮಾಡಿಕೊಂಡು ಅವರು ಹಣ ಖರ್ಚು ಮಾಡಿದ್ದಾರೆ. ಅನಿವಾರ್ಯ ಕಾರಣಗಳಿಂದ ಅಭ್ಯಥಿ೯ ಬದಲಾವಣೆ ಮಾಡಬೇಕಾಯಿತು' ಎಂದರು.











Click it and Unblock the Notifications