ಕರಾವಳಿ ಜಿಲ್ಲೆಗಳಲ್ಲಿ ಹೊಸ 1348 ಕಿಂಡಿ ಅಣೆಕಟ್ಟುಗಳ ನಿರ್ಮಾಣ
ಉಡುಪಿ, ನವೆಂಬರ್ 24: ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಚಿಂತನೆ ನಡೆಸಿದ್ದು, ಈ ಯೋಜನೆಯಡಿ 1348 ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಮಾಧುಸ್ವಾಮಿ ತಿಳಿಸಿದರು.
ಉಡುಪಿಯ ಕಾಪುವಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, "ಈ ಯೋಜನೆಗೆ 3,976 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಕುರಿತು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯುವ ಸಾಧ್ಯತೆ ಇದೆ" ಎಂದು ಹೇಳಿದರು.
ಬೆಂಗಳೂರು ಗಲಭೆ ಕುರಿತು ಸಚಿವ ಮಾಧುಸ್ವಾಮಿ ಮಹತ್ವದ ಹೇಳಿಕೆ!
ಸಮುದ್ರ ಸೇರುವ ನೇತ್ರಾವತಿ ನದಿ ಮತ್ತು ಕರಾವಳಿ ಜಿಲ್ಲೆಗಳ ವಿವಿಧ ನದಿ ತೊರೆಗಳ ನೀರನ್ನು ಇಲ್ಲೇ ಉಳಿಸಿಕೊಂಡು ಆ ನೀರನ್ನು ನಮ್ಮ ರೈತರಿಗೆ ಒದಗಿಸಿಕೊಡುವ ಉದ್ದೇಶದೊಂದಿಗೆ ಈ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆ ಫಲ ನೀಡುವ ನಿರೀಕ್ಷೆಯಿದೆ ಎಂದರು.
ಜೊತೆಗೆ ಜಿಲ್ಲೆಯಲ್ಲಿ ನಿರ್ವಹಣೆ ಕೊರತೆಯಿಂದಾಗಿ ನಿಷ್ಕ್ರಿಯಗೊಂಡಿರುವ ಕಿಂಡಿ ಅಣೆಕಟ್ಟುಗಳ ದುರಸ್ತಿಗೆ ಕೂಡಲೇ ನಾಲ್ಕು ಕೋಟಿ ರೂಪಾಯಿ ಅನುದಾನವನ್ನು ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು. ಉಡುಪಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ ಉಪಸ್ಥಿತರಿದ್ದರು.