ಶಿಕ್ಷಕರಿಗೂ ಗ್ರಾಮೀಣ ಸೇವೆ ಕಡ್ಡಾಯ : ಕಿಮ್ಮನೆ ರತ್ನಾಕರ್
ತುಮಕೂರು, ಜೂ. 08 : ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯಗೊಳಿಸಿರುವಂತೆ ಹೊಸದಾಗಿ ನೇಮಕವಾಗುವ ಶಿಕ್ಷಕರಿಗೂ ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ತುರುವೇಕೆರೆಯಲ್ಲಿ ಸೋಮವಾರ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಶಿಕ್ಷಕರಿಗೆ ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ವಿಧೇಯಕವನ್ನು ಜಾರಿಗೆ ತರುವ ಚಿಂತನೆ ಇದೆ. ಶಿಕ್ಷರಿಗೆ 5 ವರ್ಷಗಳ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆ ವಿಧೇಯಕದಲ್ಲಿ ಇರಲಿದೆ ಎಂದರು. [ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ]
ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ವಿಧೇಯಕವನ್ನು ಜಾರಿಗೆ ತರಲಾಗುತ್ತದೆ. ಕಾನೂನು ಇಲಾಖೆ ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿಯೇ ಈ ವಿಧೇಯಕವನ್ನು ಮಂಡನೆ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. [ಮೇಷ್ಟ್ರೇ, ಶಾಲಾ ಮಕ್ಕಳ ಗಲ್ಲ ಗಿಂಜ್ತೀರಾ? ಹುಷಾರ್!]
ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದವರು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಒಂದು ವರ್ಷಗಳ ಕಾಲ ಸೇವೆ ಸಲ್ಲಿಸುವ ವಿಧೇಯಕಕ್ಕೆ ರಾಷ್ಟ್ರಪತಿಗಳು ಇತ್ತೀಚಿಗೆ ಒಪ್ಪಿಗೆ ನೀಡಿದ್ದಾರೆ. ಇದೇ ಮಾದರಿಯಲ್ಲಿ ಶಿಕ್ಷಕರಿಗೂ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದರು.
ನಗರಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದಲ್ಲಿ ಶಿಕ್ಷಕರ ಕೊರತೆ ಇರುತ್ತದೆ ಈ ವಿಧೇಯಕ ಜಾರಿಗೆ ಬಂದರೆ ಗ್ರಾಮೀಣ ಸೇವೆ ಕಡ್ಡಾಯವಾಗುವುದರಿಂದ ಶಿಕ್ಷಕರ ಕೊರತೆ ಕಡಿಮೆಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.