ಬಿಎಸ್ ವೈ ಮಗ ವಿಜಯೇಂದ್ರ ಸಿದ್ದಗಂಗಾ ಮಠಕ್ಕೆ, ಸುದ್ದಿಗೆ ರೆಕ್ಕೆ
Recommended Video
ತುಮಕೂರು, ಮಾರ್ಚ್ 30: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮಗ ಬಿ.ವೈ.ವಿಜಯೇಂದ್ರ ಶುಕ್ರವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ವೇಳೆ ಬಿ.ವೈ.ವಿಜಯೇಂದ್ರ ಮಾತನಾಡಿ, ಮೈಸೂರಿನ ವರುಣಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಸುಭದ್ರ ಸರಕಾರ ನೀಡುವಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕೊಡುಗೆ ಶೂನ್ಯ. ಇನ್ನು ಕಾರ್ಯಕರ್ತರು ಒತ್ತಾಯಿಸಿದರೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದರು.
ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿಯು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಎಲ್ಲ ಕ್ಷೇತ್ರದಲ್ಲೂ ಹಿಂದುಳಿದ ವರ್ಗಗಳ ಬೆಂಬಲ ಯಡಿಯೂರಪ್ಪ ಅವರಿಗಿದೆ. ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯ ಅವರ ಸೋಲು ಖಚಿತ. ಹಳೇ ಮೈಸೂರು ಹಾಗೂ ಮೈಸೂರು ಭಾಗದಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗಳಿಸಲಿದೆ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲಾ ಸಮುದಾಯದವರನ್ನೂ ಒಟ್ಟಿಗೆ ಕೊಂಡೊಯ್ಯುವಲ್ಲಿ ಸಿದ್ದರಾಮಯ್ಯ ಎಡವಿದ್ದಾರೆ. ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಈಗಾಗಲೇ ಆಕ್ರೋಶ ಭುಗಿಲೆದ್ದಿದೆ. ಸಮಾಜವನ್ನು ಒಡೆಯುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.
ಯಡಿಯೂರಪ್ಪ ಅವರು ವೀರಶೈವ ಮತಗಳಿಂದ ಮಾತ್ರ ಗೆಲುವು ಸಾಧಿಸಲ್ಲ. ಎಲ್ಲಾ ಸಮುದಾಯಗಳೂ ಅವರೊಟ್ಟಿಗಿವೆ. ರಾಜ್ಯದಲ್ಲಿ ಅಭಿವೃದ್ಧಿಯ ವಿಚಾರದ ಜೊತೆಗೆ ಬೇರೆ ವಿಷಯಗಳು ಕೂಡ ಚರ್ಚೆಯಾಗುತ್ತಿವೆ. ನಾನು ಸ್ಪರ್ಧೆ ಮಾಡಬೇಕೆನ್ನುವುದು ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಈ ಕುರಿತು ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಸ್ಪರ್ಧೆಯ ಕುರಿತು ಈಗಲೇ ನಾನೇನೂ ಹೇಳುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.